ಬ್ರಿಟನ್ ನಲ್ಲಿ ನೀಡಿರುವ ಹೇಳಿಕೆಗೆ ರಾಹುಲ್ ಗಾಂಧಿ ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ಹೊಸದಿಲ್ಲಿ: ಬ್ರಿಟನ್ ನಲ್ಲಿ ಭಾರತದ ಪ್ರಜಾಪ್ರಭುತ್ವದ ಕುರಿತಂತೆ ನೀಡಿರುವ ಹೇಳಿಕೆಗೆ ರಾಹುಲ್ ಗಾಂಧಿ ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ರಾಹುಲ್ ಕ್ಷಮೆಯಾಚನೆಗೆ ಒತ್ತಾಯಿಸುವವರು, ಮೋದಿ ತಮ್ಮ ಹೇಳಿಕೆ ಮೂಲಕ ವಿದೇಶಗಳಲ್ಲಿ ಭಾರತದ ಜನರನ್ನು ಅವಮಾನಿಸಿರುವ ಕುರಿತಾದ ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ ಎಂದರು.
ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಒತ್ತಾಯಿಸುವ ಜನರಿಗೆ ನಾನು ಒಂದು ಪ್ರಶ್ನೆಯನ್ನು ಕೇಳಲು ಬಯಸುವೆ. ಮೋದಿಯವರು ಐದಾರು ದೇಶಗಳಿಗೆ ಭೇಟಿ ನೀಡಿ, ಅಲ್ಲಿ ನಮ್ಮ ದೇಶದ ಜನರನ್ನು ಅವಮಾನಿಸಿದ ಹಾಗೂ ಭಾರತದಲ್ಲಿ ಹುಟ್ಟಿದ್ದು ಪಾಪ ಎಂದು ನೀಡಿರುವ ಹೇಳಿಕೆ ಬಗ್ಗೆ ನೀವು ಉತ್ತರಿಸಬೇಕು ಎಂದು ಖರ್ಗೆ ಒತ್ತಾಯಿಸಿದರು.
ಇಲ್ಲಿ ಪ್ರಜಾಪ್ರಭುತ್ವ ದುರ್ಬಲವಾಗುತ್ತಿದೆ. ಅಭಿವೃಕ್ತಿ ಹಾಗೂ ವಾಕ್ ಸ್ವಾತಂತ್ರ್ಯವನ್ನು ದುರ್ಬಲಗೊಳಿಸಲಾಗುತ್ತಿದೆ. ಟಿವಿ ಚಾನೆಲ್ ಗಳ ಮೇಲೆ ಒತ್ತಡ ಹೇರಲಾಗುತ್ತಿದೆ. ಸತ್ಯವನ್ನು ಮಾತನಾಡುವ ಜನರನ್ನು ಜೈಲಿಗೆ ಹಾಕಲಾಗುತ್ತಿದೆ. ಹಾಗಾದರೆ ಇದು ಪ್ರಜಾಪ್ರಭುತ್ವವನ್ನು ಅಂತ್ಯಗೊಳಿಸುವ ಪ್ರಕ್ರಿಯೆಯಲ್ಲದೆ ಮತ್ತೇನು? ಎಂದು ಖರ್ಗೆ ಪ್ರಶ್ನಿಸಿದ್ದಾರೆ.
ಭಾರತದಲ್ಲಿ ಪ್ರಜಾಪ್ರಭುತ್ವ ದಾಳಿಗೆ ಒಳಗಾಗಿದೆ ಎಂದು ಬ್ರಿಟನ್ ನಲ್ಲಿ ರಾಹುಲ್ ಗಾಂಧಿ ನೀಡಿರುವ ಹೇಳಿಕೆಯ ಕುರಿತಂತೆ ಕ್ಷಮೆಯಾಚಿಸಬೇಕೆಂದು ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ.







