ಉಡುಪಿ: ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತಿ ಶಿಬಿರ

ಉಡುಪಿ: ಜಿಲ್ಲಾ ಪಂಚಾಯತ್ ಉಡುಪಿ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಜಿಲ್ಲಾ ಅಭಿಯಾನ ನಿರ್ವಹಣಾ ಘಟಕ ಉಡುಪಿ ಇವುಗಳ ವತಿಯಿಂದ, ಮಣಿಪಾಲದ ಜಿಲ್ಲಾ ಪಂಚಾಯತ್ನ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ತಾಲೂಕು ಮಟ್ಟದ ಸಂಪನ್ಮೂಲ ವ್ಯಕ್ತಿಗಳಿಗೆ 5 ದಿನಗಳ ತರಬೇತಿ ಶಿಬಿರವೊಂದು ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ನವೀನ್ ಕುಮಾರ್ ಹೆಚ್.ಡಿ. ಮಾತನಾಡಿ, ಸಾಮರ್ಥ್ಯಾಭಿವೃದ್ಧಿ ತರಬೇತಿಯಿಂದ ಸಂಜೀವಿನಿ ಯೋಜನೆಯ ಧ್ಯೇಯೋದ್ದೇಶಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಲು ಸಾಧ್ಯ. ಗ್ರಾಮೀಣ ಪ್ರದೇಶದ ಸಂಜೀವಿನಿ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಮಹಿಳಾ ಸಬಲೀಕರಣದ ಕುರಿತು ತರಬೇತಿ ನೀಡಲು ಓರ್ವ ಸ್ವಸಹಾಯ ಗುಂಪಿನ ಮಹಿಳೆಯಿಂದ ಮಾತ್ರ ಸಾಧ್ಯ. ಆದ್ದರಿಂದ ಸ್ವಸಹಾಯ ಗುಂಪುಗಳಿಂದಲೇ ತಾಲೂಕು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಜೀವಿನಿ ರಾಜ್ಯ ಸಂಪನ್ಮೂಲ ವ್ಯಕ್ತಿ ನಾಗರಾಜ್ ಗುಪ್ತ, ಸಂಜೀವಿನಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ್ ಆಚಾರ್ ಉಪಸ್ಥಿತರಿದ್ದರು.
ಸಮಂತ್ ಸ್ವಾಗತಿಸಿದರು. ಜಿಲ್ಲಾ ವ್ಯವಸ್ಥಾಪಕಿ ನವ್ಯಾ ನಿರೂಪಿಸಿ, ಜಯಮಾಲಾ ವಂದಿಸಿದರು.