ಮಂಗಳೂರು; ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ವಿರುದ್ಧ ಕ್ರಮ: ಲೋಕಾಯುಕ್ತ ಎಸ್ಪಿ

ಮಂಗಳೂರು, ಡಿ.14: ನಗರ ಹೊರವಲಯದ ಬೈಕಂಪಾಡಿಯಲ್ಲಿರುವ ಪ್ರಾದೇಶಿಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ವಿರುದ್ಧ ಫೋನ್ ಇನ್ ಕಾರ್ಯಕ್ರಮದಲ್ಲಿ ಬಂದ ದೂರಿನ ಹಿನ್ನೆಲೆಯಲ್ಲಿ ಕಳೆದ ಎರಡು ದಿನ ಮಂಡಳಿಯ ಕಚೇರಿಗೆ ದಾಳಿ ನಡೆಸಿ ಪರಿಶೀಲಿಸಿದ ಸಂದರ್ಭ ಕೆಲವು ನ್ಯೂನ್ಯತೆಗಳು ಕಂಡು ಬಂದಿದೆ. ಹಾಗಾಗಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಮಂಗಳೂರು ಎಸ್ಪಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧಿಕಾರಿಗಳು ಡಿ.13 ಮತ್ತು 14ರಂದು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದಾಗ ಹಲವಾರು ನ್ಯೂನತೆಗಳು ಕಂಡುಬಂದಿವೆ. ಮುಖ್ಯವಾಗಿ ನೋಂದಣಿಗೆ ಬಂದ ಅರ್ಜಿಗಳನ್ನು, ನವೀಕರಣಕ್ಕೆ ಬಂದ ಅರ್ಜಿಗಳನ್ನು ಮತ್ತು ಸಕಾಲದ ವ್ಯಾಪ್ತಿಯಲ್ಲಿ ಬರುವ ಅರ್ಜಿಗಳನ್ನು ಇತ್ಯರ್ಥಗೊಳಿಸದೆ ವಿಳಂಬಗೊಳಿಸಿರುವುದು ಕಂಡುಬಂದಿದೆ. ಕೆಲವೊಂದು ಕಾರ್ಖಾನೆಗಳು ನಿಯಮ ಮೀರಿ ಷರತ್ತು ಉಲ್ಲಂಘಿಸಿ ಕಾರ್ಯಾಚರಣೆ ಮಾಡುತ್ತಿದ್ದು, ಅಂತಹ ಕಾರ್ಖಾನೆಗಳ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಕಂಡುಬಂದಿದೆ. ಈ ವಿಚಾರದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯತನದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಎಸ್ಪಿ ತಿಳಿಸಿದ್ದಾರೆ.
ಬಂಟ್ವಾಳ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ
ಬಂಟ್ವಾಳ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಅಹವಾಲು ಸ್ವೀಕಾರ ಸಭೆ ನಡೆಸಲಾಗಿದೆ. ಸಾರ್ವಜನಿಕರಿಂದ 12 ದೂರುಗಳನ್ನು ಸ್ವೀಕರಿಸಲಾಗಿದೆ. ಈ ದೂರುಗಳು ಕಂದಾಯ, ಭೂದಾಖಲೆ ಇಲಾಖೆ, ಪುರಸಭೆ ಮೊದಲಾದವುಗಳಿಗೆ ಸಂಬಂಧಿಸಿದ್ದಾಗಿದೆ. ಕೆಲವು ದೂರುಗಳನ್ನು ಸ್ಥಳದಲ್ಲೇ ಪರಿಹರಿಸಲಾಗಿದೆ.
ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ಚಿಕಿತ್ಸೆಗೆ ಬಂದ ಸಾರ್ವಜನಿಕರು ಹಾಗೂ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುವವರಲ್ಲಿ ಆಸ್ಪತ್ರೆಯ ಸೇವೆ ಮತ್ತು ಸೌಲಭ್ಯಗಳ ಬಗ್ಗೆ ವಿಚಾರಿಸಿ ಮಾಹಿತಿ ಪಡೆದುಕೊಳ್ಳಲಾಗಿದೆ. ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರ ಹುದ್ದೆ ಮತ್ತು ವೈದ್ಯರ ಹುದ್ದೆ ಖಾಲಿ ಇರುವ ಬಗ್ಗೆಯೂ ಗಮನಹರಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗೆ ವರದಿ ಸಲ್ಲಿಸಲಾಗುವುದು ಎಂದು ಲೋಕಾಯುಕ್ತ ಎಸ್ಪಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.