ಪ್ರತಿಯೊಬ್ಬರು ಗ್ರಾಹಕರ ಹಕ್ಕುಗಳನ್ನು ತಿಳಿದಿರಬೇಕು: ನ್ಯಾ.ಶರ್ಮಿಳಾ
ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ

ಉಡುಪಿ : ಸಮಾಜದ ಪ್ರತಿಯೊಬ್ಬ ಪ್ರಜೆಯೂ ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳುವುದು ಅತಿ ಮುಖ್ಯ. ಪ್ರಪಂಚದಾದ್ಯಂತ ಇರುವ ವಸ್ತುಗಳು, ಸರಕುಗಳು ಮತ್ತು ಸೇವೆಗಳ ಮೌಲ್ಯ, ಸಮಗ್ರತೆ, ವೆಚ್ಚ ಹಾಗೂ ಅವುಗಳ ಗುಣಮಟ್ಟದ ಬಗ್ಗೆ ತಿಳಿದುಕೊಳ್ಳುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್. ಹೇಳಿದ್ದಾರೆ.
ನಗರದ ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾತ್, ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ, ಬಳಕೆದಾರರ ವೇದಿಕೆ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಇಂದು ನಡೆದ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಸಾಮಾಜಿಕ ಸಮಸ್ಯೆಗಳ ವಿರುದ್ಧ ಹೋರಾಡಲು ಗ್ರಾಹಕರನ್ನು ಸಬಲೀಕರಣಗೊಳಿಸುವುದು ಹಾಗೂ ಅವರ ಹಕ್ಕುಗಳ ಮತ್ತು ಬೇಡಿಕೆಗಳ ಬಗ್ಗೆ ಅರಿವು ಮೂಡಿಸಬೇಕು. ಸರಕಾರ ಗ್ರಾಹಕ ಸಂರಕ್ಷಣಾ ಕಾಯ್ದೆಯಡಿ ಸರಕುಗಳ ಕುರಿತು ವ್ಯಾಪಾರ ಮತ್ತು ಪ್ರಚಾರ ಮಾಡುವ ಹಕ್ಕನ್ನು ನೀಡಿದೆ. ಅದರ ಬಗ್ಗೆ ಗ್ರಾಹಕರು ಇನ್ನೂ ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದರು.
ಗ್ರಾಹಕರ ಸಂರಕ್ಷಣಾ ಕಾಯ್ದೆಯಡಿ ದೂರುಗಳನ್ನು ಪರಿಹರಿಸಲು ಯಾವುದೇ ರೀತಿಯ ದೂರುಗಳನ್ನು ಆಯಾ ಜಿಲ್ಲೆಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ನೀಡಬಹುದು. ಪ್ರತಿ ಗ್ರಾಹಕರು ಸರಕುಗಳ ಬಗ್ಗೆ ತಿಳಿದು ಕೊಳ್ಳುವ ಹಕ್ಕು, ಶಿಕ್ಷಣ ಮತ್ತು ವ್ಯವಹಾರದ ಜಾಗೃತಿ ಹಕ್ಕು, ಅವಧಿ ಮುಗಿದ ಸರಕುಗಳ ಬಗ್ಗೆ ದೂರು ನೀಡುವ ಹಕ್ಕುಗಳನ್ನು ಹೊಂದಿದ್ದಾರೆ ಎಂದರು.
ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಜಿಲ್ಲಾಧ್ಯಕ್ಷ ಸುನಿಲ್ ಟಿ ಮಾಸರೆಡ್ಡಿ ಮಾತನಾಡಿ, ೧೯೬೨ರಲ್ಲಿ ಅಂದಿನ ಅಮೇರಿಕಾದ ಅಧ್ಯಕ್ಷ ಜಾನ್ ಎಫ್. ಕೆನಡಿ ಗ್ರಾಹಕರ ಹಕ್ಕುಗಳನ್ನು ಜಾರಿಗೆ ತರುವಲ್ಲಿ ಪ್ರಮುಖರಾದರು. ಅಂದಿನಿಂದ ಮಾರ್ಚ್ ೧೫ನ್ನು ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಎಂದು ಆಚರಿಸಲು ಪ್ರಾರಂಭಿಸಲಾಯಿತು. ಈ ಕಾರ್ಯಕ್ರಮದ ಉದ್ದೇಶ ಗ್ರಾಹಕರಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದಾಗಿದೆ ಎಂದರು.
೨೦೧೯ರ ಕಾಯಿದೆ ಪ್ರಕಾರ ಗ್ರಾಹಕರು ಅವರ ದೂರುಗಳನ್ನು ಆನ್ಲೈನ್ ಮುಖಾಂತರ ಸಹ ನೀಡಬಹುದಾಗಿದೆ. ಪ್ರಕರಣ ದಾಖಲಿಸಿ ಅಂತಹವರಿಗೆ ಸೂಕ್ತ ನ್ಯಾಯವನ್ನು ಒದಗಿಸುತ್ತೇವೆ ಎಂದರು.
ಕಾರ್ಯಕ್ರಮದಲ್ಲಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಮಾಜಿ ಪ್ರಾಂಶುಪಾಲೆ ಸುರೇಖಾ, ಪ್ರಾಧ್ಯಾಪಕ ಕೆ.ನಾರಾಯಣ, ನಿರ್ದೇಶಕಿ ನಿರ್ಮಲಾ, ಬಳಕೆದಾರರ ವೇದಿಕೆಯ ಎ.ಪಿ ಕೊಡಂಚ, ಜಿಲ್ಲಾ ಗ್ರಾಹಕ ಪರಿಹಾರ ಆಯೋಗದ ಸದಸ್ಯೆ ಸುಜಾತಾ ಮತ್ತಿತರರು ಉಪಸ್ಥಿತರಿದ್ದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಪಿ.ಕೆ.ಬಿನೋಯ್ ಸ್ವಾಗತಿಸಿದರು. ಭಾರತೀಯ ವಿಕಾಸ ಟ್ರಸ್ಟ್ನ ಲಕ್ಷ್ಮೀಬಾಯಿ ನಿರೂಪಿಸಿದರು. ವಿಶ್ವಸ್ಥ ಹರಿಕೃಷ್ಣ ಶಿವತ್ತಾಯ ವಂದಿಸಿದರು.







