ಪರಿಶಿಷ್ಟರ ಮೀಸಲಾತಿ ಪ್ರಮಾಣ ಹೆಚ್ಚಳ; ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರ್ಪಡೆಗೆ ಕೇಂದ್ರಕ್ಕೆ ಶಿಫಾರಸ್ಸು

ಬೆಂಗಳೂರು, ಫೆ. 9: ಪರಿಶಿಷ್ಟ ಜಾತಿ(ಎಸ್ಸಿ) ಮತ್ತು ಪರಿಶಿಷ್ಟರ ಪಂಗಡ(ಎಸ್ಟಿ)ದ ಮೀಸಲಾತಿ ಪ್ರಮಾಣ ಹೆಚ್ಚಳ ಸಂಬಂಧ ಸಂವಿಧಾನದ ಶೆಡ್ಯೂಲ್ 9ಕ್ಕೆ ಸೇರ್ಪಡೆ ಮಾಡುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಗುರುವಾರ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಚಿವ ಸಂಪುಟ ಸಭಾ ಮಂದಿರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಮೇಲ್ಕಂಡ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ಗೊತ್ತಾಗಿದೆ.
ಈಗಾಗಲೇ ರಾಜ್ಯ ಸರಕಾರ ಮೀಸಲಾತಿ ಪ್ರಮಾಣವನ್ನು ಪರಿಶಿಷ್ಟ ಜಾತಿ(ಎಸ್ಸಿ)ಗೆ ಶೇ.15ರಿಂದ ಶೇ.17 ಹಾಗೂ ಪರಿಶಿಷ್ಟ ಪಂಗಡ(ಎಸ್ಟಿ)ಕ್ಕೆ ಶೇ.3ರಿಂದ ಶೇ.7ಕ್ಕೆ ಹೆಚ್ಚಳ ಮಾಡಿ ಬೆಳಗಾವಿ ಅಧಿವೇಶನದಲ್ಲಿ ವಿಧೇಯಕ ಮಂಡಿಸಿ ಅನುಮೋದನೆ ಪಡೆದಿತ್ತು. ಆದರೆ, ಇದೀಗ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಕಾನೂನು ಬಲ ನೀಡಲು ಸಂವಿಧಾನದ ಶೆಡ್ಯೂಲ್ 9ಕ್ಕೆ ಸೇರ್ಪಡೆ ಮಾಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಐಟಿಐಗಳು ಮೇಲ್ದರ್ಜೆ: ರಾಜ್ಯದಲ್ಲಿ 30 ಐಟಿಐಗಳನ್ನು ಟಾಟಾ ಟೆಕ್ನಾಲಜಿ ಸಹಯೋಗ (ಒಟ್ಟು 927 ಕೋಟಿ ರೂ.) ಮೇಲ್ದರ್ಜೆಗೆರಿಸಲು ಉದ್ದೇಶಿಸಿದ್ದು, ಆ ನಿಟ್ಟಿನಲ್ಲಿ ರಾಜ್ಯ ಸರಕಾರದ ಪಾಲು 131ಕೋಟಿ ರೂ.ಹಣವನ್ನು ನೀಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಸಂಪುಟ ಸಭೆ ಬಳಿಕ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.
ಸಂಪುಟ ತೀರ್ಮಾನಗಳು: ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ನೂತನ ಕೃಷಿ ಸಂಶೋಧನಾ ಕಾಲೇಜು 25 ಕೋಟಿ ರೂ., ಕರ್ನಾಟಕ ನವೀಕರಣ ಮಾಡಬಹುದಾದ ಇಂಧನ ನೀತಿ 2020-22 ರಿಂದ 2022-27ಕ್ಕೆ ತಿದ್ದುಪಡಿಗೆ ಒಪ್ಪಿಗೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಆಸ್ಪತ್ರೆಯನ್ನು 250 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.
ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ 49.60 ಕೋಟಿ ರೂ.ಅನುದಾನ, ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿಯ ಟೋಲ್ ಗೇಟ್ ನಾಶ ಮಾಡಿದವರ ವಿರುದ್ಧ ತನಿಖೆಗೆ ಆದೇಶ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಗ್ರಾಮದಲ್ಲಿ ಬುಡಕಟ್ಟು ಜನಾಂಗದ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಬನವಾಸಿ ಕಲ್ಯಾಣ ಸಂಸ್ಥೆಗೆ 1ಎಕರೆ ಜಾಗ ಮಂಜೂರು ಮಾಡಲು ಒಪ್ಪಿಗೆ ನೀಡಲಾಗಿದೆ ಎಂದರು.
ಉಳ್ಳಾಲದ ಕೊಣಾಜೆ ನಿರ್ಮಲಾ ಚಾರಿಟಬಲ್ ಟ್ರಸ್ಟ್ಗೆ 7 ಎಕರೆ ರಿಯಾಯಿತಿ ದರದಲ್ಲಿ ಜಮೀನು ಮಂಜೂರು. ವಿದ್ಯುತ್ ಸರಬರಾಜು ಕಂಪೆನಿಗಳಿಗೆ ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಂದ 13ಸಾವಿರ ಕೋಟಿ ರೂ.ಸಾಲ ಪಡೆಯಲು ಸರಕಾರಿ ಖಾತ್ರಿ ಒದಗಿಸಲು ಅನುಮೋದನೆ ನೀಡಲಾಗಿದೆ. ಜತೆಗೆ ಮಡಿಕೇರಿಯಲ್ಲಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಕಚೇರಿ ಕಟ್ಟಡ ನಿರ್ಮಾಣಕ್ಕೆ 12 ಕೋಟಿ ರೂ. ಒದಗಿಸಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದರು.







