ಉಡುಪಿ: ಡಿ.24ರಂದು ಕ್ರೀಡಾ ವಿಜ್ಞಾನ ಕೇಂದ್ರ ಉದ್ಘಾಟನೆ

ಉಡುಪಿ, ಡಿ.21: ಕ್ರೀಡಾಪಟುಗಳು ದೈಹಿಕ ಸದೃಢತೆಯೊಂದಿಗೆ ಕ್ರೀಡೆಯಲ್ಲಿ ಭಾಗವಹಿಸಲು ಸಾಧ್ಯವಾಗಿಸುವ, ಕ್ರೀಡಾ ಸಂದರ್ಭದಲ್ಲಿ ಆಗುವ ಅವಘಡಗಳ ಚಿಕಿತ್ಸೆಗೆ ನೆರವಾಗುವ ಕ್ರೀಡಾ ವಿಜ್ಞಾನ ಕೇಂದ್ರವನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಿರ್ಮಿಸಲಾಗಿದ್ದು, ಇದರ ಉದ್ಘಾಟನೆ ಇದೇ ಡಿ.24 ರಂದು ನಡೆಯಲಿದೆ ಎಂದು ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.
ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಕ್ರೀಡಾ ವಿಜ್ಞಾನ ಕೇಂದ್ರದ ಉದ್ಘಾಟನೆಗೆ ಸಂಬಂಧಿಸಿದಂತೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಕೇಂದ್ರ ಯುವಜನ ಕ್ರೀಡೆ ಹಾಗೂ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ ಸಿಂಗ್ ಠಾಕೂರ್ ಇದನ್ನು ಉದ್ಘಾಟಿಸಲಿದ್ದಾರೆ ಎಂದರು.
ಜಿಲ್ಲೆಯ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವುದರೊಂದಿಗೆ ಅವರುಗಳು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ, ಉತ್ತಮ ಪ್ರದರ್ಶನ ನೀಡುವುದರೊಂದಿಗೆ ಸ್ಪರ್ಧೆಗಳಲ್ಲಿ ವಿಜೇತರಾಗಿ ಪ್ರಶಸ್ತಿ ಹಾಗೂ ಬಹುಮಾನ ಪಡೆಯಲು ಅನುಕೂಲ ಮಾಡುವ ಉದ್ದೇಶದಿಂದ ಉಡುಪಿ ನಗರದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ ಎಂದರು.
ಈ ಕ್ರೀಡಾ ವಿಜ್ಞಾನ ಕೇಂದ್ರದಿಂದ ಕ್ರೀಡಾಪಟುಗಳು ತಮ್ಮ ದೈನಂದಿನ ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮ ತರಬೇತಿ, ಸೂಕ್ಷ್ಮ ಸಲಹೆ ಸೇರಿದಂತೆ ಕ್ರೀಡಾ ಕೌಶಲ್ಯಗಳನ್ನು ಪಡೆಯುವುದರೊಂದಿಗೆ ಕ್ರೀಡಾ ಪ್ರದರ್ಶನದಲ್ಲಿ ಆಗುವ ಆಕಸ್ಮಿಕ ಅಪಘಾತಗಳ ಚಿಕಿತ್ಸೆಗೆ ಈ ಕೇಂದ್ರ ನೆರವಾಗಲಿದೆ ಎಂದರು.
