ಬಳಿಗಾರ್ ನಡೆ ಕಮಲದ ಕಡೆ?
ಬಿಎಸ್ ವೈ - ಬೊಮ್ಮಾಯಿ ಜೊತೆ ಮಾತುಕತೆ ಫಲಪ್ರದ: ಶೀಘ್ರದಲ್ಲೇ ಬಳಿಗಾರ್ ಗೆ ನಿಗಮ ಮಂಡಳಿ ಭಾಗ್ಯ
![ಬಳಿಗಾರ್ ನಡೆ ಕಮಲದ ಕಡೆ? ಬಳಿಗಾರ್ ನಡೆ ಕಮಲದ ಕಡೆ?](https://www.varthabharati.in/sites/default/files/images/articles/2022/11/16/356663-1668611975.jpg)
ಶಿವಮೊಗ್ಗ: ಜೆಡಿಎಸ್ ಮುಖಂಡ ಹೆಚ್.ಟಿ ಬಳಿಗಾರ್ ಜೆಡಿಎಸ್ (JDS) ತೊರೆದು ಬಿಜೆಪಿ (BJP) ಕದ ತಟ್ಟಿದ್ದಾರೆ. ಶೀಘ್ರದಲ್ಲೇ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ಖಚಿತಪಡಿಸಿವೆ.
ಬುಧವಾರ ತರೀಕೆರೆಯಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಯಾತ್ರೆ ಸಮಯದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ,ಎಸ್ ಯಡಿಯೂರಪ್ಪನವರು ಜೆಡಿಎಸ್ ಮುಖಂಡ ಹೆಚ್.ಟಿ ಬಳಿಗಾರ್ ಅವರನ್ನು ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆನ್ನಲಾಗಿದ್ದು, ಶೀಘ್ರದಲ್ಲೇ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.
ದಿ.ಬಂಗಾರಪ್ಪ ಮತ್ತು ಮಾಜಿ ಶಾಸಕ ಮಧುಬಂಗಾರಪ್ಪನವರ ಆಪ್ತರಾಗಿದ್ದ ಬಳಿಗಾರ್ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದರು.ಶಿಕಾರಿಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
2013ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಳಿಗಾರ್ 15007,2018ರ ಚುನಾವಣೆಯಲ್ಲಿ 13191 ಮತಗಳನ್ನು ಪಡೆದುಕೊಂಡಿದ್ದರು.
ಶಿಕಾರಿಪುರ ವಿಧಾನ ಸಭಾ ಕ್ಷೇತ್ರಕ್ಕೆ ನೀರಾವರಿ ಯೋಜನೆ ಜಾರಿಗೊಳಿಸುವಂತೆ ತಾಳಗುಂದದಿಂದ ಶಿವಮೊಗ್ಗಕ್ಕೆ ಪಾದಯಾತ್ರೆ ನಡೆಸಿ ಗಮನ ಸೆಳೆದಿದ್ದರು.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಹೆಚ್,ಡಿ ಕುಮಾರ ಸ್ವಾಮಿ ಮುಖ್ಯಮಂತ್ರಿಯಾದ ಅವಧಿಯಲ್ಲಿ ಶಿಕಾರಿಪುರ ಕ್ಷೇತ್ರಕ್ಕೆ ನೀರಾವರಿ ಯೋಜನೆಗೆ ಹಣವನ್ನು ಬಿಡುಗಡೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದರು.
ನಿಗಮ ಮಂಡಳಿ ಅಧ್ಯಕ್ಷ ಸ್ಥಾನ?:
ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿರುವ ಬಳಿಗಾರ್ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಒಪ್ಪಿಗೆ ನೀಡಿದ್ದಾರೆ.ಅತೀ ಶೀಘ್ರದಲ್ಲೇ ನಿಗಮ ಮಂಡಳಿ ಭಾಗ್ಯ ದೊರೆಯಲಿದೆ.
ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ತಮ್ಮ ಅಪಾರ ಅಭಿಮಾನಿಗಳೊಂದಿಗೆ ಬಳಿಗಾರ್ ಬಿಜೆಪಿ ಸೇರಲಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.
ಬಳಿಗಾರ್ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಸಿಕ್ಕ ನಂತರ ಶಿಕಾರಿಪುರದಲ್ಲಿ ದೊಡ್ಡ ಸಮಾವೇಶ ನಡೆಸುವ ಮೂಲಕ ಪಕ್ಷ ಸಂಘಟನೆಯಲ್ಲಿ ಅಧಿಕೃತವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಬಳಿಗಾರ್ ಜೆಡಿಎಸ್ ತೊರೆಯುತ್ತಿರುವುದರಿಂದ ಶಿಕಾರಿಪುರ ಕ್ಷೇತ್ರಕ್ಕೆ ಜೆಡಿಎಸ್ ಪಕ್ಷಕ್ಕೆ ಅಭ್ಯರ್ಥಿ ಇಲ್ಲದಂತಾಗಿದೆ.