ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಹಲವು ಮುಖಂಡರು: ಪಕ್ಷಕ್ಕೆ ಬರಮಾಡಿಕೊಂಡ ಡಿಕೆಶಿ, ಸಿದ್ದರಾಮಯ್ಯ

ಬೆಂಗಳೂರು: ರಾಜಾಜಿನಗರ ಕ್ಷೇತ್ರದ ಹಲವು ಬಿಜೆಪಿ ಮುಖಂಡರು ಬುಧವಾರ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ರಾಜಾಜಿನಗರ ಕ್ಷೇತ್ರದ ಸುಮಾರು 450 ನಾಯಕರು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಪಕ್ಷದ ಬಾವುಟವನ್ನು ನೀಡಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, 'ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ, ಅವರ ಪಕ್ಷದಲ್ಲಿ ಬಿರುಗಾಳಿ ಆರಂಭವಾಗಿದೆ. ಪರಿಣಾಮ ಸಾವಿರಾರು ಬಿಜೆಪಿ ನಾಯಕರು, ಕಾರ್ಯಕರ್ತರು ಆ ಪಕ್ಷ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಮೊದಲಿಗೆ ರಾಜಾಜಿನಗರ ಕ್ಷೇತ್ರದಿಂದ ಪಕ್ಷ ಸೇರ್ಪಡೆ ಕಾರ್ಯಕ್ರಮ ಆರಂಭಿಸುತ್ತಿದ್ದೇನೆ' ಎಂದು ತಿಳಿಸಿದರು.
'2014ರ ಲೋಕಸಭಾ ಚುನಾವಣೆ ಸಮಯದಲ್ಲಿ ಮೋದಿ ಅವರು ಮತದಾನ ಮಾಡುವ ಮುನ್ನ ಅಡುಗೆ ಅನಿಲ ಸಿಲಿಂಡರ್ ಗೆ ನಮಸ್ಕರಿಸಿ ಮತ ಹಾಕಿ ಎಂಬ ಸಂದೇಶ ನೀಡಿದ್ದರು. ಈ ಬಾರಿಯ ಚುನಾವಣೆಯಲ್ಲೂ ಅವರ ಮಾತಿನಂತೆ ನಾವು ನಮ್ಮ ಪಕ್ಷದ ಚುನಾವಣೆ ಪ್ರಚಾರ ಆರಂಭಿಸುವ ಮುನ್ನ ಅಡುಗೆ ಅನಿಲ ಸಿಲಿಂಡರ್ ಗೆ ನಮಿಸಲು ತೀರ್ಮಾನಿಸಿದ್ದೇವೆ. ಇದೇ ಪದ್ಧತಿಯನ್ನು ಬ್ಲಾಕ್ ಹಾಗೂ ಬೂತ್ ಮಟ್ಟದ ನಾಯಕರೂ ಪಾಲಿಸಬೇಕು ಎಂದು ಮನವಿ ಮಾಡುತ್ತೇನೆ. ಮತದಾರರು ಮತದಾನ ಮಾಡುವ ಮುನ್ನ ಇದೇ ರೀತಿ ನಮಿಸಿ ಮತದಾನ ಮಾಡಲಿ' ಎಂದು ಕರೆ ನೀಡಿದರು.
'ಇಂದು ಬಿಜೆಪಿಯಿಂದ ಪದ್ಮರಾಜ್, ಉಮೇಶ್ ಸೇರಿದಂತೆ ಸುಮಾರು 450 ನಾಯಕರು ಹಾಗೂ ಕಾರ್ಯಕರ್ತರು ಪಕ್ಷ ಸೇರುತ್ತಿದ್ದಾರೆ. ಈ ಎಲ್ಲರನ್ನು ಪಕ್ಷದ ಪರವಾಗಿ ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ಈ ಕ್ಷೇತ್ರ ನನಗೆ ಬಹಳ ಹತ್ತಿರವಾಗಿದೆ. ನಾನು ಓದಿದ ಕಾಲೇಜು ಇದೇ ಕ್ಷೇತ್ರದಲ್ಲಿದೆ. ಈ ಕ್ಷೇತ್ರದಲ್ಲಿ ನಾನು ಬೂತ್ ಮಟ್ಟದಲ್ಲಿ ಕೆಲಸ ಮಾಡಿದ್ದೆ. ಇಂದು ಬಿಜೆಪಿಯಿಂದ ಹಾಗೂ ಜೆಡಿಎಸ್ ಕಾಂಗ್ರೆಸ್ ಸೇರುತ್ತಿದ್ದು, ಮುಂದಿನ ದಿನಗಳಲ್ಲಿ ನಾನು ಹೆಸರು ಪ್ರಸ್ತಾಪಿಸುತ್ತೇನೆ' ಎಂದರು.
.jpeg)