ರಾಜ್ಯದ ಸರಕಾರಿ ಕಚೇರಿಗಳಲ್ಲಿ ಗೋಡೆ ಮುಟ್ಟಿದರೆ ಸಾಕು ಕಾಸು, ಕಾಸು ಎನ್ನುವ ಶಬ್ಧ ಬರುತ್ತದೆ: ಡಿ.ಕೆ.ಶಿವಕುಮಾರ್
''ವಿಧಾನಸೌಧದಲ್ಲಿ ಹಣ ಪತ್ತೆ ಪ್ರಕರಣ ಬಿಜೆಪಿ ಸರಕಾರದ ನಿಜವಾದ ಮುಖ''

ಬೆಂಗಳೂರು, ಜ. 5: ‘ರಾಜ್ಯದ ಆಡಳಿತದ ಶಕ್ತಿ ಕೇಂದ್ರ ವಿಧಾನಸೌಧದಲ್ಲೇ ಎಲ್ಲ ಸೆಟ್ಲಮೆಂಟ್ಗಳು ಆಗುತ್ತವೆ. ಇದು ಬಿಜೆಪಿ ಸರಕಾರದ ನಿಜವಾದ ಮುಖ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ದೊಡ್ಡ ಮೊತ್ತದ ಹಣ ಪತ್ತೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬೇರೆಯವರ ಮೇಲಾದರೆ ಆರೋಪಪಟ್ಟಿ ಸಲ್ಲಿಸಿ ಪ್ರಕರಣ ದಾಖಲಿಸುತ್ತಾರೆ. ತಮ್ಮ ಅವ್ಯವಹಾರ ಪ್ರಕರಣಗಳನ್ನು ಸರಕಾರ ವ್ಯವಸ್ಥಿತವಾಗಿ ಮುಚ್ಚಿಹಾಕಲಾಗುತ್ತ್ತದೆ. ಯಾವುದೇ ಪ್ರಕರಣವನ್ನು ಈಡಿಗಾಗಲಿ, ಬೇರೆ ತನಿಖೆಗಾಗಲಿ ವಹಿಸುವುದಿಲ್ಲ. ಮಂತ್ರಿಗಳು, ಶಾಸಕರ ಮೇಲೆ ಎಫ್ಐಆರ್ ದಾಖಲಾದರೂ ಅವುಗಳನ್ನು ವ್ಯವಸ್ಥಿತವಾಗಿ ಮುಚ್ಚಿಹಾಕಲಾಗುತ್ತಿದೆ ಎಂದು ದೂರಿದರು.
‘ವಿಧಾನಸೌಧದಿಂದ ಹಿಡಿದು ಗ್ರಾಮ ಪಂಚಾಯತಿಯ ವರೆಗೂ ರಾಜ್ಯದ ಎಲ್ಲ ಸರಕಾರಿ ಕಚೇರಿಗಳಲ್ಲಿ ಗೋಡೆ ಮುಟ್ಟಿದರೆ ಸಾಕು ಕಾಸು, ಕಾಸು ಎನ್ನುವ ಶಬ್ದ ಬರುತ್ತದೆ ಎಂದು ನಾನು ಈಗಾಗಲೇ ಹೇಳಿದ್ದೇನೆ. ಯಾವುದೇ ಕಾಮಗಾರಿ ಬಿಲ್ ಪಾವತಿ ಆಗಬೇಕಾದರೆ ಕಮಿಷನ್ ನೀಡಬೇಕಿದೆ ಎಂದು ಅವರು ಆರೋಪಿಸಿದರು.
ಕೆ.ಎಸ್.ಈಶ್ವರಪ್ಪ ರಾಜೀನಾಮೆ ಪ್ರಕರಣದಿಂದ ಗುತ್ತಿಗೆದಾರರ ಆತ್ಮಹತ್ಯೆವರೆಗೂ ಎಲ್ಲ ಪ್ರಕರಣಗಳಲ್ಲೂ ಕಮಿಷನ್ ತಾಂಡವವಾಡುತ್ತಿದೆ. ವಿಧಾನಸೌಧದ ಅಧಿಕಾರಿಗಳಿಂದ ಹಿಡಿದು ಮಂತ್ರಿಗಳ ವರೆಗೆ ಎಲ್ಲರಿಗೂ ಹಣ ನೀಡಬೇಕು. ಇಡೀ ದೇಶದಲ್ಲಿ ಕರ್ನಾಟಕದ್ದು ಅತ್ಯಂತ ಭ್ರಷ್ಟ ಸರಕಾರ ಎಂಬ ಕಳಂಕ ಬಂದಿದೆ ಎಂದು ಶಿವಕುಮಾರ್ ಟೀಕಿಸಿದರು.
ಇದನ್ನೂ ಓದಿ: ವಿಧಾನಸೌಧದಲ್ಲಿ ಅನಧಿಕೃತವಾಗಿ 10 ಲಕ್ಷ ರೂ. ಹಣ ಸಾಗಿಸುತ್ತಿದ್ದ ಆರೋಪ: ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ವಶಕ್ಕೆ







