ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವ ತನಕ ಹೋರಾಟ: ಕಾಗೋಡು ತಿಮ್ಮಪ್ಪ

ಶಿವಮೊಗ್ಗ, ನ.15:ಅರು ದಶಕಗಳ ಹಿಂದೆ ನಾಡಿಗೆ ಬೆಳಕು ಕೊಡಲು ಬದುಕು ತ್ಯಾಗ ಮಾಡಿದ್ದ ಶರಾವತಿ ಜಲವಿದ್ಯುತ್ ಯೋಜನೆ ಸಂತ್ರಸ್ತರ ಪುನರ್ವಸತಿ ಯೋಜನೆಯ ಅರಣ್ಯ ಭೂಮಿ ಡಿ-ನೋಟಿಫಿಕೇಶನನ್ನು ರದ್ದುಪಡಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು.ಶರಾವತಿ ಮುಳುಗಡೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಬೇಕು. ಬಾಕಿ ಉಳಿದಿರುವ ಸರ್ಕಾರಿ ಆದೇಶಕ್ಕೆ ಕೇಂದ್ರ ಸರ್ಕಾರದ ಅನುಮತಿ ಪಡೆಯಬೇಕು ಸೇರಿದಂತೆ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಶರಾವತಿ ಮುಳುಗಡೆ ಸಂತ್ರಸ್ತರ ಕಾಂಗ್ರೆಸ್ ಜಾಗೃತ ಸಮಿತಿ ವತಿಯಿಂದ ನಗರದ ಈಡಿಗರ ಭವನದಲ್ಲಿ ಆಯೋಜಿಸಿದ್ದ ಶರಾವತಿ ಮುಳುಗಡೆ ಸಂತ್ರಸ್ಥರ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮಾತನಾಡಿ,ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂ ಹಕ್ಕಿನ ಹೋರಾಟಕ್ಕೆ ಕೈ ಜೋಡಿಸುವುದಾಗಿ ತಿಳಿಸಿದರು.
ಶರಾವತಿ ಮುಳುಗಡೆ ಸಂತ್ರಸ್ಥರ ಪನರ್ವಸತಿಗಾಗಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 9 ಸಾವಿರಕ್ಕೂ ಹೆಚ್ಚು ಭೂಮಿಯನ್ನು ಡಿನೋಟಿಫಿಕೇಷನ್ ಮಾಡಲಾಗಿತ್ತು.ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ 1 ಸಾವಿರ ಕುಟುಂಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗಿತ್ತು.ಆದರೆ ಪರಿಸರವಾದಿಯೊಬ್ಬರು ಡಿನೋಟಿಫಿಕೇಷನ್ಗೆ ಕೇಂದ್ರ ಸರ್ಕಾರದ ಅನುಮತಿ ಪಡೆದಿಲ್ಲ ನ್ಯಾಯಾಲಯದಲ್ಲಿ ದಾವೆ ಹೂಡಿದ ಪರಿಣಾಮ ಸಾವಿರಾರು ರೈತ ಕುಟುಂಬಗಳು ಭೂ ವಂಚಿತರಾಗಿದ್ದಾರೆ.ಶರಾವತಿ ಮುಳುಗಡೆ ಸಂತ್ರಸ್ತರ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಹೇಳಿದರು.
ಮಾಜಿ ಶಾಸಕ ಮಧು ಬಂಗಾರಪ್ಪ ಮಾತನಾಡಿ, ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವ ತನಕ ಹೋರಾಟ ನಡೆಸಲಾಗುವುದು.ಶರಾವತಿ ಮುಳುಗಡೆ ಸಂತ್ರಸ್ಥರ ಭೂ ಹಕ್ಕಿನ ವಿಚಾರವನ್ನು ಈ ಬಾರಿಯ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಸೇರಿಸುತ್ತೇನೆ.ಜನರಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದರು.
ನ.28 ರಂದು ಆಯನೂರಿನಿಂದ ಶಿವಮೊಗ್ಗದ ತನಕ ಬೃಹತ್ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿದೆ. ಪ್ರತಿಭಟನಾ ಮೆರವಣಿಗೆಗೆ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಅಂದು ಸಂಜೆ 4 ಗಂಟೆಗೆ ಬೃಹತ್ ಪ್ರತಿಭಟನಾ ಸಭೆಯನ್ನು ಆಯೋಜಿಸಲಾಗಿದೆ.ಸಭೆಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ,ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ,ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಸೇರಿದಂತೆ ರಾಜ್ಯ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ತೀ.ನಾ ಶ್ರೀನಿವಾಸ್ ಮಾತನಾಡಿ,ಕಳೆದ ಆರು ದಶಕಗಳ ಸಮಸ್ಯೆಗೆ ತಾರ್ಕಿಕ ಅಂತ್ಯ ಕಾಣಿಸಬೇಕು.ಡಬಲ್ ಇಂಜಿನ್ ಸರ್ಕಾರಕ್ಕೆ ಶರಾವತಿ ಮುಳುಗಡೆ ಸಂತ್ರಸ್ಥರ ಬಗ್ಗೆ ಕಾಳಜಿ ಇಲ್ಲ.ಹೈಕೋರ್ಟ್ನಲ್ಲಿ ಸರಿಯಾಗಿ ವಾದ ಮಂಡಿಸಿದ ಕಾರಣ ಇಂದು ಭೂ ವಂಚಿತರಾಗಬೇಕಾಗಿದೆ ಎಂದು ದೂರಿದರು.
ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮದನ್ ಗೋಪಾಲ್ ವರದಿಯನ್ನು ಯಥವತ್ತಾಗಿ ಅನುಷ್ಟಾನಗೊಳಿಸಬೇಕು.ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಭೂಮಿ ಹಂಚಿಕೆ ಮಾಡಲು 98 ಸರ್ಕಾರಿ ಆದೇಶ ಹೊರಡಿಸಿದೆ.ಇದರಲ್ಲಿ 56 ಅಧಿಸೂಚನೆಯನ್ನು ರದ್ದು ಮಾಡಿ ಆದೇಶಿಸಿದ ರಾಜ್ಯ ಸರ್ಕಾರದ ನಡೆ ರೈತ ವಿರೋಧಿಯಾಗಿದೆ.ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದ ನಿಯೋಗ ಕೇಂದ್ರ ಸಚಿವರನ್ನು ಭೇಟಿ ಮಾಡಿ 56 ಅಧಿಸೂಚನೆಯಲ್ಲಿ 26 ಅಧಿಸೂಚನೆಗೆ ಮಾತ್ರ ಅನುಮತಿ ಕೇಳಿದ್ದಾರೆ.ಬಾಕಿ ಉಳಿದ 30 ಅಧಿಸೂಚನೆಗೆ ಅನುಮತಿ ಬೇಡವಾ ಎಂದು ಪ್ರಶ್ನಿಸಿದರು.
ಸಭೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್,ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣ,ಕೆ.ಬಿ ಪ್ರಸನ್ನ ಕುಮಾರ್,ಶರಾವತಿ ಮುಳುಗಡೆ ಸಂತ್ರಸ್ತರ ಕಾಂಗ್ರೆಸ್ ಜಾಗೃತ ಸಮಿತಿ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್ ಸುಂದರೇಶ್,ಮುಖಂಡರಾದ ರಾಜನಂದಿನಿ,ರಮೇಶ್ ಹೆಗಡೆ,ಜಿ.ಡಿ ಮಂಜುನಾಥ್,ಶ್ರೀನಿವಾಸ್ ಕರಿಯಣ್ಣ ಸೇರಿದಂತೆ ಹಲವರಿದ್ದರು.







