ಆಟೊ ರಿಕ್ಷಾದಲ್ಲಿ ಸ್ಫೋಟ ಪ್ರಕರಣ: ಗಾಯಾಳು ರಿಕ್ಷಾ ಚಾಲಕನಿಗೆ ಗೃಹ ಸಚಿವರಿಂದ 50 ಸಾವಿರ ರೂ. ವೈಯಕ್ತಿಕ ನೆರವು

ಮಂಗಳೂರು, ನ.22: ಪಂಪ್ ವೆಲ್ ಸಮೀಪದ ನಾಗುರಿಯಲ್ಲಿ ಕಳೆದ ಶನಿವಾರ ಆಟೊ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿದ್ದರಿಂದ ತೀವ್ರ ಗಾಯಗೊಂಡಿರುವ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಯವರನ್ನು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಈ ವೇಳೆ ಗೃಹ ಸಚಿವರು ವೈಯಕ್ತಿಕವಾಗಿ 50 ಸಾವಿರ ರೂ. ಧನಸಹಾಯ ನೀಡಿದರು.
ಇದಕ್ಕೂ ಮೊದಲು ಅವರು ಸ್ಫೋಟ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಆಟೋ ರಿಕ್ಷಾವನ್ನು ಪರಿಶೀಲಿಸಿ, ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ವೇಳೆ ಶಾಸಕ ಭರತ್ ಶೆಟ್ಟಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಐಜಿಪಿ ಪ್ರವೀಣ್ ಸೂದ್, ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಐಜಿಪಿ ಚಂದ್ರಗುಪ್ತ, ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಡಿಸಿಪಿ ಅಂಶು ಕುಮಾರ್ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಶನಿವಾರ ಸಂಜೆ ಸಂಭವಿಸಿದ ಈ ಸ್ಫೋಟದಲ್ಲಿ ಆರೋಪಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಮುಹಮ್ಮದ್ ಶಾರಿಕ್(24) ಹಾಗೂ ಆಟೊ ರಿಕ್ಷಾ ಚಾಲಕ ತೀವ್ರವಾಗಿ ಗಾಯಗೊಂಡಿದ್ದಾರೆ.
