ಎಂಡೋಸಲ್ಫಾನ್ ಬಾಧಿತರಿಗೆ ಕ್ಲಸ್ಟರ್ ಮಟ್ಟದಲ್ಲಿ ಚಿಕಿತ್ಸಾ ವಾರ್ಡ್: ಡಿಎಚ್ಓ ಡಾ.ನಾಗಭೂಷಣ ಉಡುಪ

ಉಡುಪಿ, ಮಾ.8: ಜಿಲ್ಲೆಯಲ್ಲಿರುವ ಎಂಡೋಸಲ್ಫಾನ್ ಬಾಧಿತರ ಚಿಕಿತ್ಸೆ ಹಾಗೂ ಪುನರ್ವಸತಿಗಾಗಿ ಆರೋಗ್ಯ ಇಲಾಖೆ ವಿಶೇಷ ಕಾಳಜಿ ವಹಿಸಿದ್ದು, ಎಂಡೋ ಬಾಧಿತರಿಗೆ ತುರ್ತು ಚಿಕಿತ್ಸೆಗಾಗಿ ಕ್ಲಸ್ಟರ್ ಮಟ್ಟದಲ್ಲಿ 11 ಕಡೆಗಳಲ್ಲಿ ತಲಾ 6 ಬೆಡ್ಗಳ ವಿಶೇಷ ವಾರ್ಡ್ಗಳ ನಿರ್ಮಾಣಕ್ಕೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.
ಬುಧವಾರ ಉಡುಪಿಯ ಪತ್ರಿಕಾ ಭವನದಲ್ಲಿ ಪತ್ರಕರ್ತರಿಗಾಗಿ ಆಯೋಜಿಸಿ ಆರೋಗ್ಯ ಅರಿವು ಕಾರ್ಯಾಗಾರ ದಲ್ಲಿ ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಿ ಅವರು ಮಾತನಾಡುತಿದ್ದರು.
ಆರೋಗ್ಯ ಇಲಾಖೆಗೆ ಸಂಬಂಧಿಸಿದ ವಿವಿಧ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಉಡುಪಿ ಜಿಲ್ಲೆ ಮುಂಚೂಣಿ ಯಲ್ಲಿದೆ. ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆಯಲ್ಲಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಆದರೆ ಪಿಎಂ ಜನಾರೋಗ್ಯ ಕಾರ್ಡ್ ವಿತರಣೆಯಲ್ಲಿ 4ನೇ ಸ್ಥಾನದಲ್ಲಿದ್ದು, ಗ್ರಾಮ ಒನ್ ಸೆಂಟರ್ ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಹೆಚ್ಚಿನ ಸಂಖ್ಯೆಯ ಕಾರ್ಡ್ ವಿತರಣೆಗೆ ಕ್ರಮಕೈಗೊಳ್ಳಲಾಗಿದೆ ಎಂದರು.
2025ಕ್ಕೆ ಮಲೇರಿಯಾ ನಿಯಂತ್ರಣಕ್ಕೆ ಕ್ರಮ: ಜಿಲ್ಲೆಯಲ್ಲಿ 2012ರಲ್ಲಿ 2,217 ಇದ್ದ ಮಲೇರಿಯಾ ಪ್ರಕರಣಗಳ ಸಂಖ್ಯೆ 2022ರಲ್ಲಿ 18ಕ್ಕೆ ಇಳಿಕೆಯಾಗಿದೆ. ಇದನ್ನು 2025ಕ್ಕೆ ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಶ್ರಮಿಸುತ್ತಿದೆ ಎಂದು ಸಾಂಕ್ರಮಿಕ ರೋಗ ನಿಯಂತ್ರಣ ಅಧಿಕಾರಿ ಡಾ. ಪ್ರಶಾಂತ್ ಭಟ್ ತಿಳಿಸಿದರು.
