ರಾಜ್ಯದ 530 ವಸತಿ ಶಾಲೆಗಳು ಈ ವರ್ಷ ಮೇಲ್ದರ್ಜೆಗೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ
ಕಳತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲಾ ಸಂಕೀರ್ಣ ಉದ್ಘಾಟನೆ

ಕುತ್ಯಾರು (ಕಾಪು), ಫೆ.18: ಬಡವರ ಮಕ್ಕಳೇ ಹೆಚ್ಚಾಗಿ ವಿದ್ಯಾಭ್ಯಾಸ ಮಾಡುತ್ತಿರುವ ರಾಜ್ಯದ 830 ವಸತಿ ಶಾಲೆಗಳಲ್ಲಿ ಸುಮಾರು 530 ಶಾಲೆಗಳನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಮೇಲ್ದರ್ಜೆಗೇರಿಸಿ ಅಲ್ಲಿ ಎರಡು ವರ್ಷಗಳ ಗುಣಮಟ್ಟದ ಪಿಯುಸಿ ಶಿಕ್ಷಣವನ್ನು ನೀಡಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಕಾಪು ತಾಲೂಕು ಕುತ್ಯಾರು ಗ್ರಾಮಪಂಚಾಯತ್ ವ್ಯಾಪ್ತಿಯ ಕಳತ್ತೂರು ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಮತ್ತು ಗ್ರಾಮ ಪಂಚಾಯತ್ ಕುತ್ಯಾರು ಇವುಗಳ ಸಹಯೊಗದೊಂದಿಗೆ ಸುಮಾರು 25 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಮೊರಾರ್ಜಿದೇಸಾಯಿ ವಸತಿ ಶಾಲಾ ಸಂಕೀರ್ಣವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾ ಡುತಿದ್ದರು.
ರಾಜ್ಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಈಗ ವಿದ್ಯಾರ್ಥಿಗಳಿಗೆ 6ರಿಂದ 10ನೇ ತರಗತಿಯವರೆಗೆ ಇಂಗ್ಲೀಷ್ ಮಾಧ್ಯಮದಲ್ಲಿ ವಸತಿ ಸಹಿತ ಸಂಪೂರ್ಣ ಉಚಿತ ಶಿಕ್ಷಣ ನೀಡಲಾಗುತ್ತಿದೆ. ಇದನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯುಸಿವರೆಗಿನ ಶಿಕ್ಷಣ ನೀಡುವ ಉದ್ದೇಶದಿಂದ ಮೇಲ್ದರ್ಜೆ ಗೇರಿಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಸ್ಥಳಾವಕಾಶವಿರುವ ಹಾಗೂ ಮೂಲಭೂತ ಸೌಕರ್ಯವಿರುವ 530 ಶಾಲೆಗಳನ್ನು ಆಯ್ಕೆ ಮಾಡಲಾಗಿದೆ ಎಂದರು.
ಈ ವಸತಿ ಶಾಲೆಗಳಲ್ಲಿ ಈಗ ಸುಮಾರು 2.5 ಲಕ್ಷ ಮಂದಿ ವಿದ್ಯಾರ್ಥಿಗಳು ಕಲಿಯುತಿದ್ದಾರೆ. ಇವುಗಳಲ್ಲಿ ಪದವಿ ಪೂರ್ವ ತರಗತಿಗಳನ್ನು ಪ್ರಾರಂಭಿಸಿ ದಾಗ ರಾಜ್ಯದ 40,000ಕ್ಕೂ ಅಧಿಕ ಬಡ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
16 ಮಂದಿ ಐಐಟಿ, 22 ಮಂದಿ ಮೆಡಿಕಲ್: ರಾಜ್ಯದ 830 ವಸತಿ ಶಾಲೆಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಊಟ, ಸಮವಸ್ತ್ರ, ವಸತಿ ಸೇರಿದಂತೆ ಎಲ್ಲಾ ಸೌಲಭ್ಯಗಳೊಂದಿಗೆ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಈ ಶಿಕ್ಷಣ ಸಂಸ್ಥೆಗಳಲ್ಲಿ ಕಳೆದ ಬಾರಿ ಶೇ.99ರಷ್ಟು ಫಲಿತಾಂಶ ದಾಖಲಾಗಿದೆ. ಕಳೆದ ಸಾಲಿನಲ್ಲಿ ಇಲ್ಲಿ ವಿದ್ಯಾಭ್ಯಾಸ ಮಾಡಿದ 14 ವಿದ್ಯಾರ್ಥಿಗಳು ಐಐಟಿ, ಎನ್ಐಟಿಕೆ ಹಾಗೂ 22 ವಿದ್ಯಾರ್ಥಿಗಳು ಎಂಬಿಬಿಎಸ್ಗೆ ಪ್ರವೇಶ ಪಡೆದಿದ್ದಾರೆ ಎಂದರು.
