ಫಲಾನುಭವಿಗಳಿಂದ ಸಾರಿಗೆ ಸೌಲಭ್ಯ ಪಡೆದರೆ ಕ್ರಮ: ದ.ಕ ಜಿಲ್ಲಾಧಿಕಾರಿ ಎಚ್ಚರಿಕೆ

ಮಂಗಳೂರು: ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳಿಗೆ ಸರಕಾರದಿಂದ ಸೌಲಭ್ಯ ಕಲ್ಪಿಸಿಕೊಡುವ ಸಂದರ್ಭ ಜಿಲ್ಲೆ, ಉಪವಿಭಾಗ, ತಾಲೂಕು ಅಥವಾ ಗ್ರಾಮ ಮಟ್ಟದಲ್ಲಿ ಸ್ಥಳ ಪರಿಶೀಲನೆ ಮಾಡುವಾಗ ಸಂಬಂಧಪಟ್ಟ ಇಲಾಖೆಗಳ ವಾಹನಗಳನ್ನು ಮಾತ್ರ ಬಳಸಬೇಕು. ಅದನ್ನು ಹೊರತುಪಡಿಸಿ ಫಲಾನುಭಗಳಿಂದಲೇ ವಾಹನ ಸೌಲಭ್ಯವನ್ನು ಪಡೆಯಬಾರದು. ಒಂದು ವೇಳೆ ಅವರಿಂದ ಸಾರಿಗೆ ಸೌಲಭ್ಯ ಪಡೆದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸುವ ಸಂದರ್ಭ ಸಂಬಂಧಿಸಿದ ಇಲಾಖೆಗಳು ಸಾರಿಗೆ ಸೌಲಭ್ಯವನ್ನು ಫಲಾನುಭವಿಗಳಿಂದ ಆಪೇಕ್ಷಿಸುತ್ತಾರೆ ಎಂದು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರೊಬ್ಬರು ಸಭೆಯಲ್ಲಿ ಮಾಹಿತಿ ನೀಡಿದಾಗ ಜಿಲ್ಲಾಧಿಕಾರಿ ಈ ಎಚ್ಚರಿಕೆ ನೀಡಿದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪ್ರಮಾಣ ಪತ್ರಪಡೆದು ಅದನ್ನು ದುರುಪಯೋಗ ಪಡಿಸಿಕೊಂಡಲ್ಲಿ, ಈ ಬಗ್ಗೆ ತನಗೆ ದೂರು ಸಲ್ಲಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ ಆ ಪ್ರಮಾಣ ಪತ್ರವನ್ನು ವಜಾ ಮಾಡುವದಲ್ಲದೆ ಸಂಬಂಧಿಸಿದವರ ವಿರುದ್ಧ ಅಗತ್ಯ ಕ್ರಮಗಳನ್ನು ಜರುಗಿಸುವುದಾಗಿ ಹೇಳಿದರು.
ಜಿಲ್ಲೆಯಲ್ಲಿ ನೂತನವಾಗಿ ಆರಂಭಿಸಲಾಗಿರುವ ನಮ್ಮ ಕ್ಲಿನಿಕ್ಗಳ ಸಿಬ್ಬಂದಿ, ಸ್ಟಾಪ್ ನರ್ಸ್, ತಾಂತ್ರಿಕ ಸಿಬ್ಬಂದಿ ಸೇರಿದಂತೆ ಇತರೆ ನೇಮಕಾತಿಗಳನ್ನು ರಾಜ್ಯಮಟ್ಟದಲ್ಲಿ ನೇರವಾಗಿ ಆಗುತ್ತಿದೆ. ಹಾಗಾಗಿ ಜಿಲ್ಲಾ ಮಟ್ಟದಲ್ಲಿ ಆ ನೇಮಕಾತಿಗೆ ಅವಕಾಶವಿಲ್ಲ, ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿಯನ್ನು ನೇಮಕ ಮಾಡುವ ಸಂದರ್ಭ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಡಿಸಿ ಭರವಸೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಕೆ.ಎಚ್., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿದ್ಧಲಿಂಗೇಶ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಭಿಷೇಕ್ ಮತ್ತಿತರರು ಉಪಸ್ಥಿತರಿದ್ದರು.