ಉಡುಪಿ ಜಿಲ್ಲೆಯಲ್ಲಿ ಎಚ್ಐವಿ ಪಾಸಿಟಿವಿಟಿ ಪ್ರಮಾಣ ಇಳಿಕೆ: ಡಿಸಿ ಕೂರ್ಮಾರಾವ್

ಉಡುಪಿ: ಜಿಲ್ಲೆಯಲ್ಲಿ ನಿಗಧಿತ ಗುರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಎಚ್ಐವಿ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಪಾಸಿಟಿವಿಟಿ ಪ್ರಮಾಣ ಕೂಡ ಕಡಿಮೆ ಇದೆ. ಏಡ್ಸ್ ರೋಗದ ಬಗ್ಗೆ ಜಾಗೃತರಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿದಾಗ ಮಾತ್ರ ಈ ರೋಗದಿಂದ ದೂರವಿರಲು ಸಾಧ್ಯ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.
ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿದ್ಯಾರತ್ನ ಸ್ಕೂಲ್ ಕಾಲೇಜ್ ಆಫ್ ನರ್ಸಿಂಗ್, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ, ಶ್ರೀಧರ್ಮಸ್ಥಳ ಮಂಜು ನಾಥೇಶ್ವರ ಆಯುರ್ವೇದ ಮಹಾ ವಿದ್ಯಾಲಯ ರೆಡ್ಕ್ರಾಸ್ ಮತ್ತು ಎನ್ಎಸ್ಎಸ್ ಘಟಕ ಉದ್ಯಾವರ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ನಗರದ ಮಿನಿ ಟೌನ್ಹಾಲ್ನಲ್ಲಿ ನಡೆದ ವಿಶ್ವ ಏಡ್ಸ್ ದಿನಾಚರಣೆ ಮತ್ತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಎಚ್.ಐ.ವಿ/ಏಡ್ಸ್ ಕುರಿತಂತೆ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಮಾಡುವುದರ ಮೂಲಕ, ಶೀಘ್ರದಲ್ಲಿ ರೋಗವನ್ನು ಪತ್ತೆ ಹಚ್ಚಿನ ಚಿಕಿತ್ಸೆ ಆರಂಭಿಸುವುದರಿಂದ ರೋಗ ಹರಡುವುದನ್ನು ತಡೆಯಬಹುದಾಗಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸಬೇಕು ಎಂದರು.
ಸ್ವಯಂ ಸೇವಾ ಸಂಸ್ಥೆಗಳು, ವೈದ್ಯಕೀಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳು ಎಚ್ಐವಿ ಏಡ್ಸ್ ಕುರಿತ ಸಂಶಯ ಗಳು ಮತ್ತು ಊಹಾಪೋಹಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಸಾರ್ವಜನಿಕರು ಉಚಿತ ಸಹಾಯ ವಾಣಿ ಸಂಖ್ಯೆ 1097 ಮೂಲಕ ತಮ್ಮ ಸಂದೇಹಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಅವರು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಸಂವಿಧಾನ ಪೀಠಿಕೆ ಬೋಧಿಸಿ ದರು. ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ವಿದ್ಯಾರತ್ನಾ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ.ಅನಿತಾ ಸಿ.ರಾವ್, ಲಯನ್ಸ್ ಕ್ಲಬ್ ಅಧ್ಯಕ್ಷ ರಮೇಶ್ ಕೆ.ಶೆಟ್ಟಿ ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ ಎಚ್.ಐ.ವಿ/ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳಲ್ಲಿ ಗಣನೀಯ ಸಾಧನೆ ಮಾಡಿದವರನ್ನು ಸನ್ಮಾನಿಸ ಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಜಿಲ್ಲಾಏಡ್ಸ್ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು ಸ್ವಾಗತಿಸಿದರುಯ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು. ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ವಂದಿಸಿದರು.
ಇದಕ್ಕೂ ಮುನ್ನಾ ನಗರದ ಬೋರ್ಡ್ ಹೈಸ್ಕೂಲ್ನಿಂದ ಉಡುಪಿ ಪುರಭವನ ದವರೆಗೆ ಜಾಗೃತಿ ಜಾಥಾ ನಡೆಯಿತು. ಕಾರ್ಯಕ್ರಮದ ಬಳಿಕ ಎಚ್.ಐ.ವಿ/ಏಡ್ಸ್ಕುರಿತು ಶ್ರೀ ರೇಣುಕಾಮಾತೆ ತೊಗಲು ಗೊಂಬೆ ಕಲಾತಂಡದಿಂದ ತೊಗಲು ಗೊಂಬೆ ಪ್ರದರ್ಶನ ನಡೆಯಿತು.








