ಬಿಜೆಪಿ ಸರಕಾರದಿಂದ ಹಿಂದುಳಿದ ವರ್ಗಗಳ ನಿರ್ಲಕ್ಷ್ಯ: ಮಧು ಬಂಗಾರಪ್ಪ ಆರೋಪ

ಮಂಗಳೂರು: ರಾಜ್ಯ ಬಿಜೆಪಿ ಸರಕಾರವು ಹಿಂದುಳಿದ ವರ್ಗವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಹಿಂದುತ್ವದ ಅಜೆಂಡಾದ ಮೂಲಕ ಹಿಂದುಳಿದ ವರ್ಗಗಳ ಏಳಿಗೆಗೆ ಶ್ರಮಿಸುವುದಾಗಿ ಹೇಳುವ ಬಿಜೆಪಿ ಸರಕಾರವು ಕನಿಷ್ಟ ಹಿಂದುಳಿದ ವರ್ಗಗಳ ದೇವಸ್ಥಾನಕ್ಕೂ ಅನುದಾನ ನೀಡಿಲ್ಲ ಎಂದು ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ ಆರೋಪಿಸಿದ್ದಾರೆ.
ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಹಿಂದುಳಿದ ವರ್ಗಗಳ ಸಮಾವೇಶ ನಡೆಸುವ ಯೋಗ್ಯತೆ ಇಲ್ಲ. ಹಿಂದುಳಿದ ವರ್ಗಕ್ಕೆ ಒಂದು ಮನೆಯನ್ನು ನಿರ್ಮಿಸಿಕೊಟ್ಟಿಲ್ಲ. ಕನಿಷ್ಠ ಈ ಹಿಂದಿನ ಕಾಂಗ್ರೆಸ್ ಸರಕಾರದ ಯೋಜನೆಗಳನ್ನು ಮುಂದುವರಿಸಿದರೂ ಹಿಂದುಳಿದ ವರ್ಗಗಳ ಅಭಿವೃದ್ಧಿಯಾಗುತ್ತಿತ್ತು ಎಂದರು.
ಧರ್ಮ ಸಂಘರ್ಷವೇ ಬಿಜೆಪಿಯ ಹಿಡನ್ ಅಜೆಂಡಾ ಆಗಿದೆ. ಹಾಗಾಗಿ ಜನರು ಕಾಂಗ್ರೆಸ್ ಸರಕಾರವನ್ನು ಬಯಸುತ್ತಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಬಿಜೆಪಿ ಕಾರ್ಯಕರ್ತರೇ ನಾಯಕರು, ಸರಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ವಿನಾ ಕಾರಣ ಶಾಂತಿ ಕದಡುವ ಬಿಜೆಪಿಯ ಕುತಂತ್ರ ಜನತೆಗೆ ಅರ್ಥವಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು.
ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಕರಾವಳಿಯಲ್ಲೇ ಡಿಸೆಂಬರ್ ಅಥವಾ ಜನವರಿಯಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಾವೇಶ ಆರಂಭಿಸಲಿದೆ. ಬಳಿಕ ರಾಜ್ಯಮಟ್ಟದ ಸಮಾವೇಶ ಆಯೋಜಿಸಲಾಗುವುದು. ಈಗಾಗಲೇ ಹಿಂದುಳಿದ ವರ್ಗಗಳ ಘಟಕ ರಚಿಸಿ ಪದಾಧಿಕಾರಿಗಳ ನೇಮಕ ಮಾಡಲಾಗುತ್ತಿದೆ ಎಂದರು.
ರಾಜ್ಯದಲ್ಲಿ 2ಎ ವರ್ಗಕ್ಕೆ ಜಾತಿ ಸೇರ್ಪಡೆ ಕುರಿತು ಪ್ರಬಲ ಹೋರಾಟ ನಡೆಯುತ್ತಿದೆ. ಇದರಿಂದ ಹಿಂದುಳಿದ ವರ್ಗಕ್ಕೆ ಹಿನ್ನಡೆಯಾಗಲಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಒಬ್ಬರ ಸವಲತ್ತು ಕಿತ್ತುಕೊಂಡು ಮತ್ತೊಬ್ಬರಿಗೆ ನೀಡುವುದು ಸರಿಯಲ್ಲ. ಇದೊಂದು ಸೂಕ್ಷ್ಮ ವಿಚಾರವಾಗಿದ್ದು, ಯಾರಿಗೂ ತೊಂದರೆಯಾಗದಂತೆ ಮೀಸಲಾತಿ ಕೇಳಬೇಕು ಎಂದರು.
ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಪುಟ್ಟಸ್ವಾಮಿ ಗೌಡ ಮಾತನಾಡಿ, ಯುಪಿಎ ಅಧಿಕಾರದಲ್ಲಿ ಕಾರ್ಖಾನೆಗಳನ್ನು ಮುಚ್ಚಲು ಕಾರ್ಮಿಕರ ಅನುಮತಿ ಪಡೆದೇ ಮುಂದಿನ ಹೆಜ್ಜೆ ಇಡಲಾಗುತ್ತಿತ್ತು. ಆದರೆ ಈಗ ಪ್ರಧಾನಿ ನರೇಂದ್ರ ಮೋದಿ ಬಂಡವಾಳ ಶಾಹಿಗಳ, ದೊಡ್ಡ ಕಂಪನಿಗಳಿಗೆ ನೆರವಾಗಲು ಇತರೆ ಕೈಗಾರಿಕೆಗಳನ್ನು ಮುಚ್ಚಿಸುತ್ತಿದ್ದಾರೆ. ಇದರಿಂದ ಲಕ್ಷಾಂತರ ಮಂದಿ ಕಾರ್ಮಿಕರು ಬೀದಿ ಪಾಲಾಗುವಂತಾಗಿದೆ. ದೇಶದಲ್ಲಿ 18 ಲಕ್ಷ ಕೈಗಾರಿಕೆಗಳು ಮುಚ್ಚಲ್ಪಟ್ಟಿವೆ. 14 ಕೋಟಿ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ. ಇವರೆಲ್ಲರಿಗೆ ಪುನರ್ವಸತಿ ಕಲ್ಪಿಸಲು ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ, ಪಕ್ಷದ ಮುಖಂಡರಾದ ಅಬ್ದುಲ್ ರಹ್ಮಾನ್, ಲಾರೆನ್ಸ್, ವಿಶ್ವಾಸ್ದಾಸ್ ಉಪಸ್ಥಿತರಿದ್ದರು.