ನಾಳೆ ಕಟಪಾಡಿಯಲ್ಲಿ ಫಲಾನುಭವಿಗಳ ಸಮಾವೇಶ

ಉಡುಪಿ, ಮಾ.9: ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ನಾಳೆ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ-66ರ ಕಟಪಾಡಿ ಮೈದಾನದಲ್ಲಿ ನಡೆಯಲಿದೆ. ಸಮ್ಮೇಳನ ನಡೆಯುವ ಸ್ಥಳಕ್ಕೆ ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಇಂದು ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೇಂದ್ರ ಮತ್ತು ರಾಜ್ಯ ಸರಕಾರ ಗಳ ವಿವಿಧ ಯೋಜನೆಗಳ ಸೌಲಭ್ಯವನ್ನು ಪಡೆದುಕೊಂಡಿರುವ ಫಲಾನುಭವಿ ಗಳ ಸಮ್ಮೇಳನ ನಾಳೆ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಸಚಿವರು, ಜಿಲ್ಲೆಯ ಶಾಸಕರು ಹಾಗೂ ಜನಪ್ರತಿನಿಧಿ ಗಳು, ಅಧಿಕಾರಿಗಳು ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳು ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮಕ್ಕೆ ಕಂದಾಯ ಇಲಾಖೆಯ 1,48,479, ಸಾರ್ವಜನಿಕ ಶಿಕ್ಷಣ ಇಲಾಖೆಯ 3,80,425, ಕಾರ್ಮಿಕ ಇಲಾಖೆ 5,44,361, ಗ್ರಾಮೀಣ ಕುಡಿಯುವ ನೀರು ಯೋಜನೆ 2,47,179, ಸಹಕಾರ ಇಲಾಖೆಯ 75,000, ಆಹಾರ ಮತ್ತು ನಾಗರಿಕ ಸರಬರಾಜ ಇಲಾಖೆ 1,96,945, ಕೆ.ಎಂ.ಎಫ್ನ 96,996, ಕೃಷಿ ಇಲಾಖೆಯ 3,16,320, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 65,157, ಮೀನುಗಾರಿಕೆ ಇಲಾಖೆಯ 14,568 ಫಲಾನುಭವಿಗಳು ಭಾಗವಹಿಸಲಿದ್ದಾರೆ ಎಂದರು.
ಪ್ರತೀ ಇಲಾಖೆಯವರು ಫಲಾನುಭವಿಗಳನ್ನು ಕರೆತರಲು ಅಗತ್ಯ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಮ್ಮೇಳನಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಉಚಿತವಾಗಿ ಮಾಡಲಾಗಿದೆ ಎಂದರು.
ಸರಕಾರದ ವಿವಿಧ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಇಲಾಖಾವಾರು ಮಾಹಿತಿ, ವಸ್ತುಪ್ರದರ್ಶನ ಮಳಗೆಗಳ್ನೂ ಸಹ ತೆರೆಯಲಾಗಿದ್ದು, ಸಮ್ಮೇಳನದಲ್ಲಿ ವಿವಿಧ ಸವಲತ್ತುಗಳನ್ನೂ ಸಹ ಫಲಾನುಭವಿಗಳಿಗೆ ವಿತರಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್, ಜಿಪಂ ಸಿಇಓ ಪ್ರಸನ್ನ ಎಚ್., ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಪ್ರೊಬೇಷನರಿ ಐಎಎಸ್ ಅಧಿಕಾರಿ ಯತೀಶ್ ಅವರು ಸಚಿವರ ಜೊತೆಗಿದ್ದು, ಕಾರ್ಯಕ್ರಮದ ಸಿದ್ಧತೆಗಳ ಪರಿಶೀಲನೆ ನಡೆಸಿದರು.