ಕ್ರೀಡಾ ಕೇಂದ್ರವನ್ನು ಕೇಂದ್ರ ಯುವಜನ ಕ್ರೀಡೆ ಹಾಗೂ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಸಿಂಗ್ ಠಾಕೂರ್ ಡಿ.24ರ ಸಂಜೆ 6:00ಕ್ಕೆ ಉದ್ಘಾಟಿಸಲಿದ್ದು, ರಾಜ್ಯ ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಕೆ.ಸಿ.ನಾರಾಯಣ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೇರಿದಂತೆ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಸಂಶೋಧನಾ ಕೇಂದ್ರಕ್ಕೆ ಬೇಡಿಕೆ: ಜಿಲ್ಲೆಯ ಕ್ರೀಡಾಪಟುಗಳಿಗೆ ಮತ್ತಷ್ಟು ಸ್ಫೂರ್ತಿ ತುಂಬಲು ಅನುಕೂಲವಾಗುವಂತೆ ನಗರದಲ್ಲಿ ಕ್ರೀಡಾ ವಿಜ್ಞಾನ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲು ಬೇಡಿಕೆಯ ಪ್ರಸ್ತಾವನೆಯನ್ನು ಕೇಂದ್ರ ಸಚಿವರಿಗೆ ಸಲ್ಲಿಸಲಾಗುವುದು ಎಂದ ರಘುಪತಿ ಭಟ್, ಕೇಂದ್ರ ಕ್ರೀಡಾ ಸಚಿವರು ಕ್ರೀಡಾಪಟುಗಳೊಂದಿಗೆ ಸಂವಾದ ಸಹ ನಡೆಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಕ್ರೀಡಾಪಟುಗಳು, ಕ್ರೀಡಾ ತಂಡಗಳು ಮತ್ತು ಕ್ರೀಡಾ ಸಂಘಟನೆಗಳ ಸದಸ್ಯರು ಹಾಗೂ ವಿವಿಧ ಕ್ರೀಡೆಗಳಲ್ಲಿ ತೊಡಗಿಸಿ ಕೊಂಡಿರುವ ವಿದ್ಯಾರ್ಥಿಗಳು ಸೇರಿದಂತೆ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಜಿಲ್ಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ಕ್ರೀಡಾ ಚಟುವಟಿಕೆಗಳು ನಿತ್ಯೋತ್ಸವಗಳ ರೀತಿಯಲ್ಲಿ ನಿತ್ಯವೂ ನಡೆಯುತ್ತಿವೆ. ಜಿಲ್ಲೆಯ ಅನೇಕ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಭಾಗವಹಿಸಿ ಜಯಶೀಲರಾಗುವುದರೊಂದಿಗೆ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.ಈ ಕ್ರೀಡಾ ವಿಜ್ಞಾನ ಕೇಂದ್ರದ ಪ್ರಾರಂಭದಿಂದ ಈ ಭಾಗದ ಕ್ರೀಡಾಪಟುಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲಾ ರಜತ ಉತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಜನವರಿ 20ರಿಂದ 22ರವರೆಗೆ ಮಲ್ಪೆ ಬೀಚ್ನಲ್ಲಿ ನಡೆಸುವ ಬಗ್ಗೆ ಚರ್ಚಿಸಲಾಯಿತು. ಉತ್ಸವದ ಅಂಗವಾಗಿ ಸಮುದ್ರದಲ್ಲಿ ಈಜುವ ಸ್ಪರ್ಧೆ, ಬೀಚ್ ಕಬಡ್ಡಿ, ವಾಲಿಬಾಲ್, ಮರಳು ಶಿಲ್ಪ ರಚನೆ, ಗಾಳಿಪಟ ಉತ್ಸವ, ವೈನ್ ಮೇಳ, ಶ್ವಾನ ಪ್ರದರ್ಶನ, ಹಗ್ಗ ಜಗ್ಗಾಟ ಸ್ಪರ್ಧೆ, ಛಾಯಾಚಿತ್ರ ಸ್ಪರ್ಧೆ, ಹೆಲಿಕಾಪ್ಟರ್ ಪ್ರವಾಸ, ಛಾಯಾಚಿತ್ರ ಸ್ಪರ್ಧೆ ಮತ್ತಿತರ ಕಾರ್ಯಕ್ರಮಗಳು ನಡೆಯಲಿದ್ದು, ಪ್ರತಿದಿನ ಸಂಜೆ 7ರಿಂದ 10:00 ಗಂಟೆಯರವರೆಗೆ ಜಿಲ್ಲೆಯ ಪ್ರಸಿದ್ಧ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ, ತರಬೇತಿ ನಿರತ ಐಎಎಸ್ ಅಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಹಾಗೂ ಕ್ರೀಡಾ ಸಂಘಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.







