ಬಳ್ಳಾರಿ ರಸ್ತೆ ಅಗಲೀಕರಣ ಕಾಮಗಾರಿ | ನೆರವು ನೀಡುವ ಕುರಿತು ಪ್ರಮಾಣ ಪತ್ರ ಸಲ್ಲಿಸಿ: ಬಿಬಿಎಂಪಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು, ಅ.18: ಬೆಂಗಳೂರು ನಗರದಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿ ರಸ್ತೆ ಅಗಲೀಕರಣ ಕುರಿತಂತೆ ಬಿಬಿಎಂಪಿ ಯಾವ ರೀತಿಯಲ್ಲಿ ಸಹಕಾರ ಹಾಗೂ ನೆರವು ನೀಡಬಹುದು ಎಂಬುದರ ಕುರಿತು ಮುಂದಿನ 2 ವಾರಗಳಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕೆಂದು ಹೈಕೋರ್ಟ್ ಬಿಬಿಎಂಪಿಗೆ ಸೂಚನೆ ನೀಡಿದೆ.
ಬಳ್ಳಾರಿ ರಸ್ತೆ ಅಗಲೀಕರಣ ಕಾಮಗಾರಿ ಕೈಗೊಳ್ಳದಿರುವ ಸರಕಾರದ ಕ್ರಮವನ್ನು ಪ್ರಶ್ನಿಸಿ ಸಮರ್ಪಣಾ ಸಾಮಾಜಿಕ-ಸಾಂಸ್ಕøತಿಕ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಲೆ ನೇತೃತ್ವದ ವಿಭಾಗೀಯ ನ್ಯಾಯಪೀಠ, ಈ ಸೂಚನೆ ನೀಡಿದೆ.
ವಿಚಾರಣೆ ವೇಳೆ ಸರಕಾರದ ಪರ ವಕೀಲರು, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಲ್ಲಿಸಿರುವ ಪ್ರಮಾಣ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ನಗರಾಭಿವೃದ್ಧಿ ಇಲಾಖೆ ಸಲ್ಲಿಸಿರುವ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಯಾವ ರೀತಿಯಲ್ಲಿ ಸಹಕಾರ ಮತ್ತು ನೆರವು ನೀಡಲಿದೆ ಎಂಬುದರ ಕುರಿತು ಸಂಪೂರ್ಣ ವಿವರವುಳ್ಳ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಸೂಚನೆ ನೀಡಿತು.
ರಸ್ತೆ ಅಗಲೀಕರಣಕ್ಕಾಗಿ 58 ಮರಗಳನ್ನು ಸ್ಥಳಾಂತರ ಮಾಡಬೇಕು ಎಂಬುದಾಗಿ ಹೇಳಲಾಗಿದೆ. ಆದರೆ, ಈ ಸಂಬಂಧ ಯಾವ ರೀತಿಯಲ್ಲಿ ಮರಗಳ ಸ್ಥಳಾಂತರ ಕಾರ್ಯ ಮಾಡಲಾಗುವುದು ಎಂಬುದಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಬೇಕು ಎಂದು ನ್ಯಾಯಪೀಠ ಬಿಬಿಎಂಪಿ ಪರ ವಕೀಲರಿಗೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ಈ ವೇಳೆ ಬಿಬಿಎಂಪಿ ಪರ ವಕೀಲ ಶ್ರೀನಿಧಿ ಅವರು, ಮದುವೆ ಸಮಾರಂಭಗಳಿಗೆ ಬರುವ ವಾಹನಗಳನ್ನು ಮುಖ್ಯರಸ್ತೆ ಪ್ರವೇಶಿಸದಂತೆ ಕ್ರಮ ವಹಿಸಲಾಗುತ್ತಿದೆ. ಅಲ್ಲದೆ, ಅರಮನೆ ಮೈದಾನಕ್ಕೆ ನಾಲ್ಕು ದ್ವಾರಗಳಿದ್ದು, ಆಂತರಿಕ ರಸ್ತೆಗಳ ಮೂಲಕ ಮದುವೆ ಸಮಾರಂಭಗಳ ಪ್ರವೇಶಕ್ಕೆ ವ್ಯವಸ್ಥೆ ಮಾಡುವ ಸಂಬಂಧ ಪಾಲಿಕೆ ಹಿರಿಯ ಅಧಿಕಾರಿಗಳು ಚರ್ಚೆಗಳನ್ನು ನಡೆಸಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.







