ಎ.17 ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ಎ.17ರಂದು ನಾಮಪತ್ರ ಸಲ್ಲಿಸಲಿದ್ದು, ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ 241 ಬೂತುಗಳಿಂದ ಸುಮಾರು 25 ಸಾವಿರಕ್ಕೂ ಮಿಕ್ಕಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಾಜಿ ಶಾಸಕ ಕೆ. ವಸಂತ ಬಂಗೇರ ಹೇಳಿದರು.
ಅವರು ಎ.12ರಂದು ಬೆಳ್ತಂಗಡಿ ಗುರುನಾರಾಯಣ ಸಭಾ ಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಕಾಂಗ್ರೆಸ್ ಕಾರ್ಯಕರ್ತರ ಬಹಿರಂಗ ಚುನಾವಣಾ ಸಭೆ ನಡೆಯಲಿದೆ. ಸಭೆಯಲ್ಲಿ ಕೆಪಿಸಿಸಿ ಮಾಧ್ಯಮ ವಕ್ತಾರರಾದ ನಿಕೇತ್ ರಾಜ್ ಮೌರ್ಯರವರು ಪ್ರಧಾನ ಭಾಷಣ ಮಾಡಲಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಗಂಗಾಧರ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿ ಸೋಜ ಕೆಪಿಸಿಸಿ ಸಂಯೋಜಕರಾದ ಶಾಹಿದ್ ತೆಕ್ಕಿಲ್ಲ್ ಮತ್ತು ಜಿಲ್ಲಾ ಮುಟ್ಟದ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಭೆಯ ನಂತರ ಮೆರವಣಿಗೆಯಲ್ಲಿ ಬಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು. ಈಗಾಗಲೇ ಬೆಳ್ತಂಗಡಿ ತಾಲೂಕಿನ 241 ಬೂತುಗಳಲ್ಲಿ ಕಾರ್ಯಕರ್ತರು ಮತದಾರರ ಮನೆ, ಮನೆಗಳಿಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ನ್ನು ವಿತರಿಸಿದೆ. ಕಳೆದ ಭಾರಿ ಕಾಂಗ್ರೆಸ್ ತನ್ನ ಚುನಾವಣೆಯಲ್ಲಿ 165 ಆಶ್ವಾಸನೆಗಳನ್ನು ಘೋಷಿಸಿತ್ತು. ಸಿದ್ದರಾಮಯ್ಯ ನೇತೃತ್ವ ಸರಕಾರ 168 ಆಶ್ವಾಸನೆಗಳನ್ನು ಈಡೇರಿಸಿದೆ. ಈ ಬಾರಿ ಪ್ರತಿ ಮನೆಯ ಒಡತಿಗೆ ರೂ.2ಸಾವಿರ ನೀಡುವುದು, ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವುದು ಕಾಂಗ್ರೆಸ್ನ ಗ್ಯಾರಂಟಿಯಲ್ಲಿ ಸೇರಿದೆ. ಕಾಂಗ್ರೆಸ್ ನೀಡಿದ ಎಲ್ಲ ಭರವಸೆಗಳನ್ನೂ ಈಡೇರಿಸುವುದು ಖಚಿತ ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದರು.
ಬಿಜೆಪಿ ಈಗ ಬೇರೆ ಹೇಳಲು ವಿಚಾರವಿಲ್ಲದೆ ಇದು ಈಡೇರಿಸಲಾಗದ ಭರವಸೆ ಎಂದು ಹೇಳುತ್ತಿದ್ದಾರೆ ಅದು ಅವರಿಂದ ಆಗದ ಕೆಲಸ ಆದರೆ ಕಾಂಗ್ರೆಸ್ ಪಕ್ಷದಿಂದ ಸಾಧ್ಯವಾಗುತ್ತದೆ ಎಂದರು.
ಅಭ್ಯರ್ಥಿ ರಕ್ಷಿತ್ ಶಿವರಾಂ ಮಾತನಾಡಿ, ಕಾಂಗ್ರೆಸ್ ಕಾರ್ಯಕರ್ತರು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಎ.17ರಂದು ನಾಮಪತ್ರ ಸಲ್ಲಿಸುವ ಕಾರ್ಯಕ್ರಮ ನಡೆಯಲಿದ್ದು ಈ ಸಭೆಯಲ್ಲಿ ಆಶ್ಚರ್ಯಕರ ರೀತಿಯಲ್ಲಿ ಗ್ರಾಮ ಪಂಚಾಯತುಗಳ ಬಿಜೆಪಿ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿಸಿದರು. ಸುಮಾರು 25 ಸಾವಿರ ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸಿಲಿದ್ದಾರೆ, ಈ ಬಾರಿ ಬೆಳ್ತಂಗಡಿ ಯಲ್ಲಿ ನಡೆಯುತ್ತಿರುವುದು ಭ್ರಷ್ಟಾಚಾರದ ವಿರುದ್ಧದ ಸಂಗ್ರಾಮವಾಗಿದೆ. ಇದು 40 ಶೇ. ಕಮಿಷನ್ ವಿರುದ್ಧದ ಹೋರಾಟವಾಗಿದೆ, ಮರಳು ದಂಧೆಯ ವಿರುದ್ಧದ ಹೋರಾಟವಾಗಿದೆ, ಬೆಳ್ತಂಗಡಿಯ ಅಭಿವೃದ್ಧಿಗಾಗಿನ ಹೋರಾಟವಾಗಿದೆ ಇದರಲ್ಲಿ ಎಲ್ಲರೂ ಕೈ ಜೋಡಿಸುವಂತೆ ಕರೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್ ಮಾತನಾಡಿ ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ರಂಜನ್ ಜಿ. ಗೌಡ, ಪ್ರಮುಖರಾದ ಈಶ್ವರ ಭಟ್ ಮಾಯಿಲ್ತೋಡಿ, ಮನೋಹರ ಇಳಂತಿಲ, ರಾಜಶೇಖರ ಶೆಟ್ಟಿ ಮಡಂತ್ಯಾರು, ಸಲೀಂ ಗುರುವಾಯನಕೆರೆ, ಸೆಭಾಸ್ಟಿನ್ ಕಳೆಂಜ, ವಿನ್ಸೆಂಟ್ ಮಡಂತ್ಯಾರು, ಪದ್ಮನಾಭ ಸಾಲಿಯಾನ್ ಮಾಲಾಡಿ ಉಪಸ್ಥಿತರಿದ್ದರು.
ಸಿದ್ದರಾಮಯ್ಯ ಮುಖ್ಯ ಮಂತ್ರಿಯಾಗುವುದು ಖಚಿತ: ಬಂಗೇರ
ರಾಜ್ಯದಲ್ಲಿ ಬಿಜೆಪಿ ಈ ಬಾರಿ ಅಧಿಕಾರಕ್ಕೆ ಬರುವುದಿಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಲಿದ್ದಾರೆ ಅವರು ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಲಿದ್ದಾರೆ ಎಂದು ಬಂಗೇರ ಭವಿಷ್ಯ ನುಡಿದರು.