ಕುವೆಂಪು ಸಾಹಿತ್ಯ ಸಂದೇಶ ಸರ್ವ ಕಾಲಕ್ಕೂ ಪ್ರಸ್ತುತ: ಉಡುಪಿ ಅಪರ ಜಿಲ್ಲಾಧಿಕಾರಿ

ಉಡುಪಿ: ವಿಶ್ವ ಮಾನವ ಸಂದೇಶ ನೀಡಿದ ಕುವೆಂಪು ಸದಾ ಸ್ಮರಣೀಯರು. ಅವರ ಸಾಹಿತ್ಯದಲ್ಲಿರುವ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಹೇಳಿದ್ದಾರೆ.
ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗಳ ವತಿಯಿಂದ ಇಂದು ರಾಷ್ಟ್ರಕವಿ ಕುವೆಂಪು ಜಯಂತಿ ಪ್ರಯುಕ್ತ ನಡೆದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತಿದ್ದರು.
ಕವಿ ಕುವೆಂಪು ಮಹಾನ್ ಮಾನವತಾವಾದಿ. ಅವರ ಸಾಹಿತ್ಯ ಸಮಾಜದ ಎಲ್ಲಾ ಜನರಿಗೂ ಅತ್ಯುತ್ತಮ ಜೀವನ ಮಾದರಿಯನ್ನು ತೋರಿಸುತ್ತಿದ್ದು, ಸಾಹಿತ್ಯಗಳು ನಮ್ಮ ಜೀವನದ ದೃಷ್ಟಿಕೋನವನ್ನು ವಿಸ್ತರಿಸುತ್ತದೆ. ಸಾಹಿತ್ಯ ಲೋಕದಲ್ಲಿ ಕನ್ನಡ ನಾಡಿಗೆ ಪ್ರಥಮ ಬಾರಿಗೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಮಹಾನ್ ಸಾಹಿತಿ ಕುವೆಂಪು. ಅವರು ರಚಿಸಿದ ನಾಡಗೀತೆಯನ್ನು ಪ್ರತಿನಿತ್ಯ ಹಾಡುವುದರಮೂಲಕ ಅವರನ್ನು ಪ್ರತಿದಿನ ಜ್ಞಾಪಿಸಿಕೊಳ್ಳುತ್ತಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಸಾದ್ ಎಂ. ಮಾತನಾಡಿ, ಯುಗದ ಕವಿ, ಜಗದ ಕವಿ ಎನಿಸಿಕೊಂಡ ಕುವೆಂಪು ರಾಮಕೃಷ್ಣ ಪರಮಹಂಸ, ಸ್ವಾಮಿ ವಿವೇಕಾನಂದರ ಉಪದೇಶಗಳಿಂದ ಪ್ರೇರಿತರಾದವರು. ಕುವೆಂಪು ಅವರು ಅದ್ಭುತ ಪ್ರತಿಭೆ ಹೊಂದಿರುವ ಹಾಗೂ ಸಮಾಜದ ಸಾಕ್ಷಿ ಪ್ರಜ್ಞೆ ಇರುವ ಈ ನಾಡಿನ ಶ್ರೇಷ್ಠ ಕವಿ ಎಂದರು.
ಬೊಮ್ಮರಬೆಟ್ಟು ಗ್ರಾಪಂ ಅಧ್ಯಕ್ಷ ಸುರೇಶ್ ನಾಯಕ್ ಮುಂಡಂಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕಾಲೇಜು ಸಮನ್ವಯಾಧಿಕಾರಿ ಡಾ.ಎನ್. ಎಸ್.ಶೆಟ್ಟಿ, ಎಸ್ಡಿಎಮ್ಸಿ ಉಪಾಧ್ಯಕ್ಷ ವಿಶ್ವಾಸ್ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಉಪನ್ಯಾಸಕಿ ನಳಿನಾ ದೇವಿ ಎಂ ಆರ್ ನಿರೂಪಿಸಿ, ಕಾಲೇಜು ಪ್ರಾಂಶುಪಾಲ ಮಂಜುನಾಥ ಭಟ್ ವಂದಿಸಿದರು.







