ಎಲ್ಲಾ ಕಾರ್ಮಿಕರು ಇ-ಶ್ರಮ್ನಲ್ಲಿ ನೊಂದಾಯಿಸಿ: ಉಡುಪಿ ಡಿಸಿ ಕೂರ್ಮಾರಾವ್ ಎಂ

ಉಡುಪಿ: ಅಸಂಘಟಿತ ಕಾರ್ಮಿಕರು ಹಾಗೂ ವಲಸೆ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ರೂಪಿಸಲು, ಕಾರ್ಮಿಕರ ದತ್ತಾಂಶವನ್ನು ಇ-ಶ್ರಮ್ನಲ್ಲಿ 379 ವಿವಿಧ ವರ್ಗಗಳ ಕಾರ್ಮಿಕರ ನೊಂದಣಿ ನಡೆಯುತ್ತಿದ್ದು, ಇದರಲ್ಲಿ ಪ್ರತಿಯೊಬ್ಬರೂ ತಮ್ಮ ಹೆಸರುಗಳನ್ನು ನೊಂದಾ ಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.
ಬುಧವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಮಿಕ ಇಲಾಖೆಯ ವಿವಿದ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ದೇಶದಾದ್ಯಂತ 38 ಕೋಟಿಗೂ ಅಧಿಕ ಕಾರ್ಮಿಕರು ಅಸಂಘಟಿತ ವರ್ಗಗಳಲ್ಲಿ ತೊಡಗಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಇವರ ಸಂಖ್ಯೆ 3 ಲಕ್ಷಕ್ಕೂ ಅಧಿಕವಾಗಿದೆ. ಇ-ಶ್ರಮ್ನಲ್ಲಿ ಪ್ರತಿಯೊಬ್ಬರೂ ಹೆಸರು, ವೃತ್ತಿ, ವಿಳಾಸ, ವಿದ್ಯಾರ್ಹತೆ, ಕೌಶಲ್ಯತೆಯ ವಿಧ, ಕುಟುಂಬದ ವಿವರ, ಬ್ಯಾಂಕ್ ಖಾತೆಯ ವಿವರ ಇತ್ಯಾದಿಗಳನ್ನು ನೀಡಿ ನೊಂದಾಯಿಸಿಕೊಳ್ಳಬೇಕು ಎಂದರು.
ಇ-ಶ್ರಮ್ನಲ್ಲಿ ನೊಂದಾಯಿಸಿಕೊಳ್ಳುವುದರಿಂದ ಮುಂದಿನ ದಿನಗಳಲ್ಲಿ ಸರಕಾರ ಜಾರಿಗೆ ತರಲಿರುವ ಸಾಮಾಜಿಕ ಭದ್ರತಾ ಯೋಜನೆಗಳನ್ನು ಪಡೆದು ಕೊಳ್ಳಲು ಅನುಕೂಲವಾಗಲಿದೆ ಎಂದ ಅವರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆ ಕೆಲಸದವರು, ಚಾಲಕರು, ಟೈಲರ್ಗಳು, ಬೀದಿ ಬದಿ ವ್ಯಾಪಾರಿಗಳು ಹೆಸರು ನೊಂದಾಯಿಸಿಕೊಳ್ಳಬೇಕು ಎಂದರು.
ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯಡಿ ವಂತಿಗೆ ಆಧಾರಿತ ಪಿಂಚಣಿ ಯೋಜನೆಯನ್ನು ಕೇಂದ್ರ ಸರಕಾರ ಜಾರಿಗೆ ತಂದಿದೆ. 18-40 ವರ್ಷದೊಳಗಿನ ಅಂಗಡಿ ಮಾಲಕರು, ಚಿಲ್ಲರೆ ವ್ಯಾಪಾರಿಗಳು, ಅಕ್ಕಿ ಎಣ್ಣೆ ಗಿರಣಿ ಮಾಲಕರು, ವರ್ಕ್ಶಾಪ್ ಮಾಲಕರು, ಕಮಿಷನ್ ಎಜೆಂಟ್ಗಳು, ರಿಯಲ್ ಎಸ್ಟೇಟ್ ಬ್ರೋಕರ್ಗಳು, ಸಣ್ಣ ಹೊಟೇಲ್ ರೆಸ್ಟೋರೆಂಟ್ಗಳ ಮಾಲಕರು ಸೇರಿದಂತೆ ಇತರೆ ಸಣ್ಣ ವ್ಯಾಪಾರಗಳಲ್ಲಿ ತೊಡಗಿಕೊಂಡ ಸ್ವಯಂ ಉದ್ಯೋಗಿಗಳು ಇದರ ಲಾಭ ಪಡೆದುಕೊಳ್ಳಬಹುದಾಗಿದೆ ಎಂದರು.
ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತವನ್ನಾಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಯಾರೊಬ್ಬರೂ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಿರುವುದು ಕಂಡುಬಂದಲ್ಲಿ ಅವರುಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳುವುದರ ಜೊತೆಗೆ ಬಾಲ ಕಾರ್ಮಿಕರಿಗೆ ಪುನರ್ವಸತಿ ಒದಗಿಸಲು ಸಹ ಮುಂದಾಗಬೇಕು ಎಂದರು.
ಜಾತ್ರೆ, ಉತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಮಕ್ಕಳು ವಿವಿಧ ಆಟಿಕೆಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಎಚ್ಚರ ವಹಿಸಬೇಕು ಎಂದ ಅವರು, ಯಾವುದೇ ಸರ್ಕಾರಿ ಸಂಸ್ಥೆಗಳು ಅಥವಾ ಖಾಸಗಿ ಸಂಸ್ಥೆಗಳು ದೊಡ್ಡ ಪ್ರಮಾಣದ ಕಟ್ಟಡ ನಿರ್ಮಾಣಕ್ಕೆ ಹೊರಜಿಲ್ಲೆ ಅಥವಾ ರಾಜ್ಯಗಳಿಂದ ಕಾರ್ಮಿಕರುಗಳನ್ನು ನೇಮಿಸಿಕೊಂಡಿದ್ದರೆ ಅಂತಹವರ ಮಕ್ಕಳು ಶಿಕ್ಷಣದಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ. ಆವರ ಶಿಕ್ಷಣದ ಬಗ್ಗೆ ಕ್ರಮ ವಹಿಸಬೇಕು ಎಂದರು.
ತಾಲೂಕು ಮಟ್ಟದಲ್ಲಿಯೂ ಬಾಲ ಕಾರ್ಮಿಕರ ರಕ್ಷಣೆಯ ಟಾಸ್ಕ್ ಪೋರ್ಸ್ ಸಮಿತಿಗಳನ್ನು ತಹಶೀಲ್ದಾರ್ರ ಅಧ್ಯಕ್ಷತೆಯಲ್ಲಿ ರಚಿಸಿ, ಆಗಿಂದಾಗ್ಗೆ ಸಭೆ ನಡೆಸುವುದರ ಜೊತೆಗೆ ಸಂಶಯಾಸ್ಪದ ಸ್ಥಳಗಳಿಗೆ ಭೇಟಿ ನೀಡುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್., ತರಬೇತಿ ನಿರತ ಐಎಎಸ್ ಅಧಿಕಾರಿ ಯತೀಶ್, ಎಎಸ್ಪಿ ಸಿದ್ದಲಿಂಗಪ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಹಾಗೂ ವಿವಿಧ ವರ್ಗದ ಕಾರ್ಮಿಕ ಪ್ರತಿನಿಧಿಗಳು ಉಪಸ್ಥಿತರಿದ್ದರು.








