ರಾಜ್ಯಕ್ಕೆ ಇಂದು ಪ್ರಧಾನಿ ಮೋದಿ ಆಗಮನ
ಬೆಂಗಳೂರು, ಫೆ, 5; ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಫೆ.6) ಕರ್ನಾಟಕ ರಾಜ್ಯಕ್ಕೆ ಆಗಮಿಸಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಹೊಸದಿಲ್ಲಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸಿರುವ ಪ್ರಧಾನಿ ಮೋದಿ ಅವರು ಮೊದಲಿಗೆ ಬೆಂಗಳೂರಿನ ತುಮಕೂರು ರಸ್ತೆಯಲ್ಲಿನ ಅಂತರ್ ರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಡೆಯಲಿರುವ ‘ಭಾರತ ಇಂಧನ ಸಪ್ತಾಹ-2023’ ಅನ್ನು ಉದ್ಘಾಟಿಸಲಿದ್ದಾರೆ.
ಆ ಬಳಿಕ ರಕ್ಷಣಾ ಕ್ಷೇತ್ರದಲ್ಲಿ ‘ಆತ್ಮನಿರ್ಭರತೆ’ ಸಾಧಿಸುವ ನಿಟ್ಟಿನಲ್ಲಿ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಬಳಿ 15 ಎಕರೆ ಪ್ರದೇಶದಲ್ಲಿ ನಿರ್ಮಿಸಲಾದ ಅತಿದೊಡ್ಡ ಹೆಲಿಕಾಪ್ಟರ್ ಘಟಕವನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ತಿಳಿಸಲಾಗಿದೆ.
ಇದೇ ವೇಳೆ ತುಮಕೂರು ಕೈಗಾರಿಕಾ ಟೌನ್ಶಿಪ್ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ತಿಪಟೂರು ಚಿಕ್ಕನಾಯಕನ ಹಳ್ಳಿಯಲ್ಲಿ 545 ಕೋಟಿ ರೂ.ವೆಚ್ಚದ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಯೋಜನೆಗಳಿಗೂ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ತಿಳಿಸಲಾಗಿದೆ.
ಪ್ರಧಾನಿ ಮೋದಿಯವರೊಂದಿಗೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ, ರಾಮೇಶ್ವರಿ ತೆಲಿ ಸೇರಿದಂತೆ ಇನ್ನಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ
ಪ್ರಧಾನಿ ಶ್ರೀ @narendramodi ಅವರು ಫೆಬ್ರವರಿ 6 ರಂದು ರಾಜ್ಯದಲ್ಲಿ ಭಾರತ ಇಂಧನ ಸಪ್ತಾಹ 2023 ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. pic.twitter.com/0CzlppoVZL
— BJP Karnataka (@BJP4Karnataka) February 5, 2023