ಮನೆಗೆ ನುಗ್ಗಿ ನಗದು, ಚಿನ್ನಾಭರಣ ಕಳವು ಪ್ರಕರಣ: ಆರೋಪಿಗೆ ಶಿಕ್ಷೆ
ಉಡುಪಿ, ಮಾ.23: ಮನೆಗೆ ನುಗ್ಗಿ ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಮ್. ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
2022ರ ಜೂನ್ 29ರಂದು ರಾತ್ರಿ ಸುಖೇಶ್ ನಾಯ್ಕ್ ಎಂಬಾತ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ಸಾಯಿಬಾಬ ನಗರದ ಅಡ್ಡರಸ್ತೆ ಯಲ್ಲಿರುವ ಸತ್ಯನಾರಾಯಣ ಹೆಗ್ಡೆ ಎಂಬವರ ಮನೆಗೆ ನುಗ್ಗಿ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಾಗೂ ಬೆಳ್ಳಿಯ ಪದಕಗಳನ್ನು ಕಳವು ಮಾಡಿದ್ದು, ಈ ಬಗ್ಗೆ ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶೆ ಶಕುಂತಲಾ ಅವರು ಆರೋಪಿ ಸುಖೇಶ್ ನಾಯ್ಕ್ಗೆ ಭಾ.ದಂ.ಸಂ.ಕಲಂ: ಕಲಂ: 457ರಡಿ 5 ವರ್ಷಗಳ ಕಠಿಣ ಸಜೆ ಮತ್ತು 5000 ರೂ. ದಂಡ, ಕಲಂ:380ರಡಿ 5 ವರ್ಷಗಳ ಕಠಿಣ ಸಜೆ ಮತ್ತು 5000ರೂ. ದಂಡ ಸೇರಿದಂತೆ ಒಟ್ಟು 10,000 ರೂ.ದಂಡ ಹಾಗೂ 10 ವರ್ಷಗಳ ಕಠಿಣ ಕಾರಾಗೃಹ ವಾಸ ಶಿಕ್ಷೆ, ದಂಡ ಪಾವತಿಸಲು ತಪ್ಪಿದಲ್ಲಿ ಒಂದು ವರ್ಷದ ಸಾಧಾರಣಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕಿ ಜಯಂತಿ ಕೆ. ವಾದ ಮಂಡಿಸಿದ್ದರು.