ಉಡುಪಿ: ಪಾದಚಾರಿಯ ಸಾವಿಗೆ ಕಾರಣನಾದ ಆರೋಪಿಗೆ ಶಿಕ್ಷೆ

ಉಡುಪಿ: ಅತೀವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸಿ, ಪಾದಚಾರಿಯ ಸಾವಿಗೆ ಕಾರಣನಾದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2018ರ ಮೇ 28ರಂದು ದೀಪ್ರಾಜ್ ನಾಯ್ಕ್ ಎಂಬಾತ ಕೊಕ್ಕರ್ಣೆಯಿಂದ ಮುದ್ದೂರು ಕಡೆಗೆ ಹೋಗುವಾಗ ತನ್ನ ಬೈಕನ್ನು ಅತೀವೇಗ ಹಾಗೂ ಅಜಾಕರೂಕತೆಯಿಂದ ಚಲಾಯಿಸಿ, ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಾಕು ಪೂಜಾರ್ತಿ ಎಂಬ ಮಹಿಳೆಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ, ರಸ್ತೆಗೆ ಬಿದ್ದ ಅವರ ಹಣೆಗೆ ತೀವ್ರ ಸ್ವರೂಪದ ಗಾಯವಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆ ಉಪನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ದೀಪಾ ಅವರು ಆರೋಪಿ ದೀಪ್ರಾಜ್ ನಾಯ್ಕ್ಗೆ ಆರು ತಿಂಗಳ ಸಾದಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕಿ ಜಯಂತಿ ಕೆ. ವಾದ ಮಂಡಿಸಿದ್ದರು.
ಇದನ್ನೂ ಓದಿ: ಅಮೃತಜ್ಯೋತಿ ಯೋಜನೆ: ಮೆಸ್ಕಾಂನಿಂದ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್







