ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಬೇಡಿ: ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
''ನಾನು ಸದಾ ಜನಗಳ ಮಧ್ಯೆ ಇರುವ ಸಾಮಾನ್ಯ ವ್ಯಕ್ತಿ''
ಮುದ್ದೇಬಿಹಾಳ: 'ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಬೇಡಿ' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಮುದ್ದೇಬಿಹಾಳ ವಿಧಾನಸಭೆ ಕ್ಷೇತ್ರದ ಬಳವಾಟ ಗ್ರಾಮದಲ್ಲಿ ಪಂಚರತ್ನ ರಥಯಾತ್ರೆ ನಿಮಿತ್ತ ಗ್ರಾಮ ವಾಸ್ತವ್ಯ ಹೂಡಿದ್ದ ಮಾಜಿ ಮುಖ್ಯಮಂತ್ರಿ ಅವರು ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದರು.
'ಜನರು ಕಷ್ಟ ಹೇಳಿಕೊಂಡು ನಮ್ಮ ಬಳಿ ನಿರಂತರವಾಗಿ ಬರುತ್ತಾರೆ. ಸುಮ್ಮನೆ ಜೆಡಿಎಸ್ ಪಕ್ಷದ ಬಗ್ಗೆ ಮಾತನಾಡಬೇಡಿ' ಎಂದು ಅವರು ತರಾಟೆಗೆ ತೆಗೆದುಕೊಂಡರು.
'ಮುಖ್ಯಮಂತ್ರಿ ಆಸೆಗಾಗಿ ಪಕ್ಷ ಬಿಟ್ಟು ಹೋಗಿದ್ದು ನೆನಪು ಇದೆಯೇ? ನಿಮ್ಮಿಂದ ನಾನು ಪಾಠವನ್ನು ಹೇಳಿಸಿಕೊಳ್ಳುವ ಅಗತ್ಯ ನನಗೆ ಇಲ್ಲ. ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರು ಕಟ್ಟಿದ ಪಕ್ಷವ ಉಳಿಸಿಕೊಂಡು ಹೊರಟಿದ್ದೇವೆ ನಾವು. ಅಂಥ ಪಕ್ಷವನ್ನು, ಅವರ ಸಿದ್ಧಾಂತವನ್ನು ಗಾಳಿಗೆ ಬಿಟ್ಟು ಸಿಎಂ ಕುರ್ಚಿ ಹಿಂದೆ ಓಡಿ ಹೋದವರು ಯಾರು? ನಿಮ್ಮ ಯೋಗ್ಯತೆ ಏನು ಅಂತಾ ಗೊತ್ತಿದೆ' ಎಂದು ವಾಗ್ದಾಳಿ ನಡೆಸಿದರು.
'ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಲು ನೀವ್ ಏನು ಮಾಡಿದಿರಿ ಎನ್ನುವುದು ಗೊತ್ತಿದೆ. ಎಲ್ಲಿ ಕೂತು, ಯಾರ ಜತೆ ಕೂಡಿ ಕುತಂತ್ರ ಮಾಡಿದಿರಿ ಎನ್ನುವುದು ನನಗೆ ತಿಳಿದಿದೆ. ಬಿಜೆಪಿಗೆ ಅಧಿಕಾರ ಹೋಗಬಾರದು ಎಂದು ನಿಮ್ಮ ಪಕ್ಷದ ವರಿಷ್ಠರು ನಮ್ಮ ಬಾಗಿಲಿಗೆ ಬಂದಿದ್ದರು. ಖರ್ಗೆ, ಪರಮೇಶ್ವರ್, ಡಿಕೆ ಶಿವಕುಮಾರ್ ಇದ್ದಾರೆ. ಅವರಿಗೆ ಇದೆಲ್ಲಾ ಗೊತ್ತಿಲ್ಲವೆ? ಆಗ ನೀವು ಎಲ್ಲಿದ್ದೀರಿ?' ಎಂದು ಕಿಡಿಕಾರಿದರು.
