ಡಿ.ರೂಪಾ ವಿರುದ್ಧದ ನಿರ್ಬಂಧಕಾಜ್ಞೆ ತೆರವುಗೊಳಿಸಿದ ಹೈಕೋರ್ಟ್

ಬೆಂಗಳೂರು, ಎ.11: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಜಿಪಿಯಾಗಿರುವ ಐಪಿಎಸ್ ಅಧಿಕಾರಿ ಡಿ.ರೂಪಾ ಅವರು ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ನಿರ್ಬಂಧಕಾಜ್ಞೆ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ರೋಹಿಣಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡದಂತೆ ರೂಪಾಗೆ ನ್ಯಾಯಾಲಯ ಮಧ್ಯಂತರ ಆದೇಶ ನೀಡಿತ್ತು. ಇದನ್ನು ರೂಪಾ ಪ್ರಶ್ನಿಸಿದ್ದ ಹಿನ್ನಲೆಯಲ್ಲಿ ನ್ಯಾಯಾಲಯ ಪ್ರತಿಬಂಧಕಾಜ್ಞೆಯನ್ನು ತೆರವುಗೊಳಿಸಿದೆ. ಈ ಹಿಂದೆ ರೋಹಿಣಿ ಸಿಂಧೂರಿ ವಿರುದ್ಧ ರೂಪಾ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ದೂರು ಸಲ್ಲಿಸಿದ್ದರು.
ರೋಹಿಣಿ ವಿರುದ್ಧ ಇರುವ ಆರೋಪ ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಈ ವೇಳೆ ರೂಪಾ ಅವರಿಂದ ವೈಯಕ್ತಿಕ ಮಟ್ಟದಲ್ಲಿ ವಾಗ್ದಾಳಿಗೆ ತುತ್ತಾಗಿದ್ದ ರೋಹಿಣಿಗೆ ಕೋರ್ಟ್ ಮೂಲಕ ಬಿಗ್ ರಿಲೀಫ್ ಸಿಕ್ಕಿತ್ತು. ರೂಪಾಗೆ ಸೋಷಿಯಲ್ ಮೀಡಿಯಾ ಸೇರಿದಂತೆ ಯಾವುದೇ ರೀತಿಯ ಮಾಧ್ಯಮಗಳಲ್ಲಿ ರೋಹಿಣಿ ವಿರುದ್ಧ ಮಾನಹಾನಿಕರ ಹೇಳಿಕೆ, ಬರಹಗಳನ್ನು ಪೋಸ್ಟ್ ಮಾಡದಂತೆ ಕೋರ್ಟ್ ಮಧ್ಯಂತರ ತಡೆಯಾಜ್ಞೆ ವಿಧಿಸಿತ್ತು.





