ಬೆಳ್ತಂಗಡಿ ವಕೀಲ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ಪ್ರಕರಣ: 3 ಲಕ್ಷ ರೂ. ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶ
ಬೆಂಗಳೂರು: ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಯುವ ವಕೀಲ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ವಕೀಲರಿಗೆ 3 ಲಕ್ಷ ರೂ. ಪರಿಹಾರ ನೀಡುವಂತೆ ಪೊಲೀಸರಿಗೆ ಹೈಕೋರ್ಟ್ ಆದೇಶಿಸಿದೆ.
ಈ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ಈ ತೀರ್ಪು ಪ್ರಕಟಿಸಿದ್ದು, ಪರಿಹಾರದ ಮೊತ್ತವನ್ನು ತಪ್ಪಿತಸ್ಥ ಪೊಲೀಸ್ ಅಧಿಕಾರಿಯಿಂದಲೇ ವಸೂಲು ಮಾಡುವಂತೆ ನಿರ್ದೇಶಿಸಿದೆ. ತಪ್ಪಿತಸ್ಥ ಅಧಿಕಾರಿ ವಿರುದ್ಧ ಕೈಗೊಂಡಿರುವ ಇಲಾಖಾ ವಿಚಾರಣೆಯನ್ನು ಒಂದು ತಿಂಗಳ ಒಳಗೆ ಪೂರ್ಣಗೊಳಿಸಿ ಹೈಕೋರ್ಟ್ಗೆ ವರದಿ ಸಲ್ಲಿಸಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನ್ಯಾಯಾಲಯವು ನಿರ್ದೇಶಿಸಿದೆ.
ಏನಿದು ಪ್ರಕರಣ?: ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಸಬ್ ಇನ್ ಸ್ಪೆಕ್ಟರ್ ಕೆ.ಪಿ. ಸುತೇಶ್ ಎಂಬವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸ್ ಅಧಿಕಾರಿ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು. ಪ್ರಕರಣ ಕುರಿತು ಇಲಾಖಾ ವಿಚಾರಣೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಿ, ಪರಿಹಾರ ನೀಡುವಂತೆ ಕೋರಿ ದಕ್ಷಿಣ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ವಕೀಲ ಕುಲದೀಪ್ ಎಂಬವರು ಹೈಕೋರ್ಟ್ ಮೆಟ್ಟಿಲೇರಿದ್ದರು.