ಫೆ.10ರಿಂದ ವಿಧಾನ ಮಂಡಲದ ಜಂಟಿ ಅಧಿವೇಶನ; ಫೆ.17ಕ್ಕೆ ಬಜೆಟ್ ಮಂಡನೆ: ಸಂಪುಟ ನಿರ್ಧಾರ
ಬೆಂಗಳೂರು, ಜ.20: ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನವು ಫೆ.10ರಿಂದ ಆರಂಭಗೊಳ್ಳಲಿದ್ದು, ಅಂದು ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆ.17ರಂದು ಬಜೆಟ್ ಮಂಡನೆಯಾಗಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅಧಿವೇಶನವನ್ನು ಒಟ್ಟು ಎಷ್ಟು ದಿನಗಳ ಕಾಲ ನಡೆಸಬೇಕು ಎಂಬುದನ್ನು ಕಲಾಪ ಸಲಹಾ ಸಮಿತಿ(ಬಿಎಸ್ಸಿ) ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪರಂಪರಿಕವಾಗಿ ಕೈಯಲ್ಲಿ ಜಲ್ಲಿ ಕಲ್ಲು ಹೊಡೆಯಲು ಗುತ್ತಿಗೆ ಆಧಾರದಲ್ಲಿ ಪಡೆದಿರುವ ಕ್ವಾರಿಗಳ ಜಾಗ ಬದಲಾಗಿದ್ದರೆ, ಆ ಜಾಗವನ್ನೆ ಸಂಬಂಧಪಟ್ಟವರಿಗೆ ಮಂಜೂರು ಮಾಡಿ, ಈ ಹಿಂದೆ ಮಂಜೂರಾಗಿದ್ದ ಜಾಗವನ್ನು ರಾಜ್ಯ ಸರಕಾರಕ್ಕೆ ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಅನುಮತಿ ಕೈಯಲ್ಲಿ ಕಲ್ಲು ಹೊಡೆಯುವವರಿಗೆ ಮಾತ್ರ ಅನ್ವಯಿಸುತ್ತದೆ ಎಂದು ಮಾಧುಸ್ವಾಮಿ ಸ್ಪಷ್ಟಪಡಿಸಿದರು.
ನಾರಾಯಣಗುರು ವಸತಿ ಶಾಲೆಗಳು: ಹಿಂದುಳಿದ ವರ್ಗಗಳ ಮಕ್ಕಳಿಗಾಗಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಜಾಲಿ ಗ್ರಾಮ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಂಜಾರು ಕಟ್ಟೆ, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಡ್ಡರ್ಸೆ ಗ್ರಾಮ, ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹಿರೇಶಕುನ ಗ್ರಾಮದಲ್ಲಿ ನಾರಾಯಣಗುರು ಸ್ಮರಣಾರ್ಥ ವಸತಿ ಶಾಲೆಗಳನ್ನು ನಿರ್ಮಿಸಲು 72 ಕೋಟಿ ರೂ. ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.
ಅಂಬೇಡ್ಕರ್ ಹಾಸ್ಟೆಲ್: ಲೋಕೋಪಯೋಗಿ ಇಲಾಖೆ ವತಿಯಿಂದ 100 ಡಾ.ಬಿ.ಆರ್.ಅಂಬೇಡ್ಕರ್ ಹಾಸ್ಟೆಲ್ ಕಟ್ಟಡಗಳ ನಿರ್ಮಾಣ ಮಾಡಲು 600 ಕೋಟಿ ರೂ.ಗಳ ಅನುದಾನ ನೀಡಲು ಮಂಜೂರಾತಿ ನೀಡಲಾಗಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನಲ್ಲಿ ನ್ಯಾಯಾಲಯ ಸಂಕೀರ್ಣ ಕಟ್ಟಲು 13.70 ಕೋಟಿ ರೂ.ಅನುದಾನ ಬಿಡುಗಡೆ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಮಾಧುಸ್ವಾಮಿ ಹೇಳಿದರು.
ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆಯಲ್ಲಿ 40 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿ ಹೊಂದಿದ ಸಾಫ್ಟ್ವೇರ್ ಅನುಷ್ಠಾನಕ್ಕೆ ಅನುಮತಿ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸ ನಗರ ತಾಲೂಕು ಕೆರೆಹಳ್ಳಿ ಹೋಬಳಿಯಲ್ಲಿ ಎರಡು ಎಕರೆ ಗೋಮಾಳ ಜಮೀನನ್ನು ಬಡ ಮಕ್ಕಳ ವಿದ್ಯಾರ್ಥಿ ನಿಲಯ ಹಾಗೂ ಸಮುದಾಯ ಭವನ ನಿರ್ಮಾಣಕ್ಕಾಗಿ ಕ್ಷತ್ರೀಯ ಮರಾಠ ಯುವ ವೇದಿಕೆಯವರಿಗೆ ಶೇ.25ರಷ್ಟು ಮಾರ್ಗಸೂಚಿ ದರ ಪಡೆದು ಮಂಜೂರು ಮಾಡಲು ನಿರ್ಧರಿಸಲಾಗಿದೆ ಎಂದು ಮಾಧುಸ್ವಾಮಿ ಹೇಳಿದರು.
114 ನಗರ ಆರೋಗ್ಯ ಕ್ಷೇಮ ಕೇಂದ್ರಗಳನ್ನು ನಮ್ಮ ಕ್ಲಿನಿಕ್ ಆಗಿ ರೂಪಾಂತರ ಮಾಡಲಾಗುವುದು. 847 ಉಪ ಕೇಂದ್ರಗಳನ್ನು ಆರೋಗ್ಯ ಕ್ಷೇಮ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಕಿತ್ತೂರು ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರವನ್ನು 50 ಹಾಸಿಗೆಗಳ ಸಾಮಥ್ರ್ಯದಿಂದ 100 ಹಾಸಿಗೆಗಳ ಸಾಮಥ್ರ್ಯಕ್ಕೆ ಹೆಚ್ಚಿಸಲು 19 ಕೋಟಿ ರೂ.ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.
ಮಡಿಕೇರಿ ಜಿಲ್ಲಾ ಆಸ್ಪತ್ರೆ-13.22 ಕೋಟಿ ರೂ., ಬೆಳಗಾವಿ ಜಿಲ್ಲಾ ಆಸ್ಪತ್ರೆ-23.75 ಕೋಟಿ ರೂ., ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ 22.75 ಕೋಟಿ ರೂ.ಗಳ ಅನುದಾನದಲ್ಲಿ ಕ್ರಿಟಿಕಲ್ ಕೇರ್ ಸೆಂಟರ್ ಆರಂಭಿಸಲಾಗುವುದು. ತರೀಕೆರೆ ತಾಲೂಕಿನ ಕಲ್ಲತ್ತಿಹಳ್ಳಕ್ಕೆ ಅಡ್ಡಲಾಗಿ ಬ್ರಿಜ್ಡ್ ಕಂ ಬ್ಯಾರೇಜ್ ನಿರ್ಮಿಸಲು 20 ಕೋಟಿ ರೂ.ಅನುದಾನ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಮಾಧುಸ್ವಾಮಿ ಹೇಳಿದರು.
ಸ್ಫೂರ್ತಿ ಯೋಜನೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ವತಿಯಿಂದ ಬಾಲ್ಯವಿವಾಹ ತಡೆ, ಹೆಣ್ಣು ಮಕ್ಕಳಿಗೆ ಕೌಶಲ್ಯ ಆಧಾರಿತ ಶಿಕ್ಷಣ ನೀಡುವುದು ಹಾಗೂ ಮಕ್ಕಳಿಗೆ ಸಂಬಂಧಿಸಿದ ಕಾರ್ಯಕ್ರಮಗಳ ಕುರಿತು ಜಾಗೃತಿ ಮೂಡಿಸಲು ಸ್ಫೂರ್ತಿ ಯೋಜನೆಯನ್ನು ಅನುಷ್ಠಾನಕ್ಕೆ ಒಂದು ವರ್ಷದ ಮಟ್ಟಿಗೆ ಬಾಗಲಕೋಟೆ, ವಿಜಯಪುರ, ರಾಯಚೂರು, ಬೆಳಗಾವಿ ಹಾಗೂ ಕಲಬುರಗಿಯ 11 ತಾಲೂಕುಗಳಲ್ಲಿ 12.51 ಕೋಟಿ ರೂ.ಮೊತ್ತದಲ್ಲಿ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಮಾಧುಸ್ವಾಮಿ ಹೇಳಿದರು.
ಮಾಜಿ ಸೈನಿಕರು, ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಸರಕಾರ ವತಿಯಿಂದ ನಿವೇಶನಗಳನ್ನು ಹಂಚಿಕೆ ಮಾಡುವ ಸಂಬಂಧ ನಗರಾಭಿವೃದ್ಧಿ ಪ್ರಾಧಿಕಾರದ ನಿಯಮಗಳಿಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ. ಹಾಸನ ನಗರಕ್ಕೆ ಮೂರನೆ ಹಂತದ ಒಳಚರಂಡಿ ವ್ಯವಸ್ಥೆ ಕಲ್ಪಿಸಲು 171.8 ಕೋಟಿ ರೂ.ಪರಿಷ್ಕøತ ಅಂದಾಜಿಗೆ ಅನುಮೋದನೆ ನೀಡಲಾಗಿದೆ. ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ನವೀನ ಮಾದರಿ ಬಸ್ ಟರ್ಮಿನಲ್ ನಿರ್ಮಾಣಕ್ಕೆ 63 ಕೋಟಿ ರೂ.ಗಳ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ಮಾಧುಸ್ವಾಮಿ ಹೇಳಿದರು.
ನಮ್ಮ ಕ್ಲಿನಿಕ್ ರೆಗ್ಯುಲರ್ ಆಸ್ಪತ್ರೆಯಲ್ಲ: ನಮ್ಮ ಕ್ಲಿನಿಕ್ ರೆಗ್ಯುಲರ್ ಆಸ್ಪತ್ರೆಯಲ್ಲ. ಒಂದು ವರ್ಷದ ಮಟ್ಟಿಗೆ ಅಲ್ಲಿ ಒಬ್ಬ ವೈದ್ಯ, ಇಬ್ಬರು ಪ್ಯಾರಾಮೆಡಿಕಲ್ ಸಿಬ್ಬಂದಿ ಇರುತ್ತಾರೆ. ಪ್ರಾಥಮಿಕವಾಗಿ ಆರೋಗ್ಯ ತಪಾಸಣೆ ಮಾಡಲು ಒಂದು ವ್ಯವಸ್ಥೆ. ನಮ್ಮ ಕ್ಲೀನಿಕ್ನ ಕಟ್ಟಡಗಳು ತಾತ್ಕಾಲಿಕವಾದದ್ದು, ಬಾಡಿಗೆ ಆಧಾರದಲ್ಲಿ ತೆಗೆದುಕೊಳ್ಳುತ್ತಿದ್ದೇವೆ. ವೈದ್ಯರನ್ನು ಹೊರಗುತ್ತಿಗೆ ಮೂಲಕ ಒಂದು ವರ್ಷದ ಅವಧಿಗೆ ಸೀಮಿತವಾಗಿ ನೇಮಕ ಮಾಡಿಕೊಳ್ಳುತ್ತಿದ್ದೇವೆ. ನರ್ಸ್ಗಳನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳುತ್ತಿದ್ದೇವೆ. ಕೇಂದ್ರ ಸರಕಾರ ನಮಗೆ ನೆರವು ಒದಗಿಸಿ, ಆಸ್ಪತ್ರೆಗಳನ್ನು ಮಾಡುವಂತೆ ತಿಳಿಸಿದೆ. ಆ ಉದ್ದೇಶದಿಂದ ನಮ್ಮ ಕ್ಲಿನಿಕ್ಗಳನ್ನು ಆರಂಭಿಸುತ್ತಿದ್ದೇವೆ.
ಜೆ.ಸಿ.ಮಾಧುಸ್ವಾಮಿ, ಕಾನೂನು ಸಚಿವ