ಮಂಡ್ಯ | ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ: ಮುಖ್ಯ ಶಿಕ್ಷಕನಿಗೆ ವಿದ್ಯಾರ್ಥಿನಿಯರಿಂದ ಥಳಿತ
ಆರೋಪಿ ಶಿಕ್ಷಕನ ವಿರುದ್ಧ FIR ದಾಖಲು
![ಮಂಡ್ಯ | ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ: ಮುಖ್ಯ ಶಿಕ್ಷಕನಿಗೆ ವಿದ್ಯಾರ್ಥಿನಿಯರಿಂದ ಥಳಿತ ಮಂಡ್ಯ | ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ: ಮುಖ್ಯ ಶಿಕ್ಷಕನಿಗೆ ವಿದ್ಯಾರ್ಥಿನಿಯರಿಂದ ಥಳಿತ](https://www.varthabharati.in/sites/default/files/images/articles/2022/12/15/360221-1671099119.jpg)
ಮಂಡ್ಯ, ಡಿ.15: ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಿ ಮುಖ್ಯ ಶಿಕ್ಷಕನಿಗೆ ವಿದ್ಯಾರ್ಥಿನಿಯರೇ ಥಳಿಸಿದ ಘಟನೆ ಪಾಂಡವಪುರ ತಾಲೂಕು ಕಟ್ಟೇರಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.
ಗ್ರಾಮದ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಚಿನ್ಮಯಾನಂದಮೂರ್ತಿ ಮಕ್ಕಳಿಂದ ಥಳಿತಕ್ಕೊಳಗಾಗಿದ್ದು, ವಿಷಯ ತಿಳಿದ ಪೋಷಕರು ಮುಖ್ಯ ಶಿಕ್ಷಕನನ್ನು ಕೂಡಲೇ ಬಂಧಿಸಿ ಸೇವೆಯಿಂದ ವಜಾ ಮಾಡಬೇಕೆಂದು ಪ್ರತಿಭಟನೆ ನಡೆಸಿದ್ದಾರೆ.
ಶಾಲೆಯ ಸಮೀಪವೇ ಇರುವ ವಿದ್ಯಾರ್ಥಿನಿಯರ ನಿಲಯದ ವಿದ್ಯಾರ್ಥಿಗಳಿಗೆ ಹಲವಾರು ವರ್ಷಗಳಿಂದ ಈ ಮುಖ್ಯ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದ್ದು, ವಿದ್ಯಾರ್ಥಿ ನಿಲಯದ ಪಾಲಕಿ ಕೆ. ಎಸ್. ನಮಿತಾ ಎಂಬವರು ಕೆಆರ್ಎಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವರ ದೂರಿನ ಮೇರೆಗೆ ಮುಖ್ಯ ಶಿಕ್ಷಕ ಚಿನ್ಮಯಾನಂದಮೂರ್ತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮುಖ್ಯ ಶಿಕ್ಷಕ ಹಲವು ವರ್ಷಗಳಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳನ್ನು ಶಾಲೆಯ ತನ್ನ ಕೊಠಡಿಗೆ ಕರೆಸಿಕೊಂಡು ಲೈಂಗಿಕ ಕುರುಕುಳ ನೀಡುತ್ತಿದ್ದ ಎಂದು ಸಂತ್ರಸ್ತ ವಿದ್ಯಾರ್ಥಿನಿಯರೇ ತನಗೆ ತಿಳಿಸಿದ್ದಾರೆ ಎಂದು ನಮಿತಾ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.
ಪೋಷಕರಿಂದ ಪ್ರತಿಭಟನೆ: ಗುರುವಾರ ವಿದ್ಯಾರ್ಥಿನಿಲಯದ ಬಳಿ ಜಮಾಯಿಸಿದ ವಿದ್ಯಾರ್ಥಿನಿಯರ ಪೋಷಕರು ತೀವ್ರ ಪ್ರತಿಭಟನೆ ನಡೆಸಿ ಕೂಡಲೇ ಮುಖ್ಯ ಶಿಕ್ಷಕ ಸೇರಿದಂತೆ ಶಾಲೆಯ ಎಲ್ಲಾ ಶಿಕ್ಷಕ ಸಿಬ್ಬಂದಿಯನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ಸ್ಥಳಕ್ಕೆ ಆಗಮಿಸಿದ ಶಾಸಕ ಸಿ. ಎಸ್. ಪುಟ್ಟರಾಜು ಅವರು ಪೋಷಕರನ್ನು ಸಮಾಧಾನಪಡಿಸಿ ಆರೋಪಿ ಶಿಕ್ಷಕನಿಗೆ ತಕ್ಕ ಶಿಕ್ಷೆ ಆಗುವ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.