500 ಕೋಟಿ ರೂ. ಟೆಂಡರ್ 1,000 ಕೋಟಿ ರೂ.ಗೆ ಮಾರಾಟ: ಡಿ.ಕೆ.ಶಿವಕುಮಾರ್
ಇಂಧನ, ಜಲಸಂಪನ್ಮೂಲ, ಆರೋಗ್ಯ ಸೇರಿ ಎಲ್ಲ ಇಲಾಖೆಗಳ ಟೆಂಡರ್ ಗಳಲ್ಲಿ ಭಾರೀ ಅವ್ಯವಹಾರ: ಕಾಂಗ್ರೆಸ್ ನಾಯಕರ ಆರೋಪ

ಬೆಂಗಳೂರು: ಇಂಧನ, ಜಲಸಂಪನ್ಮೂಲ, ಆರೋಗ್ಯ ಸೇರಿ ಎಲ್ಲ ಇಲಾಖೆಗಳಲ್ಲಿ ತರಾತುರಿಯಲ್ಲಿ ಟೆಂಡರ್ ಕರೆಯಲಾಗುತ್ತಿದ್ದು, 500 ಕೋಟಿ ರೂ. ಟೆಂಡರ್ ಅನ್ನು 1000 ಕೋಟಿ ರೂ.ಗೆ ಮಾರಾಟ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಬುಧವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಜೆಟ್ ಅಧಿವೇಶನದ ಬಳಿಕ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತದೆ. ಸರ್ಕಾರದ ಅವಧಿ ಕೇವಲ ಒಂದೇ ತಿಂಗಳು ಇರುವುದಿರಂದ ತರಾತುರಿಯಲ್ಲಿ ಎರಡುಪಟ್ಟು ಹೆಚ್ಚಿನ ಮೊತ್ತಕ್ಕೆ ಟೆಂಡರ್ ಗಳನ್ನು ಮಾರಾಟ ಮಾಡಲಾಗುತ್ತಿದೆ. ರಾಜ್ಯದ ಎಲ್ಲ ಇಲಾಖೆಗಳ ಟೆಂಡರ್ ಗಳಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿದರು.
ಮಂತ್ರಿಸ್ಥಾನ ಸಿಗದವರಿಗೆ 2 ಸಾವಿರ 3 ಸಾವಿರ ಕೋಟಿ ರೂ. ಟೆಂಡರ್ ಹಂಚಿಕೆ ಮಾಡಲಾಗುತ್ತಿದೆ ಎಂದು ಅದೇ ಶಾಸಕರು ಮಾಹಿತಿ ನೀಡಿದ್ದಾರೆ. ಸಾವಿರಾರು ಕೋಟಿ ರೂ ಮೊತ್ತದ ಹಳೆಯ ಕೆಲಸದ ಬಿಲ್ ಬಾಕಿ ಉಳಿದುಕೊಂಡಿದ್ದರೂ ಹೊಸ ಟೆಂಡರ್ ಗಳನ್ನು ಹಂಚಿಕೆ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು.
ಪ್ರಮುಖ ಇಲಾಖೆಗಳಲ್ಲಿ ಪ್ರತಿ ಟೆಂಡರ್ ಮೊತ್ತವನ್ನು ದುಪ್ಪಟ್ಟು ಮಾಡಿ ಕೆಲವನ್ನು ಸಂಪುಟದಲ್ಲಿ ತೀರ್ಮಾನಿಸಿ ನೀಡಿದರೆ, ಮತ್ತೆ ಕೆಲವನ್ನು ಸಂಪುಟದ ತೀರ್ಮಾನವಿಲ್ಲದೇ ಕೇವಲ 7 ದಿನಗಳ ಅಲ್ಪಾವಧಿಯಲ್ಲೇ ನೀಡುತ್ತಿದ್ದಾರೆ. ಶಾಸಕರುಗಳಿಗೆ ಇದರ ಉಸ್ತುವಾರಿ ವಹಿಸಿ, ಅವರೇ ಗುತ್ತಿಗೆದಾರರನ್ನು ಗುರುತಿಸಿ ಟೆಂಡರ್ ನೀಡುವ ಜವಾಬ್ದಾರಿ ನೀಡಲಾಗಿದೆ. ಈ ಶಾಸಕರು ಬೀದಿ, ಬೀದಿಯಲ್ಲಿ ಗುತ್ತಿಗೆದಾರರಿಗೆ ಆಹ್ವಾನ ನೀಡಿ ಈ ಟೆಂಡರ್ ಪಡೆಯಲು ಚುನಾವಣೆಗೂ ಮುನ್ನ ಇಂತಿಷ್ಟು ಹಣ ನೀಡಬೇಕು ಎಂದು ಹೇಳುತ್ತಿದ್ದಾರೆ. ಈ ವಿಚಾರವಾಗಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಕೂಡ ದೂರು ನೀಡಿದ್ದಾರೆ ಎಂದು ಅವರು ತಿಳಿಸಿದರು.
