ಕುಂದಾಪುರ | ಸಿಪಿಎಂ ಹಿರಿಯ ಮುಖಂಡ ಯು.ದಾಸ ಭಂಡಾರಿ ನಿಧನ

ಕುಂದಾಪುರ, ನ.23: ಜಿಲ್ಲೆಯ ಸಿಪಿಎಂ ಪಕ್ಷದ ಹಿರಿಯ ಮುಖಂಡ ಯು.ದಾಸ ಭಂಡಾರಿ (80) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ತಡರಾತ್ರಿ ಕೋಣಿಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಜಿಲ್ಲೆಯಲ್ಲಿ ಕಾರ್ಮಿಕ ಸಂಘಟನೆಗಳನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯು.ದಾಸ ಭಂಡಾರಿ, ಭೂಸುಧಾರಣೆಯ ಹೋರಾಟದ ಸಮಯದಲ್ಲಿ ದೈಹಿಕ ಹಲ್ಲೆಗೆ ಒಳಗಾಗಿದ್ದರೂ ಹೋರಾಟದಿಂದ ಹಿಂದೆ ಸರಿದಿರಲಿಲ್ಲ. ವಿವಿಧ ಕಾರ್ಮಿಕ ಸಂಘಟನೆಯನ್ನು ಕಟ್ಟುವಲ್ಲಿ ಶ್ರಮಿಸಿದ್ದ ಅವರು, ಸರಕಾರಿ ಸೌಲಭ್ಯಗಳನ್ನು ಕಾರ್ಮಿಕರಿಗೆ ಕೊಡಿಸುವಲ್ಲಿ ಅವಿರತ ಹೋರಾಟವನ್ನು ನಡೆಸಿದ್ದರು.
ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಸಂಘಟನೆಯ ಸ್ಥಾಪಕಾಧ್ಯಕ್ಷರಾಗಿ, ಸಿಪಿಎಂ ಪಕ್ಷದ ಜಿಲ್ಲಾ ಸಮಿತಿಯ ಸದಸ್ಯರಾಗಿ, ಕೃಷಿ ಕೂಲಿಕಾರರ ಸಂಘಟನೆಯಲ್ಲೂ ಸಕ್ರಿಯರಾಗಿದ್ದರು. ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸಿಪಿಎಂ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಅನಾರೋಗ್ಯದ ಕಾರಣದಿಂದ ಅವರು ಕಳೆದ ಕೆಲ ದಿನಗಳಿಂದ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು.
ಮೃತರು ಪತ್ನಿ, ಮೂವರು ಮಕ್ಕಳು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಯು ದಾಸ ಭಂಡಾರಿ ಅವರ ನಿಧನಕ್ಕೆ ಸಿಪಿಎಂ, ತಾಲೂಕು ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕ ಸಂಘ, ಕೃಷಿಕೂಲಿಕಾರರ ಸಂಘ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳು ಸಂತಾಪ ವ್ಯಕ್ತಪಡಿಸಿವೆ.







