ಸೋಲುವ ಭೀತಿಯಿಂದ ಬಿಜೆಪಿಯಿಂದ ಮತದಾರರ ಮಾಹಿತಿ ಕಳವು ಷಡ್ಯಂತ್ರ: ಸಲೀಮ್ ಅಹ್ಮದ್ ಆರೋಪ
ಬೆಂಗಳೂರು, ನ. 23: ‘ಬಿಜೆಪಿಯವರು ಸೋಲುವ ಭೀತಿ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಮತದಾರರ ಮಾಹಿತಿ ಕಳವು ಮತ್ತು ಪಟ್ಟಿಯಿಂದ ಹಲವರ ಹೆಸರುಗಳನ್ನು ಕೈಬಿಡುವ ಮೂಲಕ ಚುನಾವಣೆ ಗೆಲ್ಲುವ ಷಡ್ಯಂತ್ರ ಮಾಡಲು ಹೊರಟಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಆರೋಪಿಸಿದ್ದಾರೆ.
ಬುಧವಾರ ನಗರದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ ಪರಿವರ್ತನಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಬಿಜೆಪಿ ಷಡ್ಯಂತ್ರದ ಬಗ್ಗೆ ಪಕ್ಷದ ಬೂತ್ ಮಟ್ಟದಲ್ಲಿ ಜಾಗೃತರಾಗಬೇಕು. ಇದು ಆತಂಕಕಾರಿ ಬೆಳವಣಿಗೆ. ಇಂತಹ ಬೆಳವಣಿಗೆಗಳು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ’ ಎಂದು ಹೇಳಿದರು.
ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಹಾಗೂ ಬಲವರ್ಧನೆಗೆ ಶ್ರಮಿಸಬೇಕು. ಚುನಾವಣಾ ಪ್ರಕ್ರಿಯೆ, ಹಾಗೂ ಮತದಾನದ ವಿಷಯದಲ್ಲಿ ಪಕ್ಷದ ವತಿಯಿಂದ ಜನರಲ್ಲಿ ಅರಿವು ಮೂಡಿಸುವುದು ಅತ್ಯಗತ್ಯ. ಜನರ ಬಗ್ಗೆ ಈ ಸರಕಾರಕ್ಕೆ ಕಾಳಜಿ ಇಲ್ಲ. ಬಿಜೆಪಿ ನಾಯಕರು ಅಧಿಕಾರ ದಾಹದಲ್ಲಿ ಕಾಲ ಕಳೆಯುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಮೇಲೆ ಜನ ವಿಶ್ವಾಸ ಕಳೆದುಕೊಂಡಿದ್ದಾರೆ’ ಎಂದು ಅವರು ತಿಳಿಸಿದರು.
‘ಬಿಜೆಪಿ ಸರಕಾರ ಕಮಿಷನ್ ಸರಕಾರ. ಆಡಳಿತ ವ್ಯವಸ್ಥೆಯೇ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದಲ್ಲಿ ರೈತರು, ಯುವಕರು, ಮಹಿಳೆಯರು, ವಿದ್ಯಾರ್ಥಿಗಳು, ಕಾರ್ಮಿಕರು ಸೇರಿದಂತೆ ಎಲ್ಲರಿಗೂ ಬಿಜೆಪಿ ಸರಕಾರದಿಂದ ಅನ್ಯಾಯವಾಗಿದೆ. ಇದು ಅತ್ಯಂತ ಕೆಟ್ಟ ಹಾಗೂ ಭ್ರಷ್ಠ ಸರಕಾರವಾಗಿದೆ. ಇದರ ಬಗ್ಗೆ ಬೂತ್ ಮಟ್ಟದಲ್ಲಿ ಜನರಿಗೆ ತಿಳಿಸುವ ಕೆಲಸ ಮಾಡಬೇಕು’ ಎಂದು ಅವರು ಸಲಹೆ ನೀಡಿದರು.
‘ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಬೂತ್ ಮಟ್ಟದಲ್ಲಿ ಜನತೆಗೆ ತಿಳಿಸಿ, ಪಕ್ಷದ ಸಂಘಟನೆ ಮಾಡಬೇಕು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಆ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು’ ಎಂದು ಸಲೀಂ ಅಹ್ಮದ್ ಇದೇ ವೇಳೆ ಹೇಳಿದರು.
ಕೆಪಿಸಿಸಿ ಉಪಾಧ್ಯಕ್ಷ ಪಿ.ವಿ.ಮೋಹನ್, ಮಾಧ್ಯಮ ವಿಭಾಗದ ನಿಕೇತ್ ರಾಜ್ ಮೌರ್ಯ, ಮುನೀರ್, ಕಾನೂನು ಹಾಗೂ ಮಾನವ ಹಕ್ಕುಗಳ ವಿಭಾಗದ ಶಾಹುಲ್ ಹಮೀದ್ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.