ರಾಜ್ಯದ ಅಸಂಘಟಿತ ಕಾರ್ಮಿಕರ ಮಕ್ಕಳು, ಅಲೆಮಾರಿ ಜನಾಂಗದ ಮಕ್ಕಳು, ಪೌರಕಾರ್ಮಿಕರ ಮಕ್ಕಳಿಗೆ ಆದ್ಯತೆಯೊಂದಿಗೆ ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕಲಿಯಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದರು.
ವಸತಿ ಶಾಲೆಗಳಲ್ಲೂ ಶಿಕ್ಷಕರ ಸಂಬಳ ಹೆಚ್ಚಿಸುವ, ಶಿಕ್ಷಕರನ್ನು ಖಾಯಮಾತಿ ಗೊಳಿಸುವ ಬೇಡಿಕೆಗಳಿದ್ದು, ಸರಕಾರ ಈ ಬಗ್ಗೆ ಗಮನ ಹರಿಸಲಿದೆ. ಇದರಲ್ಲಿ ಕಾಮಗಾರಿ ನಡೆಸುವ ಗುತ್ತಿಗೆದಾರರಿಗೆ ಹಣ ಪಾವತಿಯಲ್ಲಿ ವಿಳಂಬವಾಗುತ್ತಿ ರುವುದನ್ನು ಗಮನಿಸಿ ಅದನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡುವ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಸಚಿವರು ನುಡಿದರು.
ಸಮಾಜ ಕಲ್ಯಾಣ ಇಲಾಖೆಯಲ್ಲಿ 24,000 ನಿರುದ್ಯೋಗಿಗಳಿಗೆ ಸಣ್ಣ ವ್ಯಾಪಾರ ಮಾಡಲು ಅನುಕೂಲವಾಗು ವಂತೆ 50,000ರೂ. ಸಬ್ಸಿಡಿ ಹಾಗೂ 20,000 ರೂ. ಸಾಲದೊಂದಿಗೆ ಕಡಿಮೆ ಬಡ್ಡಿಯಲ್ಲಿ ದ್ವಿಚಕ್ರ ವಾಹನ ನೀಡುವ ಯೋಜನೆ ಆರಂಭಿಸಲಾಗಿದೆ. ಲಾಲಾಜಿ ಅವರ ಕಾಪು ಕ್ಷೇತ್ರದಲ್ಲಿ 150 ಮಂದಿಗೆ ಈ ಸೌಲಭ್ಯ ನೀಡಲಾಗುತ್ತಿದೆ. ಅಲ್ಲದೇ ರಾಜ್ಯದಲ್ಲಿ 8600 ಮಂದಿ ಹಿಂದುಳಿದ ವರ್ಗದವರಿಗೆ ಉಚಿತ ಹೊಲಿಗೆ ಯಂತ್ರ ನೀಡುವ ಯೋಜನೆ ಇದ್ದು, ಇದರಲ್ಲಿ ಕಾಪು ಕ್ಷೇತ್ರದಲ್ಲಿ 45 ಮಂದಿ ಫಲಾನುಭವಿ ಗಳಿಗೆ ಈ ಸೌಲಭ್ಯ ನೀಡಲಾಗು ತ್ತಿದೆ ಎಂದರು.
ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಳತ್ತೂರು ಗ್ರಾಪಂ ಅಧ್ಯಕ್ಷೆ ಲತಾ ಎಸ್. ಆಚಾರ್ಯ, ಉಪಾಧ್ಯಕ್ಷ ರಾಜೇಶ್ ಶೆಟ್ಟಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಹಾಯಕ ಇಂಜಿನಿಯರ್ ರಾಮು ವೈ.ಎಚ್., ಕಾಪು ತಾಪಂನ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್, ಉಡುಪಿ ತಾಲೂಕು ಸಮಾಜ ಕಲ್ಯಾಣಾಧಿಕಾರಿ ರಮೇಶ್, ಪತ್ರಾಂಕಿತ ವ್ಯವಸ್ಥಾಪಕ ರೋಶನ್ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಅನಿತಾ ವಿ. ಮಡ್ಲೂರು ಸ್ವಾಗತಿಸಿದರು. ಕಳತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಉಮಾಕಾಂತಗೌಡ ವಂದಿಸಿದರು.


