ಗಾಯತ್ರಿ ಶಾಂತೇಗೌಡರ ಅಳಿಯ, ಮೂವರು ಕೆಲಸಗಾರರ ಮನೆಗಳ ಮೇಲೂ ಐಟಿ ದಾಳಿ
ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಚಿಕ್ಕಮಗಳೂರು, ನ.17: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ನಿವಾಸದ ಮೇಲೆ ಇಂದು ಮುಂಜಾನೆ ಆದಾಯ ತೆರಿಗೆ (IT) ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪರಿಶೀಲನೆ ಮುಂದುವರಿಸಿದೆ.
ಈ ನಡುವೆ ಬೆಂಗಳೂರಿನ ನಾಗರಬಾವಿಯಲ್ಲಿರುವ ಗಾಯತ್ರಿ ಶಾಂತೇಗೌಡ ನಿವಾಸ ಮೇಲೆ ದಾಳಿ, ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರ ಮನೆಗಳ ಮೇಲೆ, ಚಿಕ್ಕಮಗಳೂರು ತಾಲೂಕಿನ ಮರ್ಲೆಯಲ್ಲಿರುವ ಕಲ್ಲಿನ ಕ್ರಷರ್ ಕಚೇರಿ ಹಾಗೂ ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ಅಳಿಯ ಸಂತೋಷ್ ನಿವಾಸದ ಮೇಲೂ ಅಧಿಕಾರಿಗಳು ನಡೆಸಿದ್ದಾರೆ. ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ಮುಂದುವರಿದಿದೆ.
ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿರುವ ಶಾಂತೇಗೌಡ ಅವರ ನಿವಾಸಕ್ಕೆ ಇಂದು ಮುಂಜಾನೆ ಐಟಿ ಅಧಿಕಾರಿಗಳು ಅನುಮಾನ ಬಾರದಿರಲಿ ಎಂಬ ಕಾರಣಕ್ಕೆ ತಮ್ಮ ಕಾರಿನ ಮುಂಭಾಗದಲ್ಲಿ 'ಅಭಿನವ್ ವೆಡ್ಸ್ ದೀಪಿಕಾ' ಎಂದು ಮದುವೆಯ ದಿಬ್ಬಣದ ಪೋಸ್ಟ್ ಹಾಕಿಕೊಂಡು ಬಂದಿದ್ದಾರೆ.
ವಿಧಾನ ಪರಿಷತ್ ಮಾಜಿ ಸದಸ್ಯೆಯಾಗಿರುವ ಗಾಯತ್ರಿ ಶಾಂತೇಗೌಡ ಮುಂಬರುವ ವಿಧಾನಸಭೆ ಚುನಾವಣೆಗೆ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇದೇ ಕಾರಣಕ್ಕೆ ಬಿಜೆಪಿ ಕುಮ್ಮಕ್ಕಿನಿಂದ ಈ ಐಟಿ ದಾಳಿ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಐಟಿ ದಾಳಿ ಖಂಡಿಸಿ ಪ್ರತಿಭಟನೆ
ಈ ನಡುವೆ ಐಟಿ ದಾಳಿ ಖಂಡಿಸಿ ಗಾಯತ್ರಿ ಶಾಂತೇಗೌಡರ ನಿವಾಸದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬಿಜೆಪಿ ಸರಕಾರ ಆದಾಯ ತೆರಿಗೆ ವಿಭಾಗವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಬಿಜೆಪಿ ಸರಕಾರಕ್ಕೆ ಧಿಕ್ಕಾರ, ಶಾಸಕ ಸಿ.ಟಿ.ರವಿ ವಿರುದ್ಧ 'ಲೂಟಿ ರವಿ' ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಗಾಯತ್ರಿ ಶಾಂತೇಗೌಡರ ಮನೆ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಇದನ್ನೂ ಓದಿ: ಚಿಕ್ಕಮಗಳೂರು: ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ನಿವಾಸದ ಮೇಲೆ ಐಟಿ ದಾಳಿ