JDS ‘ಪಂಚರತ್ನ ರಥಯಾತ್ರೆ’ ನಾಳೆ(ನ.18)ಯಿಂದ ಆರಂಭ
ಬೆಂಗಳೂರು, ನ. 17: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯಲಿರುವ ಜೆಡಿಎಸ್ ಪಂಚರತ್ನ ರಥಯಾತ್ರೆ ನಾಳೆ(ನ.18)ಯಿಂದ ಕೋಲಾರ ಜಿಲ್ಲೆ ಮುಳಬಾಗಿಲಿನ ಕುರುಡುಮಲೆಯಿಂದ ಆರಂಭವಾಗಲಿದೆ.
ಗುರುವಾರ ನಗರದಲ್ಲಿ ಈ ಸಂಬಂಧ ಮಾಹಿತಿ ನೀಡಿದ ಕುಮಾರಸ್ವಾಮಿ, ‘ರಾಜ್ಯದ ಗಡಿ ಜಿಲ್ಲೆ ಕೋಲಾರದ ಮುಳಬಾಗಿಲು ಕ್ಷೇತ್ರದ ಕುರುಡುಮೇಲೆ ಗಣಪತಿ ದೇವಾಲಯದಿಂದ ನ.1ರಂದೇ ರಥಯಾತ್ರೆ ಆರಂಭವಾಗಿತ್ತು. ಆದರೆ, ಮಳೆಯ ಕಾರಣಕ್ಕೆ ಮುಂದೂಡಲಾಗಿತ್ತು’ ಎಂದು ಸ್ಪಷ್ಟಪಡಿಸಿದರು.
ಚಾಮುಂಡೇಶ್ವರಿಗೆ ಪೂಜೆ: ‘ಶುಕ್ರವಾರ ಬೆಳಗ್ಗೆಯೇ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಲಿದ್ದು,. ನಂತರ ಅವರು ಮುಳಬಾಗಿಲು ಆಗಮಿಸಿ ಪಂಚರತ್ನ ಯಾತ್ರೆಗೆ ಚಾಲನೆ ಕೊಡುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದೇನೆ. ಹಾಗೆಯೇ ಜೆಡಿಎಸ್ ರಾಷ್ಟ್ರೀಯಾಧ್ಯಕ್ಷ ಎಚ್.ಡಿ.ದೇವೇಗೌಡರು ಮುಳಬಾಗಿಲಿನಲ್ಲಿ ರಥಗಳಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಲಿದ್ದಾರೆ’ ಎಂದು ತಿಳಿಸಿದರು.
ನ.18ರ ಮಧ್ಯಾಹ್ನ 2 ಗಂಟೆಗೆ ಮುಳಬಾಗಿಲು ಪಟ್ಟಣದ ತಿರುಪತಿ ಬೈಪಾಸ್ ರಸ್ತೆಯಲ್ಲಿರುವ ಬಾಲಾಜಿ ಭವನದ ಪಕ್ಕದ ಜಾಗದಲ್ಲಿ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಲಿದ್ದಾರೆ. ಈ ಸಮಾವೇಶದಲ್ಲಿ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಯುವ ಘಟಕದ ಅಧ್ಯಕ್ಷ ನಿಖಿಲ್ ಸೇರಿದಂತೆ ಪಕ್ಷದ ಶಾಸಕರು, ಸಂಭವನೀಯ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.