10 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪೆರ್ಣಂಕಿಲ ಗ್ರಾಮದ ವಿಎ ಹರೀಶ್

ಉಡುಪಿ, ಡಿ.20: ಲಂಚ ಸ್ವೀಕರಿಸುವಾಗ ಗ್ರಾಮ ಲೆಕ್ಕಿಗರೊಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ಘಟನೆ ಉಡುಪಿ ಜಿಲ್ಲೆಯ ಪೆರ್ಣಂಕಿಲ ಗ್ರಾಮದಲ್ಲಿ ನಡೆದಿದೆ. ಪೆರ್ಣಂಕಿಲ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ (ವಿಎ) ಹರೀಶ್ ಎನ್.ಪಿ ಸಿಕ್ಕಿ ಬಿದ್ದ ಗ್ರಾಮ ಲೆಕ್ಕಾಧಿಕಾರಿ.
ನಿವಾಸಿಯೊಬ್ಬರು ಪೆರ್ಣಂಕಿಲ ಗ್ರಾಮದ ಸರ್ವೆ ನಂ 171/1ರಲ್ಲಿ 1.15 ಎಕ್ರೆ ಜಮೀನನ್ನು ಸಕ್ರಮ ಮಾಡಿಕೊಡುವುದಕ್ಕಾಗಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗೆ ಸಂಬಂಧಪಟ್ಟಂತೆ ಪೆರ್ಣಂಕಿಲ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಎನ್.ಪಿ ದೂರುದಾರರಿಗೆ ಜಮೀನು ಸಕ್ರಮ ಮಾಡಿಕೊಡುವುದಕ್ಕೆ 10 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಅದರಂತೆ ಇಂದು ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಹರೀಶ್ ದೂರುದಾರರಿಂದ ಲಂಚ ಸ್ವೀಕರಿಸುವಾಗ ಸ್ಥಳದಲ್ಲಿಯೇ ರೆಡ್ಹ್ಯಾಂಡ್ ಆಗಿ ಸೆರೆಹಿಡಿದಿದ್ದಾರೆ. ಆರೋಪಿಯನ್ನು ಹಾಗೂ ಲಂಚದ ಹಣವನ್ನು ವಶಪಡಿಸಿ ಕೊಳ್ಳಲಾಗಿದ್ದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು ಲೋಕಾಯುಕ್ತ ಎಸ್ಪಿ ಲಕ್ಷ್ಮೀಗಣೇಶ್ ಕೆ. ಮಾರ್ಗದರ್ಶನದಲ್ಲಿ ಉಡುಪಿ ಲೋಕಾಯುಕ್ತ ಠಾಣಾ ಪ್ರಭಾರ ಪೊಲೀಸ್ ಉಪಾಧೀಕ್ಷಕ ಜಯರಾಮ ಡಿ. ಗೌಡ ನೇತೃತ್ವದಲ್ಲಿ, ಡಿವೈಎಸ್ಪಿ ಕಲಾವತಿ ಕೆ. ಸಹಭಾಗಿತ್ವ ದಲ್ಲಿ ಸಿಬ್ಬಂದಿಗಳ ಜೊತೆ ಟ್ರ್ಯಾಪ್ ಕಾರ್ಯಾಚರಣೆ ನಡೆಸಿದ್ದು ಆರೋಪಿತ ಸರಕಾರಿ ನೌಕರ ಹರೀಶ ಎನ್.ಪಿ, ದೂರುದಾರರಿಂದ 10 ಸಾವಿರ ಲಂಚದ ಹಣವನ್ನು ಪಡೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಸ್ಥಳದಲ್ಲಿಯೇ ರೆಡ್ ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.







