ಸಾಲಿಗ್ರಾಮ: ಉಚಿತ ದಂತ ತಪಾಸಣೆ, ಚಿಕಿತ್ಸಾ ಶಿಬಿರ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಉಡುಪಿ, ರೋಟರಿ ಕ್ಲಬ್ ಕೋಟ, ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್, ಪಬ್ಲಿಕ್ ಹೆಲ್ತ್ ವಿಭಾಗ ಮಣಿಪಾಲ, ಪ್ರಾಥಮಿಕ ಆರೋಗ್ಯ ಕೇಂದ್ರ ಸಾಲಿಗ್ರಾಮ ಇವರ ಸಹಯೋಗದೊಂದಿಗೆ ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮದಡಿ ಉಚಿತ ದಂತ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ಶುಕ್ರವಾರ ನಡೆಯಿತು.
ಮಣಿಪಾಲ ದಂತ ವಿಭಾಗದ ಮುಖ್ಯಸ್ಥ ಡಾ.ರಾಮದಾಸ್ ಕಾರ್ಯಕ್ರಮ ಉದ್ಘಾಟಿಸಿದರು. ಸಾಲಿಗ್ರಾಮ ಪಟ್ಟಣ ಪಂಚಾಯತ್ನ ಸುಲತಾ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ ಬಾಯಿ ಮತ್ತು ದಂತ ಆರೋಗ್ಯದ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ಆಸ್ಪತ್ರೆಯ ದಂತ ವಿಭಾಗದ ನೋಡೆಲ್ ಅಧಿಕಾರಿ ಡಾ.ಬಿಸು ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ದಂತ ಆರೋಗ್ಯಾಧಿಕಾರಿ ಡಾ.ಪ್ರದೀಪ್ ಪೂಜಾರಿ, ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ದಂತ ಆರೋಗ್ಯಾಧಿಕಾರಿ ಡಾ.ಗಾಯತ್ರಿ, ಎನ್ಸಿಡಿ ವೈದ್ಯಾಧಿಕಾರಿ ಡಾ.ಶರಣ್, ಕಾರ್ಕಡ ಶಾಲಾ ಮುಖ್ಯೋಪಾಧ್ಯಾಯ ಪ್ರಭಾಕರ ಕಾಮತ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಹಾಗೂ ಇತರರು ಉಪಸ್ಥಿತರಿದ್ದರು.





