ಅ.28ರಂದು ಉಡುಪಿ ಜಿಲ್ಲೆಯಾದ್ಯಂತ ಕೋಟಿ ಕಂಠ ಗಾಯನ

ಉಡುಪಿ, ಅ.27: ಈ ಬಾರಿಯ 67ನೇ ಕನ್ನಡ ರಾಜ್ಯೋತ್ಸವವನ್ನು ನಾಡಿನಾ ದ್ಯಂತ ಹೆಚ್ಚಿನ ಸಂಭ್ರಮ ಉತ್ಸಾಹದಿಂದ ಅತ್ಯಂತ ಶಿಷ್ಠವಾಗಿ ಆಚರಿಸಲು ಉದ್ದೇಶಿಸಿದ್ದು, ಒಂದು ಕೋಟಿಗೂ ಹೆಚ್ಚು ಜನರಿಂದ ಏಕಕಾಲದಲ್ಲಿ, ಏಕಕಂಠ ದಲ್ಲಿ ಆಯ್ದ 6 ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ನಾಳೆ ನಡೆಯಲಿದೆ. ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿ ಯಿಂದ ಅ.28ರ ಶುಕ್ರವಾರ ಬೆಳಗ್ಗೆ 11:00 ಗಂಟೆಗೆ ಜಿಲ್ಲೆಯ ವಿವಿದೆಡೆಗಳಲ್ಲಿ ನಡೆಯುವ ಕೋಟಿ ಕಂಠ ಗಾಯನದ ಪ್ರಮುಖ ಕಾರ್ಯಕ್ರಮ ಮಲ್ಪೆಯ ಸಮುದ್ರ ಮಧ್ಯದಲ್ಲಿ ಸುಮಾರು 130 ಬೋಟುಗಳಲ್ಲಿ 4000 ಜನರೊಂದಿಗೆ ನಡೆಯಲಿದೆ.
ಅದೇ ರೀತಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಪೊಲೀಸ್ ಬ್ಯಾಂಡ್ ನೊಂದಿಗೆ 5000 ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು, ಮಣಿಪಾಲ ಗ್ರೀನ್ಸ್ನಲ್ಲಿ 5000 ಮಂದಿ ಡಾಕ್ಟರ್ಗಳು ಮತ್ತು ನರ್ಸಿಂಗ್ ವಿದ್ಯಾರ್ಥಿಗಳು ಬಿಳಿ ಕೋಟ್ ಹಾಗೂ ಸ್ಟೆತೋಸ್ಕೋಪ್ ಧರಿಸಿ ಭಾಗವಹಿಸಲಿದ್ದಾರೆ.
ನಿಟ್ಟೆ ವಿಶ್ವ ವಿದ್ಯಾನಿಲಯದಲ್ಲಿ 3000 ವಿದ್ಯಾರ್ಥಿಗಳು, ಮಣಿಪಾಲ ಕೈಗಾರಿಕಾ ಪ್ರದೇಶ ದಲ್ಲಿ 3000 ಮಂದಿ ಕಾರ್ಮಿಕರು, ಬೀಡನಗುಡ್ಡೆಯ ಮಹಾತ್ಮಗಾಂಧೀ ಬಯಲು ರಂಗ ಮಂದಿರಲ್ಲಿ ಕಟ್ಟಡ ಕಾರ್ಮಿಕರು,ಉಡುಪಿ ನಗರಸಭೆಯ ವತಿ ಯಿಂದ ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ನಲ್ಲಿ, ಉಡುಪಿ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ, ಕಾರ್ಕಳದ ಅತ್ತೂರು ಚರ್ಚ್, ಚತುರ್ಮುಖ ಬಸದಿ, ಗೊಮ್ಮಟ ಬೆಟ್ಟ, ಆನೆಕೆರೆ ಬಸದಿ, ವರಂಗ ಬಸದಿ, ಕಾಪು ಜೂನಿಯರ್ ಕಾಲೇಜು ಮೈದಾನ, ಬಂಟಕಲ್ ಇಂಜಿನಿಯರ್ ಕಾಲೇಜಿನಲ್ಲೂ ವಿದ್ಯಾರ್ಥಿಗಳು ಸಾಮೂಹಿಕವಾಗಿ ಕೋಟಿ ಕಂಠ ಗಾಯನದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕುಂದಾಪುರ ಜೂನಿಯರ್ ಕಾಲೇಜು ಮೈದಾನ, ಬೈಂದೂರು ಗಾಂಧೀ ಮೈದಾನ, ಜಿಲ್ಲೆಯ ಎಲ್ಲಾ 155 ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ, ಗ್ರಂಥಾಲಯಗಳಲ್ಲಿ, ಶಾಲಾ ಕಾಲೇಜುಗಳಲ್ಲಿ, ರೈಲ್ವೆ ನಿಲ್ದಾಣ, ಆಟೋ ನಿಲ್ದಾಣ, ಬಸ್ ನಿಲ್ದಾಣ, ಧಾರ್ಮಿಕ ಕೇಂದ್ರಗಳಲ್ಲಿ, ಬ್ಯಾಂಕ್, ಎಲ್ಐಸಿ ಕಚೇರಿ ಗಳಲ್ಲಿ, ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲೂ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ನಾಡಗೀತೆ ಜಯ ಭಾರತ ಜನನಿಯ ತನುಜಾತೆ, ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂನತ ವಿದ್ಯಾಚೇತನ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಗೀತೆಗಳ ಗಾಯನ ನಡೆಯಲಿದ್ದು, ಕೊನೆಯಲ್ಲಿ ಸಂಕಲ್ಪ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.







