ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಸಮಾನತೆ ಸಾಧಿಸುವುದು ಅಗತ್ಯ: ಎಡಿಸಿ ವೀಣಾ

ಉಡುಪಿ: ಮಹಿಳೆಯರು ಈಗಾಗಲೇ ಶೇ.೭೦ರಷ್ಟು ವಿವಿಧ ಕ್ಷೇತ್ರಗಳಲ್ಲಿ ಸಮಾನತೆಯನ್ನು ಪಡೆದುಕೊಂಡಿದ್ದಾರೆ. ಬಾಕಿ ಉಳಿದ ಕ್ಷೇತ್ರ ಗಳಲ್ಲಿಯೂ ತಮ್ಮ ಕಾರ್ಯ ವ್ಯಾಪ್ತಿಯನ್ನು ಚಾಣಾಕ್ಷತನದಿಂದ ಸಮಾನತೆಯನ್ನು ಹೊಂದಲು ಮುಂದಾಗಬೇಕು ಎಂದು ಉಡುಪಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಹೇಳಿದ್ದಾರೆ.
ಉಡುಪಿ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಮಣಿಪಾಲದಲ್ಲಿರುವ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಮಹಿಳೆಯರು ಶಿಕ್ಷಣವಂತರಾಗುವುದರೊಂದಿಗೆ ಸಾಮಾಜಿಕವಾಗಿ, ಆರ್ಥಿಕ ವಾಗಿ ಮತ್ತು ರಾಜಕೀಯವಾಗಿ ಸಬಲರಾಗಿ ಎಲ್ಲಾ ರಂಗದಲ್ಲಿಯೂ ತೊಡಗಿಸಿ ಕೊಳ್ಳಬೇಕು. ತಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ಅರ್ಥೈಸಿಕೊಂಡು ನಿಷ್ಠೆಯಿಂದ ಕಾರ್ಯನಿರ್ವಹಿಸಬೇಕು. ಸಮಾಜದ ಕಟ್ಟುಪಾಡುಗಳ ಹೋಗಲಾಡಿಸಲು ಹೋರಾಟ ಮಾಡಿದ ಮಹಾನ್ ಮಹಿಳೆಯರನ್ನು ಆದರ್ಶವಾಗಿ ಇಟ್ಟುಕೊಳ್ಳ ಬೇಕು ಎಂದರು.
ಉಡುಪಿಯಲ್ಲಿ ಹಿಂದಿನಿಂದಲೂ ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲೂ ಪ್ರಾಧಾನ್ಯತೆ ನೀಡುತ್ತ ಬರಲಾಗುತ್ತಿದೆ. ಈಗಲೂ ಕೆಲವು ಭಾಗಗಳಲ್ಲಿ ಮಾತೃ ಪ್ರಧಾನ ಕುಟುಂಬ ವ್ಯವಸ್ಥೆಯನ್ನು ಕಾಣಬಹುದು. ಅತಿ ಹೆಚ್ಚು ಮಹಿಳಾ ಮತದಾರರನ್ನು ಹೊಂದಿರುವ ಕರ್ನಾಟಕದ ಮೊದಲ ಜಿಲ್ಲೆ ಉಡುಪಿಯಾಗಿದೆ ಎಂದು ಅವರು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್. ಮಾತನಾಡಿ, ಪ್ರಸ್ತುತ ಕಾಲದಲ್ಲಿ ಮಹಿಳೆಯರು ಅಡುಗೆ ಮನೆಯಿಂದ ಹಿಡಿದು ಬಾಹ್ಯಾಕಾಶ ಲೋಕದವರೆಗೂ ಕಾರ್ಯಕ್ಷೇತ್ರವನ್ನು ಹೊಂದುವುದರೊಂದಿಗೆ, ಎಲ್ಲಾ ರಂಗ ಕ್ಷೇತ್ರಗಳಲ್ಲೂ ಮಹಿಳೆಯರು ಗುರುತಿಸಿಕೊಳ್ಳುತ್ತಿದ್ದಾರೆ ಎಂದರು.
ಮೊದಲಿಗೆ ಮಹಿಳೆಯನ್ನು ನೋಡುವ ದೃಷ್ಟಿ ಬದಲಾಗಬೇಕು. ಈಗಲೂ ಮಹಿಳೆಯರ ಮೇಲೆ ಕೌಟುಂಬಿಕ ದೌರ್ಜನ್ಯ ಮತ್ತು ಪೋಕ್ಸೋಗಳಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಆದ್ದರಿಂದ ಮಹಿಳೆಯರು ಸಂವಿಧಾನ ಅಡಿಯಲ್ಲಿ ನೀಡುವ ಕಾನೂನುಗಳನ್ನು ದುರುಪಯೋಗ ಪಡಿಸಿಕೊಳ್ಳದೆ ಹೆಚ್ಚು ಸದು ಪಯೋಗ ಪಡೆದು ಕೊಳ್ಳಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ನ ಯೋಜನಾ ನಿರ್ದೇಶಕ ನವೀನ್ ಕುಮಾರ್ ಎಚ್.ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಜೀವಿನಿ ಮತ್ತು ಸ್ವ-ಸಹಾಯ ಗುಂಪುಗಳಲ್ಲಿ ಸಾಧನೆಗೈದ ಮಹಿಳಾ ಒಕ್ಕೂಟಗಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು.
ಜಿಪಂ ಉಪಕಾರ್ಯದರ್ಶಿ ಕಿರಣ್ ಪಡ್ನೇಕರ್, ಮುಖ್ಯ ಲೆಕ್ಕಾಧಿಕಾರಿ ಪ್ರಸನ್ನ, ಶಿಶು ಅಭಿವೃದ್ದಿ ಯೋಜನಾಧಿಕಾರಿ ವೀಣಾ, ಬೈಂದೂರು ಉನ್ನತಿ ಸಂಜೀವಿನಿ ತಾಲೂಕು ಮಟ್ಟದ ಸುಶೀಲಾ, ಹೆಬ್ರಿ ಸಂಜೀವಿನಿ ಮಟ್ಟದ ಕಲಾವತಿ, ಸ್ವರ್ಣ ಸಂಜೀವಿನಿ ಮಟ್ಟದ ಜಿಲ್ಲಾಧ್ಯಕ್ಷೆ ಲತಾ ಅಶೋಕ್ ಮೊದಲಾದವರು ಉಪಸ್ಥಿತರಿದ್ದರು.