ಪುಂಡಿಕಾಯಿ ಗೋಪಾಲಕೃಷ್ಣ ಭಟ್ಗೆ ಬೊಂಡಾಲ ಪ್ರಶಸ್ತಿ

ಮಂಗಳೂರು: ಹಳೆಯ ತಲೆಮಾರಿನ ಅರ್ಥಧಾರಿ, ಶಿಕ್ಷಕ ಮತ್ತು ಶಂಭೂರು ಗ್ರಾಮದ ಪಟೇಲ ದಿ.ಬೊಂಡಾಲ ಜನಾರ್ದನ ಶೆಟ್ಟಿ ಮತ್ತವರ ಪುತ್ರ ಹವ್ಯಾಸಿ ಯಕ್ಷಗಾನ ಕಲಾವಿದ, ನಿವೃತ್ತ ಭೂಮಾಪನ ಅಧಿಕಾರಿ ದಿ.ಬೊಂಡಾಲ ರಾಮಣ್ಣ ಶೆಟ್ಟರ ಹೆಸರಿನಲ್ಲಿ ನೀಡಲಾಗುವ ಬೊಂಡಾಲ ಪ್ರಶಸ್ತಿಗೆ ಕಟೀಲು ಮೇಳದ ಭಾಗವತ, ಪುಡಿಕಾಯಿ ಗೋಪಾಲಕೃಷ್ಣ ಭಟ್ ಆಯ್ಕೆಯಾಗಿದ್ದಾರೆ.
ಬೊಂಡಾಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಟೀಲು ಮೇಳದಲ್ಲಿ ಸೇವೆ ಸಲ್ಲಿಸಿದ ಕಲಾವಿದರಿಗಾಗಿ ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿ ನೀಡುತ್ತಿರುವ ವಾರ್ಷಿಕ ಪ್ರಶಸ್ತಿಗೆ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡಮಿಯ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಸಂಚಾಲಕರಾಗಿರುವ ಆಯ್ಕೆ ಸಮಿತಿಯು 2022-23ನೇ ಸಾಲಿಗೆ ಪುಂಡಿಕಾಯಿ ಹೆಸರನ್ನು ಸೂಚಿಸಿದೆ. ಪ್ರಶಸ್ತಿಯು 10,000 ರೂ. ನಗದು; ಶಾಲು, ಸ್ಮರಣಿಕೆ, ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ.
ಫೆ.16ರಂದು ಶಂಭೂರು ಗ್ರಾಮದ ಬೊಂಡಾಲದಲ್ಲಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿ ಮತ್ತು ಹತ್ತು ಸಮಸ್ತರ ವತಿಯಿಂದ ‘ದಾನಶೂರ ಕರ್ಣ’ ಹಾಗೂ 17ರಂದು ಬೊಂಡಾಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ ‘ಶ್ರೀದೇವಿ ಮಹಾತ್ಮೆ’ ಸೇವಾ ಬಯಲಾಟಗಳು ಜರಗಲಿವೆ. ಫೆ.17ರ ರಾತ್ರಿ ರಂಗಸ್ಥಳದಲ್ಲಿ ಜರಗುವ ದಿ.ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ದಿ.ಬೊಂಡಾಲ ರಾಮಣ್ಣ ಶೆಟ್ಟಿ ಸಂಸ್ಮರಣಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಗುತ್ತು ಅಧ್ಯಕ್ಷತೆಯಲ್ಲಿ ಕಟೀಲು ಕ್ಷೇತ್ರದ ಆರ್ಚಕ ಅನಂತಪದ್ಮನಾಭ ಆಸ್ರಣ್ಣ ಆಶೀರ್ವಚನ ನೀಡುವರು. ಮಾಜಿ ಸಚಿವ ಬಿ. ರಮಾನಾಥ ರೈ ಅತಿಥಿಯಾಗಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.