ಮಂಗಳೂರು: ಗಾಂಜಾ ಸಹಿತ ಓರ್ವ ಆರೋಪಿಯ ಸೆರೆ

ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ನಗರಕ್ಕೆ ಹಾಗೂ ಕೇರಳ ರಾಜ್ಯಕ್ಕೆ ಮಾರುತಿ ಅಲ್ಟೋ 800 ಕಾರಿನಲ್ಲಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿದ ಸಿಸಿಬಿ ಪೊಲೀಸರು, 27.100 ಕೆಜಿ ತೂಕದ ಗಾಂಜಾವನ್ನು ವಶಪಡಿಸಿಕೊಂಡು ಒಬ್ಬನನ್ನು ಬಂಧಿಸಿದ್ದಾರೆ.
ಬಂಧಿತನನ್ನು ಕಾಸರಗೋಡು ಜಿಲ್ಲೆಯ ಬಂಬ್ರಾಣ ಗ್ರಾಮದ ಕಿರಣ್ರಾಜ್ ಶೆಟ್ಟಿ (24) ಎಂದು ಗುರುತಿಸಲಾಗಿದೆ.
ಈತನಿಂದ ಮಾರುತಿ ಅಲ್ಟೋ 800 ಕಾರು, 27.100 ಕೆಜಿ ಗಾಂಜಾ, ಮೊಬೈಲ್ ಫೋನ್, 1500 ರೂ.ನಗದು ವಶಪಡಿಸಲಾಗಿದ್ದು, ಗಾಂಜಾ, ಮಾರುತಿ ಅಲ್ಟೋ ಕಾರು, ಮೊಬೈಲ್ ಫೋನ್ನ ಒಟ್ಟು ಮೌಲ್ಯ 9,88,500 ರೂ. ಎಂದು ಅಂದಾಜಿಸಲಾಗಿದೆ.
ಆರೋಪಿಯು ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಗಾಂಜಾವನ್ನು ಕಾರಿನಲ್ಲಿರಿಸಿಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಗಾಂಜಾ ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಕಿಣ್ರಾಜ್ ಶೆಟ್ಟಿಯ ವಿರುದ್ಧ ಈ ಹಿಂದೆ ಕಾಸರಗೋಡು ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ.
ಕಾರ್ಯಾಚರಣೆಯಲ್ಲಿ ಮಂಗಳೂದು ದಕ್ಷಿಣ ಉಪ ವಿಭಾಗದ ಎಸಿಪಿ ದಿನಕರ ಶೆಟ್ಟಿ, ಸಿಸಿಬಿ ಘಟಕದ ಪೊಲೀಸ್ ಇನ್ಸ್ಪೆಕ್ಟರ್ ಶ್ಯಾಮ್ ಸುಂದರ್ ಎಚ್ಎಂ, ಎಸ್ಸೈ ರಾಜೇಂದ್ರ ಬಿ, ಎಎಸಸೈ ಶಶಿಧರ ಶೆಟ್ಟಿ, ಮೋಹನ್ ಕೆವಿ ಮತ್ತಿತರರು ಪಾಲ್ಗೊಂಡಿದ್ದರು.