ಯಾವ ಕಾರಣಕ್ಕೂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಲ್ಲ: ಅಚ್ಚರಿ ಮೂಡಿಸಿದ ಬಿಎಸ್ ವೈ ಹೇಳಿಕೆ
ಬೆಳಗಾವಿ, ಜ. 23: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಂಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ನಾಟಕ ಮಾಡುತ್ತಿದ್ದಾರೆ. ಅವರು ಮೈಸೂರಿಗೆ ಬರಲು ಯತ್ನ ನಡೆಸಿದ್ದಾರೆ. ಸಿದ್ದರಾಮಯ್ಯರ ಸ್ಪರ್ಧೆ ಬಗ್ಗೆ ನಾನು ಭವಿಷ್ಯ ಹೇಳುತ್ತಿಲ್ಲ. ಖಚಿತವಾಗಿ ಮಾತನಾಡುತ್ತಿದ್ದೇನೆ. ಅವರು ಕೋಲಾರದಲ್ಲಿ ಸ್ಪರ್ಧಿಸಿದರೆ ಮನೆ ಹಾದಿ ಹಿಡಿಯುವುದು ನಿಶ್ಚಿತ ಎಂದು ಭವಿಷ್ಯ ನುಡಿದರು.
ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಎಲ್ಲೇ ಸ್ಪರ್ಧಿಸಲಿ, ಈ ಬಾರಿ ಅವರನ್ನು ಸೋಲಿಸಿ ಮನೆಗೆ ಕಳಿಸುವುದು ಬಿಜೆಪಿಯ ಗುರಿ. ಬಿಜೆಪಿಯಲ್ಲಿ ಜನ ನಾಯಕರಿಲ್ಲ ಎಂಬ ಸಿದ್ದರಾಮಯ್ಯರ ಹೇಳಿಕೆ ಹಾಸ್ಯಾಸ್ಪದ. ನಮಗೆ ವಿಶ್ವನಾಯಕ ಮೋದಿ ಇದ್ದಾರೆ, ಅವರಿಗೆ ಯಾರಿದ್ದಾರೆ. ಬಲಿಷ್ಠ ನಾಯಕರಿಲ್ಲದೆ ಕಾಂಗ್ರೆಸ್ ಎಲ್ಲ ಕಡೆ ಸೋಲುತ್ತಿದೆ ಎಂದು ಯಡಿಯೂರಪ್ಪ ಟೀಕಿಸಿದರು.
ರಾಜ್ಯದಲ್ಲಿ ಡಿ.ಕೆ.ಶಿವಕುಮಾರ ಹಾಗೂ ಸಿದ್ದರಾಮಯ್ಯ ಉಸಿರಾಡುತ್ತಿದ್ದಾರೆ. ಈ ಬಾರಿ ಚುನಾವಣೆ ಮುಗಿದ ಬಳಿಕ ಅವರಿಬ್ಬರ ಉಸಿರೂ ನಿಲ್ಲುತ್ತದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನಗಳನ್ನು ಗೆಲ್ಲುವುದು ಶತಸಿದ್ಧ. ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ಸಂಸದೆ ಸುಮಲತಾ ಅಂಬರೀಷ್ ಎದುರೇ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ಹೊಡೆದಾಟ