ಬಿಜೆಪಿ ಶಾಸಕರು, ಮಂತ್ರಿಗಿರಿ ಸಿಗದವರಿಗೆ ಈ ರೀತಿ ಟೆಂಡರ್ ಹಂಚುತ್ತಿದ್ದಾರೆ. ಈ ವಿಚಾರವಾಗಿ ಶಾಸಕರು, ಗುತ್ತಿಗೆದಾರರು ನಮಗೆ ಮಾಹಿತಿ ನೀಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಹಳೆ ಕಾಮಗಾರಿಯ ಸಾವಿರಾರು ಕೋಟಿ ಹಣ ಬಾಕಿ ಉಳಿಸಿಕೊಂಡಿದ್ದು, ಯಾರು ಮಂತ್ರಿಗಳು ಹಾಗೂ ಸರ್ಕಾರಕ್ಕೆ ಕಮಿಷನ್ ನೀಡುತ್ತಾರೋ ಅವರ ಬಿಲ್ ಮಾತ್ರ ಪಾಸ್ ಮಾಡುತ್ತಿದ್ದಾರೆ. ಇನ್ನು ನೂತನ ಟೆಂಡರ್ ಗಳನ್ನು ಪಾರದರ್ಶಕವಾಗಿ, ಅರ್ಹ ಗುತ್ತಿಗೆದಾರರಿಗೆ ನೀಡುತ್ತಿಲ್ಲ. ಉದಾಹರಣೆಗೆ ಶಿವರಾಮ ಕಾರಂತ್ ಲೇಔಟ್ ನಿರ್ಮಾಣಕ್ಕೆ ಜಮೀನು ವಶಪಡಿಸಿಕೊಳ್ಳದೇ ಟೆಂಡರ್ ಕರೆಯಲಾಗಿದೆ. ಅಲ್ಲದೆ ಮುಂಗಡವಾಗಿ ಹಣ ಬಿಡುಗಡೆ ಮಾಡಿ ಗುತ್ತಿಗೆದಾರರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಮ್ಮ ಬಳಿ ಎಲ್ಲ ದಾಖಲೆಗಳಿವೆ ಎಂದು ಅವರು ತಿಳಿಸಿದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಬೆಂಗಳೂರು ನಗರದಲ್ಲಿ ಯಾವುದಾದರೂ ಕೆಲಸ ಆಗಬೇಕಾದರೆ ಸಿಎಂ ಕಚೇರಿಯಲ್ಲಿ ಡೀಲ್ ಆಗುತ್ತಿವೆ. ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಸರ್ಕಾರ 7,100 ಕೋಟಿ ವೆಚ್ಚ ಮಾಡಿರುವುದಾಗಿ ತಿಳಿಸಿದ್ದು, ಯಾವ ರಸ್ತೆ ಗುಂಡಿ ಮುಕ್ತವಾಗಿದೆ?. ಈ ರೀತಿ ಭ್ರಷ್ಟಾಚಾರ ಮಾಡುವ ಮೂಲಕ ರಾಜ್ಯವನ್ನು ದೇಶದ ಭ್ರಷ್ಟಾಚಾರದ ರಾಜಧಾನಿಯನ್ನಾಗಿ ಮಾಡಿದ್ದಾರೆ. ಈ ಸರ್ಕಾರದ ಭ್ರಷ್ಟಾಚಾರದ ವಿರುದ್ದ ನಾವು ಹೋರಾಟ ಮಾಡುತ್ತೇವೆ. ಸರ್ಕಾರ, ಗುತ್ತಿಗೆದಾರರು, ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ಎಚ್ಚರಿಕೆ ನೀಡುತ್ತಿದ್ದೇವೆ. ನಮ್ಮ ಸರ್ಕಾರ ಮುಂದೆ ಅಧಿಕಾರಕ್ಕೆ ಬಂದ ನಂತರ ಕಳೆದ 6 ತಿಂಗಳಿಂದ ನಡೆಸಲಾಗಿರುವ ಅಕ್ರಮ ಟೆಂಡರ್ ಗಳನ್ನು ನಾವು ರದ್ದು ಮಾಡಲಿದ್ದೇವೆ. ಎಲ್ಲ ಟೆಂಡರ್ ತನಿಖೆ ಮಾಡಿಸುತ್ತೇವೆ. ಆ ಮೂಲಕ ಈ ಭ್ರಷ್ಟಾಚಾರದ ಕೂಪವನ್ನು ಕಿತ್ತುಹಾಕುತ್ತೇವೆ ಎಂದು ಅವರು ಎಚ್ಚರಿಸಿದರು.
ಶಾಸಕರು ಪ್ರತಿ ಗುತ್ತಿಗೆದಾರರ ಮನೆ ಮನೆಗೆ ಹೋಗಿ ಕಮಿಷನ್ ನೀಡಿ ಟೆಂಡರ್ ಪಡೆಯುವಂತೆ ಒತ್ತಡ ಹಾಕುತ್ತಿದ್ದಾರೆ. ಎಲ್ಲ ಇಲಾಖೆಗಳಲ್ಲೂ ಇಂತಹ ಅಕ್ರಮ ನಡೆಯುತ್ತಿವೆ. ಲೋಕೋಪಯೋಗಿ, ನೀರಾವರಿ, ಬಿಬಿಎಂಪಿ, ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸುಮಾರು 20,000 ಕೋಟಿ ರೂ. ಬಾಕಿ ಬಿಲ್ ಇದೆ. 10% ಕಮಿಷನ್ ಕೊಟ್ಟವರಿಗೆ ಕೆಲಸ ಮಾರಾಟ ಮಾಡುವ ನಡೆಯುತ್ತಿದೆ, ಇದು ಮುಖ್ಯಮಂತ್ರಿ ಕಚೇರಿಯಿಂದಲೇ ಆರಂಭವಾದುದ್ದು. ಇದನ್ನು ತಡೆಗಟ್ಟಬೇಕಾದುದ್ದು ಅಗತ್ಯ. ಇದನ್ನು ಸದನದಲ್ಲಿ ಕೂಡ ಪ್ರಸ್ತಾಪ ಮಾಡುತ್ತೇವೆ ಎಂದು ಅವರು ತಿಳಿಸಿದರು.
ಸರ್ಕಾರಕ್ಕೆ, ಗುತ್ತಿಗೆದಾರರಿಗೆ, ಅಧಿಕಾರಿಗಳಿಗೆ ಮಾಧ್ಯಮಗಳ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ, ಮುಂದೆ ಕಾನೂನುಬಾಹಿರವಾಗಿ ಈ ರೀತಿ ಮಾಡಿದರೆ ನೀವು ಸಿಕ್ಕಿಹಾಕಿಕೊಳ್ಳುತ್ತೀರ, ಈ ವಿಚಾರವನ್ನು ತಾತ್ವಿಕ ಅಂತ್ಯ ಕಾಣಿಸುವವರೆಗೆ ನಾವು ಬಿಡುವುದಿಲ್ಲ. ನ್ಯಾಯಾಲಯದಲ್ಲಿ ಇವರ ವಿರುದ್ಧ ನಾವು ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುತ್ತೇವೆ. ಇಂದು ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಗಾಳಿ ಬೀಸಲು ಆರಂಭವಾಗಿದೆ. ಹೀಗಾಗಿ ಮುಂದೆ ಮತ್ತೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ, ನಾವು ತನಿಖಾ ಆಯೋಗ ರಚನೆ ಮಾಡಿ ಎಲ್ಲವನ್ನೂ ತನಿಖೆ ಮಾಡಿಸಿ, ಯಾರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ ಅವೆಲ್ಲವನ್ನೂ ಬಯಲಿಗೆಳೆಯುತ್ತೇವೆ. ಇದಕ್ಕೆ ಪೂರಕವಾಗಿ ಗೂಳಿಹಟ್ಟಿ ಶೇಖರ್ ಅವರು ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಅವರಿಗೆ ಪತ್ರ ಬರೆದು ಕೆಬಿಜೆಎನ್ಎಲ್, ವಿಜಿಜೆಎಎನ್ಎಲ್, ಕೆಎನ್ಎನ್ಎಲ್ ಹೀಗೆ ಹಲವು ನೀರಾವರಿ ನಿಗಮಗಳಲ್ಲಿ ಅಕ್ರಮವಾಗಿ ನಡವಳಿಕೆಗಳನ್ನು ಮಾಡಿಕೊಂಡು ಒಂದೇ ದಿನ ಸುಮಾರು 18,000 ಕೋಟಿಗೆ ನೀಡಿರುವ ಟೆಂಡರ್, ವರ್ಕ್ ಆರ್ಡರ್ ಗೆ ನೀಡಿರುವ ರದ್ದುಪಡಿಸಿ ಮರು ಟೆಂಡರ್ ಗೆ ಆದೇಶ ನೀಡಿರುವುದನ್ನು ರದ್ದು ಮಾಡಬೇಕು ಎಂದು ಪತ್ರ ಬರೆದಿದ್ದಾರೆ. ಈ ರೀತಿ ಎಲ್ಲಾ ಶಾಸಕರು ಹೇಳಿದ್ದಾರೆ, ಚುನಾವಣೆ ಕಾಲ ಬಂದಿರುವುದರಿಂದ ಹಣ ಸಂಗ್ರಹ ಮಾಡಿಕೊಳ್ಳಲು ರಾಜ್ಯದ ಖಜಾನೆಯನ್ನು ಲೂಟಿ ಮಾಡಲು ಹೊರಟಿದ್ದಾರೆ ಎಂದು ಅವರು ಆರೋಪಿಸಿದರು.