ನನ್ನ ಸರಕಾರ ಹೇಗೆ ಹೋಯಿತು? ಅದನ್ನು ತೆಗೆಯಲು ನಿಮ್ಮ ಕಾಣಿಕೆ ಏನು? ಬಿಜೆಪಿಯವರ ಜತೆ ಹೇಗೆಲ್ಲಾ ಕುಮ್ಮಕ್ಕಾಗಿದ್ದಿರಿ? ಯಾರನ್ನೆಲ್ಲ ಎಲ್ಲೆಲ್ಲಿಗೆ ಕಲಿಸಿದಿರಿ ಎನ್ನುವುದು ನನಗೆ ಮಾಹಿತಿ ಇದೆ. ಆದರೆ, ಜಾತ್ಯತೀತ ತತ್ವ ಆಸ್ತಿ ಎನ್ನುವ ರೀತಿ ವರ್ತಿಸುತ್ತಿದ್ದಿರಿ. ಜಯಪ್ರಕಾಶ್ ನಾರಾಯಣ್ ಅವರ ಸಿದ್ದಾಂತಕ್ಕೆ ನೀವು ಬದ್ಧರಾಗಿ ಇದ್ದಿದರೆ ನೀವು ಅಧಿಕಾರಕ್ಕಾಗಿ ಮಾತೃಪಕ್ಷವನ್ನು ಕಾಲಿನಲ್ಲಿ ಒದ್ದು ಹೋಗುತ್ತಿರಲಿಲ್ಲ ಎಂದು ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ಗುಡುಗಿದರು.
ಬಿಜೆಪಿ ಪಕ್ಷದವರಿಗಿಂತ ಭ್ರಷ್ಟಾಚಾರದಲ್ಲಿ ನಿವೇನೂ ಕಮ್ಮಿ ಇಲ್ಲ. ನೀವು ಬೇಕಾದಷ್ಟು ಅಕ್ರಮಗಳನ್ನು ನಡೆಸಿದ್ದೀರಿ. ನಾನು ಎತ್ತಿದ ಪ್ರಶ್ನೆಗಳಿಗೆ ಈವರೆಗೆ ಉತ್ತರ ಕೊಡಲು ನಿಮ್ಮಿಂದ ಉತ್ತರ ಕೊಡಲು ಆಗಿಲ್ಲ. ಮತ್ತೆ ನಮ್ಮ ಪಕ್ಷದ ಬಗ್ಗೆ ನಾಲಿಗೆ ಜಾರಿ ಬಿಡುತ್ತಿರಾ? ನಾಚಿಕೆ ಇಲ್ಲವೇ? ಎಂದು ಅವರು ಕೇಳಿದರು.
ನಾನು ಹೋಟೆಲ್ ನಲ್ಲಿ ಇದ್ದೆ ಎಂದು ಹೇಳುತ್ತೀರಲ್ಲಾ, ನಿಮ್ಮ ಸರಕಾರ ಹೋದ ಕೂಡಲೇ ಸರಕಾರಿ ಮನೆ ಖಾಲಿ ಮಾಡಿಕೊಡಬೇಕಿತ್ತು. ನೀವು ಹಾಗೆ ಮಾಡಲಿಲ್ಲ. ನಾನು ಹೋಟೆಲ್ ನಲ್ಲಿಯೇ ಇದ್ದಿದ್ದರೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೂರಾರು ಕೋಟಿ ಹಣ ಹೇಗೆ ಬಿಡುಗಡೆ ಆಯಿತು? ನಿಮ್ಮ ಪಕ್ಷದ ಶಾಸಕರಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನ ಹೇಗೆ ಬಿಡುಗಡೆ ಆಯಿತು? ಎಂದು ಹೇಳಿ ಎಂದು ಕುಮಾರಸ್ವಾಮಿ ಅವರು ಪ್ರತಿಪಕ್ಷ ನಾಯಕರನ್ನು ತರಾಟೆಗೆ ತೆಗೆದುಕೊಂಡರು.
ನಾನು ಸದಾ ಜನಗಳ ಮಧ್ಯೆ ಇರುವ ಸಾಮಾನ್ಯ ವ್ಯಕ್ತಿ. ಆದರೆ ನೀವು ಸಂಜೆ 6 ಗಂಟೆಯಾದ ಮೇಲೆ ಯಾರ ಕೈಗೆ ಸಿಗುತ್ತಿದ್ದಿರಿ? ಮಧ್ಯಾಹ್ನ ಊಟಕ್ಕೆಂದು ಹೋದರೆ ನಾಪತ್ತೆ ಆಗಿಬಿಡುತ್ತಿದ್ದಿರಿ. ಈ ಬಗ್ಗೆ ಕೂಡ ನೀವು ಭಾಷಣ ಮಾಡಬೇಕಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದರು.