ಜಲಜೀವನ್ ಮಿಷನ್- ಐಇಸಿ ಪ್ರಚಾರ ವಾಹನಕ್ಕೆ ಉಡುಪಿ ಡಿಸಿ ಚಾಲನೆ

ಉಡುಪಿ, ಜ.21: ಜಲಜೀವನ್ ಮಿಷನ್ ಯೋಜನೆಯಡಿ ಸಾರ್ವನಿಕರಿಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರಿನ ಬಳಕೆ ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಯ ಅಂಗವಾಗಿ ಆಟೋ ಪ್ರಚಾರಕ್ಕೆ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್ ಮಾತನಾಡಿ, ಜಲಜೀವನ್ ಮಿಷನ್ ಯೋಜನೆಯು ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಎಲ್ಲಾ ಗ್ರಾಮೀಣ ಕುಟುಂಬಗಳಿಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಯೋಜನೆ ರೂಪಿಸಲಾಗಿದೆ. ಗ್ರಾಮೀಣ ಜನರಿಗೆ ಯೋಜನೆಯ ಅರಿವು ಮೂಡಿಸಿ ಜನರು ಯೋಜನೆಯ ಸದ್ಬಳಕೆ ಪಡೆಯುವ ಸಲುವಾಗಿ ಐಇಸಿ ವಾಹನದ ಮೂಲಕ ಗ್ರಾಮಗಳಿಗೆ ತೆರಳಿ ಪ್ರಚಾರ ಕಾರ್ಯ ನಡೆಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ ಮೋಹನ್ ಉಪಸ್ಥಿತರಿದ್ದರು.