ಪ್ರತೀ ಓಟಿಗೆ 6,000 ರೂ. ನೀಡುತ್ತೇವೆ ಎಂದು ಬಹಿರಂಗವಾಗಿ ಹೇಳುತ್ತಿದ್ದಾರೆ. ಇಂಥ ಕೆಟ್ಟ ರಾಜಕೀಯವನ್ನು ನಾನು ಎಂದೂ ನೋಡಿರಲಿಲ್ಲ. ಇದನ್ನು ತಡೆಗಟ್ಟದೆ ಹೋದರೆ ರಾಜ್ಯ ಉಳಿಯುವುದಿಲ್ಲ. ಹೀಗಾಗಿ ಮಾಧ್ಯಮಗಳ ಮೂಲಕ ಅಧಿಕಾರಿಗಳಿಗೆ, ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು ಎಂದು ಸುದ್ದಿಗೋಷ್ಠಿ ಮಾಡಿದ್ದೇವೆ ಎಂದು ಅವರು ತಿಳಿಸಿದರು.
ಮಾತೆತ್ತಿದರೆ ದಾಖಲೆ ಕೊಡಿ ಎಂದು ಕೇಳುತ್ತಾರೆ, ಗೂಳಿಹಟ್ಟಿ ಶೇಖರ್ ಅವರು ಬರೆದಿರುವ ಪತ್ರ ದಾಖಲೆಯಲ್ಲವೇ? ಯತ್ನಾಳ್, ವಿಶ್ವನಾಥ್, ಮಠಾಧೀಶರು ಹೇಳುವ ಮಾತುಗಳು ದಾಖಲೆಯಲ್ವಾ? ಈ ಸರ್ಕಾರಕ್ಕೆ ಮಾನ ಮರ್ಯಾದಿ ಇದೆಯಾ? ಪ್ರತಿಯೊಂದಕ್ಕು ನಿಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿರಲಿಲ್ವಾ ಅನ್ನುತ್ತಾರೆ. ಇಂಥಾ ಭ್ರಷ್ಟ ಸರ್ಕಾರ ಯಾವ ಕಾಲದಲ್ಲೂ ಬಂದಿರಲಿಲ್ಲ. ಬಸವರಾಜ ಬೊಮ್ಮಾಯಿ ಅವರೇ ಈ ಸರ್ಕಾರದ ಮುಖ್ಯಸ್ಥರು. ಅವರ ಕಚೇರಿಯಿಂದಲೇ ಇವೆಲ್ಲ ಆರಂಭವಾಗುವುದು. ನಿಗಮಗಳ ಬೋರ್ಡ್ ಮೀಟಿಂಗ್ ಗಳು ನಡೆಯುವುದು ಅವರ ಅಧ್ಯಕ್ಷತೆಯಲ್ಲಿಯೇ. ಟೆಂಡರ್ ಕರೆದು ಅದರ ಮೊತ್ತವನ್ನು ಇವರೇ ಹೇಳಿಕೊಟ್ಟು ಹೆಚ್ಚು ಮಾಡಿಸಿ, ಲಂಚವನ್ನು ಪಡೆಯುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಶಾಸಕ ಪ್ರಿಯಾಂಕ್ ಖರ್ಗೆ ಉಪಸ್ಥಿತರಿದ್ದರು.
ಇದನ್ನೂ ಓದಿ: ಚನ್ನಪಟ್ಟಣದಿಂದ ರಮ್ಯಾ ಸ್ಪರ್ಧೆ ವಿಚಾರ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ...







