ಮೀಸಲಾತಿ ದೇವೇಗೌಡರ ಕೊಡುಗೆ, ಚರ್ಚೆಗೆ ನಾನು ಸಿದ್ಧ: ಕುಮಾರಸ್ವಾಮಿ
''ರಾಷ್ಟ್ರೀಯ ಪಕ್ಷಗಳ ಪೂರ್ವ ಸಮೀಕ್ಷೆಯಲ್ಲಿ ಜೆಡಿಎಸ್ ಗೆ...''
ಬೆಂಗಳೂರು, ಅ.28: ಮೀಸಲಾತಿ ವಿಚಾರದಲ್ಲಿ ಕೆಲವರು ರಾಜಕೀಯ ಮಾಡುತ್ತಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಎಸ್ಟಿ ಸಮುದಾಯದವರಿಗೆ ಕೊಟ್ಟಿರುವ ಮೀಸಲಾತಿ ಬಗ್ಗೆ ಸಾರ್ವಜನಿಕವೇದಿಕೆಯಲ್ಲಿ ಚರ್ಚೆ ಮಾಡಲು ನಾನು ಸಿದ್ಧನಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಶುಕ್ರವಾರ ನಗರದಲ್ಲಿರುವ ಜೆಡಿಎಸ್ ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಹಾಗೂ ರಾಷ್ಟ್ರೀಯ ಪರಿಷತ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಳ ಮಟ್ಟದ ಹಾಗೂ ದುರ್ಬಲ ಸಮುದಾಯಗಳನ್ನು ಗುರುತಿಸಿ ಅವರಿಗೆ ಶಕ್ತಿ ತುಂಬುವ ಕೆಲಸವನ್ನು ದೇವೇಗೌಡರು ಮಾಡಿದರು. ಮೀಸಲು ಸೌಲಭ್ಯ ಕೊಟ್ಟು ಮೇಲೆತ್ತುವ ಕಾರ್ಯ ಮಾಡಿದರು. ಈ ಬಗ್ಗೆ ಚರ್ಚೆ ನಡೆಯಲು ಕೆಲವರು ಬಿಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಜೆಡಿಎಸ್ ಅಧಿಕಾರಕ್ಕೆ ಬರುತ್ತದೆ: ಜೆಡಿಎಸ್ಗೆ 20-25 ಸ್ಥಾನ ಬರುತ್ತದೆ ಎಂದು ಹೇಳುತ್ತಿದ್ದಾರೆ. ಆದರೆ ಅದನ್ನು ಬಿಟ್ಟುಬಿಡಿ. ನನ್ನ ಜೊತೆ ನೀವು ಕೈ ಜೋಡಿಸಿ ಜನರ ಮುಂದೆ ನಮ್ಮ ಯೋಜನೆ ಬಗ್ಗೆ ತಿಳಿಸಿ. ನೀವು ಎಷ್ಟು ಜನರ ಮುಂದೆ ಹೋಗುತ್ತೀರೋ ಅಷ್ಟು ನಮ್ಮ ಪಕ್ಷಕ್ಕೆ ಒಳ್ಳೆಯ ಫಲಿತಾಂಶ ಬರುತ್ತದೆ. ರಾಷ್ಟ್ರೀಯ ಪಕ್ಷಗಳ ಪೂರ್ವ ಸಮೀಕ್ಷೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ. ಈ ರಾಜ್ಯದಲ್ಲಿ ಸ್ವಾತಂತ್ರ್ಯವಾಗಿ ಅಧಿಕಾರಕ್ಕೆ ಬರುತ್ತೇವೆ ಎಂದು ಕಾರ್ಯಕರ್ತರಿಗೆ ಮತ್ತು ಮುಖಂಡರಿಗೆ ಅವರು ಸಲಹೆ ನೀಡಿದರು.
ಕರ್ನಾಟಕ ಮತ್ತು ಕೇರಳದಲ್ಲಿ ನಮ್ಮ ಶಕ್ತಿ ಉಳಿಸಿಕೊಂಡು ಬಂದಿದ್ದೇವೆ. 13 ರಾಜ್ಯಗಳ ರಾಜ್ಯಾಧ್ಯಕ್ಷರು ಈ ಸಭೆಯಲ್ಲಿ ಭಾಗವಹಿಸಿರುವುದು ಸಂತಸ ಉಂಟು ಮಾಡಿದೆ. ಸಮಸ್ಯೆ ಏನೇ ಇದ್ದರೂ ತಮ್ಮ ತಮ್ಮ ರಾಜ್ಯಗಳಲ್ಲಿ ಪಕ್ಷ ಉಳಿಸುವ ಕೆಲಸವನ್ನು ನಾಯಕರು ಮಾಡಿದ್ದಾರೆ ಎಂದು ಅವರು ಹೇಳಿದರು.