ಹಿಜಾಬ್ ತೀರ್ಪು ನೀಡಿದ್ದ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಪ್ರಕರಣ: ಆರೋಪಿಗಳಿಗೆ ಹೈಕೋರ್ಟ್ ನಿಂದ ಜಾಮೀನು
ಬೆಂಗಳೂರು, ಅ.25: ಹಿಜಾಬ್ ನಿಷೇಧಿಸಿ ಆದೇಶ ನೀಡಿದ್ದ ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ್ದ ತಮಿಳುನಾಡು ಮೂಲದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ (High Court of Karnataka) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರಕರಣ ಸಂಬಂಧ ರಹಮತುಲ್ಲಾ ಹಾಗೂ ಜಮಾಲ್ ಮೊಹಮದ್ ಉಸ್ಮಾನಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.
ರಹಮತುಲ್ಲಾ ಹಾಗೂ ಜಮಾಲ್ ಅವರು ವೈಯಕ್ತಿಕವಾಗಿ ತಲಾ ಒಂದು ಲಕ್ಷ ರೂ.ಮೊತ್ತದ ಬಾಂಡ್, ಇಬ್ಬರ ಭದ್ರತೆ ನೀಡಬೇಕು. ವಿಚಾರಣೆಯ ಎಲ್ಲ ದಿನದಂದು ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಾಗಬೇಕು. ತನಿಖೆಗೆ ಸಹಕರಿಸಬೇಕು. ಯಾವುದೇ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು. ಪ್ರಾಸಿಕ್ಯೂಷನ್ ಸಾಕ್ಷಿಯನ್ನು ನಾಶಪಡಿಸಬಾರದು ಎಂದು ನ್ಯಾಯಪೀಠವು ಆದೇಶದಲ್ಲಿ ಉಲ್ಲೇಖಿಸಿದೆ.
ಪ್ರಕರಣವೇನು: ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ನ ಅಂದಿನ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಜೆ ಎಂ ಖಾಜಿ ಅವರ ನೇತೃತ್ವದ ತ್ರಿಸದಸ್ಯ ಪೀಠವು ಮಾ.15ರಂದು ತೀರ್ಪು ಪ್ರಕಟಿಸಿತ್ತು.
ತಮಿಳುನಾಡು ಮೂಲದ ತೌಹೀದ್ ರಹಮತುಲ್ಲಾ ಅವರು ಮಧುರೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹಿಜಾಬ್ ಉಲ್ಲೇಖಿಸಿ ಪರೋಕ್ಷವಾಗಿ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಮತ್ತೊಂದು ಕಡೆ ಹೈಕೋರ್ಟ್ ನ್ಯಾಯಮೂರ್ತಿಗಳು, ಪ್ರಧಾನಿ ಮೋದಿ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ್ದ ಟಿಎನ್ಟಿಜೆ ವಕ್ತಾರ ಜಮಾಲ್ ಮೊಹಮದ್ ಉಸ್ಮಾನಿ ಅವರನ್ನು ತಾಂಜಾಪೂರ ಪೊಲೀಸರು ಬಂಧಿಸಿದ್ದರು. ಈ ಇಬ್ಬರ ಆರೋಪಿಗಳ ವಿರುದ್ಧ ಬೆಂಗಳೂರಿನ ವಿಧಾನಸೌಧ ಠಾಣೆಯಲ್ಲಿ ಐಪಿಸಿ ಸೆಕ್ಷನ್ಗಳ ಅಡಿ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಲಾಗಿತ್ತು.