ಜಿಲ್ಲೆಯಲ್ಲಿ ಡೆಂಗ್ ರೋಗದ ಹರಡುವಿಕೆ ಕುರಿತು ವಿವರಿಸಿದ ಡಾ.ಭಟ್, ಕಳೆದ ವರ್ಷ ಅತೀ ಹೆಚ್ಚು 527 ಪ್ರಕರಣ ದಾಖಲಾಗಿದ್ದು, ಗ್ರಾಮೀಣ ಪ್ರದೇಶದಲ್ಲಿರುವ ರಬ್ಬರ್ ಪ್ಲಾಂಟೇಶನ್, ಪೈನಾಪಲ್ ಪ್ಲಾಂಟೇಶನ್, ಅಡಿಕೆ ತೋಟಗಳಲ್ಲಿ ನೀರು ನಿಲ್ಲದಂತೆ ತಡೆಯುವುದು ಸವಾಲಿನ ಕೆಲಸವಾಗಿದೆ. ಇದರಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ರೋಗ ಹರಡುತ್ತಿದೆ. ಈ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಬೇಕಾಗಿದೆ ಎಂದರು.
ಜಿಲ್ಲೆಯಲ್ಲಿ ಕುಷ್ಠ ರೋಗ ಸಂಪೂರ್ಣ ನಿರ್ಮೂಲಗೊಂಡಿಲ್ಲ. ಈಗಲೂ ರೋಗಕ್ಕೆ 31 ಮಂದಿ ಚಿಕಿತ್ಸೆ ಪಡೆಯುತಿ ದ್ದಾರೆ. ಇದೊಂದು ಸಾಂಕ್ರಾಮಿಕ ರೋಗವಾಗಿದ್ದು, ಅನುವಂಶಿಕವಲ್ಲ. ಸೂಕ್ಷ್ಮಾಣು ಜೀವಿಯಿಂದ ಹರಡುವ ಇದು ಮನುಷ್ಯನ ದೇಹದಲ್ಲಿ ರೋಗ ನಿರೋಧಕಶಕ್ತಿ ಕಡಿಮೆಯಾದಾಗ ರೋಗ ಲಕ್ಷಣಗಳು ಕಾಣಿಸಿಕೊಳ್ಳಬಹುದು ಎಂದು ಡಾ.ಲತಾ ನಾಯಕ್ ವಿವರಿಸಿದರು.
ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು ಮಾತನಾಡಿ, ಜಿಲ್ಲೆಯಲ್ಲಿ 1,434 ಕ್ಷಯರೋಗಿಗಳು ಸರಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗಿಗಳಿಗೆ ಅಗತ್ಯವಾಗಿರುವ ಪೌಷ್ಟಿಕ ಆಹಾರ ಪೂರೈಕೆಗೆ ಕೆಲವು ಸಂಘ-ಸಂಸ್ಥೆಗಳ ನೆರವು ಪಡೆಯಲಾಗಿದೆ. 301 ರೋಗಿಗಳಿಗೆ ಪ್ರತೀ ತಿಂಗಳು ಪೌಷ್ಟಿಕಾಂಶ ಯುಕ್ತ ಆಹಾರಗಳನ್ನು ನೀಡಲಾಗುತ್ತಿದೆ ಎಂದರು.
ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಎಸ್. ಕಾರ್ಯಾಗಾರ ಉದ್ಘಾಟಿಸಿದರು. ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಎಂ.ಕೆ. ರಾಮ, ಕುಟುಂಬ ಕಲ್ಯಾಣಾದಿಕಾರಿ ಡಾ. ರಾಮ್ ರಾವ್, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಲತಾ ನಾಯಕ್, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನಾ ಅವರು ಸಹ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ಪ್ರೆಸ್ಕ್ಲಬ್ ಸಂಚಾಲಕ ಅಜಿತ್ ಆರಾಡಿ ಉಪಸ್ಥಿತರಿದ್ದರು.








