ಖಾಲಿ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮ: ಸಚಿವ ಸುನಿಲ್ ಕುಮಾರ್
ಪಶು ಚಿಕಿತ್ಸಾಲಯ, ಪಶು ಚಿಕಿತ್ಸಾ ಕೇಂದ್ರಗಳ ಕಟ್ಟಡಗಳ ಲೋಕಾರ್ಪಣೆ

ಮಂಗಳೂರು : ಸರಕಾರವು ಪಶುಪಾಲನಾ ಇಲಾಖೆಯನ್ನು ಸದೃಢಗೊಳಿಸಲು ಹಲವಾರು ಯೋಜನೆಗಳನ್ನು ರೂಪಿಸುತ್ತಿದೆ. ಅಲ್ಲದೆ ಖಾಲಿ ಹುದ್ದೆಗಳ ಭರ್ತಿಗೆ ಶೀಘ್ರವಾಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.
ತಲಪಾಡಿಯ ದೇವಿನಗರದಲ್ಲಿ ಆರ್ಐಡಿಎಫ್-24 ಯೋಜನೆಯಡಿ ನೂತನವಾಗಿ ನಿರ್ಮಾಣಗೊಂಡಿರುವ ತಲಪಾಡಿಯ ಪಶು ಚಿಕಿತ್ಸಾಲಯ, ಕೊಣಾಜೆ ಮತ್ತು ಅಂಬ್ಲಮೊಗರು ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಗಳ ಕಟ್ಟಡಗಳನ್ನು ಸೋಮವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಈ ಪರಿಸರ ರೈತರ ವಿವಿಧ ಚಟುವಟಿಕೆಗಳಿಗೆ ಅನುಕೂಲವಾಗಬೇಕು. ಜಾನುವಾರುಗಳಿಗೆ ಸಕಾಲದಲ್ಲಿ ಅಗತ್ಯ ಚಿಕಿತ್ಸೆ ಲಭ್ಯವಾಗಬೇಕು ಎನ್ನುವ ಉದ್ದೇಶದಿಂದ ರಾಜ್ಯ ಸರಕಾರದಿಂದ ಈ ಕ್ರಮ ವಹಿಸಲಾಗಿದೆ. ಪಶುಸಂಗೋಪನಾ ಇಲಾಖೆಗೆ ಹೊಸತನದ ಸ್ಪರ್ಶ ನೀಡಿರುವ ಸರಕಾರ ಹೆಚ್ಚಿನ ಸಂಖ್ಯೆಯ ಪಶು ಚಿಕಿತ್ಸಾಲಯ ಗಳನ್ನು ನಿರ್ಮಾಣ ಮಾಡುತ್ತಿದೆ. ಮುಖ್ಯಮಂತ್ರಿಗಳ ವಿಶೇಷ ಆಸಕ್ತಿಯಿಂದ ಪಶುಸಂಗೋಪನ ಇಲಾಖೆಗೆ ಹೆಚ್ಚೆನ ಆದ್ಯತೆ ಲಭಿಸಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.
ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ, ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ದ.ಕ.ಜಿಪಂ ಸಿಇಒ ಡಾ. ಕುಮಾರ್, ಪಾಲಿ ಕ್ಲಿನಿಕ್ ಉಪ ನಿರ್ದೇಶಕ ಡಾ. ತಮ್ಮಯ್ಯ, ಉಳ್ಳಾಲ ನಗರ ಸಭೆಯ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಕೊಣಾಜೆ ಗ್ರಾಪಂ ಅಧ್ಯಕ್ಷೆ ಚಂಚಲಾಕ್ಷಿ, ಉಪಾಧ್ಯಕ್ಷ ರಾಮಕೃಷ್ಣ ಪಟ್ಟೋರಿ, ತಲಪಾಡಿ ಗ್ರಾಪಂ ಅಧ್ಯಕ್ಷೆ ಪುಷ್ಪಾವತಿ ಶೆಟ್ಟಿ, ಉಪಾಧ್ಯಕ್ಷ ಫಯಾಝ್ ಪಿಲಿಕೂರು, ಮಂಗಳಾದೇವಿಯ ಪಶು ವೈದ್ಯಾಧಿಕಾರಿ ರೇಖಾ ಉಪಸ್ಥಿತರಿದ್ದರು.
ಬೆಂಗಳೂರಿನ ಎನ್ಪಿಸಿಸಿಎಲ್ ಇಂಜಿನಿಯರ್ ಅಕ್ಷಯ್ ಅವರನ್ನು ಸನ್ಮಾನಿಸಲಾಯಿತು. ಮಂಗಳೂರಿನ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಅಶೋಕ್ ಕೆ.ಆರ್. ಸ್ವಾಗತಿಸಿದರು. ಜಿಲ್ಲಾ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಡಳಿತ ವಿಭಾಗದ ಉಪ ನಿರ್ದೇಶಕ ಡಾ. ಅರುಣ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಮೋಹನ್ ಶಿರ್ಲಾಲ್ ಕಾರ್ಯಕ್ರಮ ನಿರೂಪಿಸಿದರು. ತಾಂತ್ರಿಕ ವಿಭಾಗದ ಉಪ ನಿರ್ದೇಶಕ ಡಾ. ವಸಂತ್ ಕುಮಾರ್ ವಂದಿಸಿದರು.