ಬಂಟ್ವಾಳ : ಎ. 20ರಂದು ರಮಾನಾಥ ರೈ ನಾಮಪತ್ರ ಸಲ್ಲಿಕೆ

ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಎ.20ರಂದು ನಾನು ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಬಿ. ರಮಾನಾಥ ರೈ ಹೇಳಿದರು.
ಅವರು ಬಿ.ಸಿ.ರೋಡಿನ ಕಾಂಗ್ರೆಸ್ ಪಕ್ಷದ ಚುನಾವಣಾ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲು ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನದಿಂದ ಬೆಳಿಗ್ಗೆ 9 ಗಂಟೆಗೆ ಪೂಜೆ ಸಲ್ಲಿಸಿ ಬಳಿಕ ಮೆರವಣಿಗೆ ಮೂಲಕ ಬಿಸಿರೋಡಿಗೆ ಬಂದು ಆಡಳಿತ ಸೌಧದ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ. ನಾಮಪತ್ರ ಸಲ್ಲಿಕೆಯ ದಿನ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಜೊತೆಯಲ್ಲಿ ಬರಬೇಕು ಎಂದು ಮನವಿ ಮಾಡಿದರು.
ಕೆಲಸ ಮಾಡದೆ ನಾನು ಸೋತಿಲ್ಲ, ಕೆಲಸ ಮಾಡಿಯೂ ಸೋಲಿಸಿದರು. ಸೋಲಿಗೆ ವಿರೋಧಿಗಳ ವ್ಯಾಪಕ ಅಪಪ್ರಚಾರ ಕಾರಣವಾಯಿತು. ನನಗೆ ಅದಕ್ಕೆ ಬೇಸರವಿಲ್ಲ, ಆದರೆ ಸೋಲಿಸಿದ ರೀತಿಗೆ ಬೇಸರವಿದೆ ಎಂದು ಬಿ.ರಮಾನಾಥ ರೈ ಅವರು ಹೇಳಿದರು. ಅದರೆ ಜನ ಈ ಬಾರಿ ಆಶಿರ್ವಾದ ಮಾಡುತ್ತಾರೆ ಎಂಬ ವಿಶ್ವಾಸವಿದೆ. ನನ್ನ ಶಾಸಕತ್ವದ ಸಂದರ್ಭದಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಜಿಲ್ಲೆಯಲ್ಲಿ ಗುರುತಿಸಲ್ಪಡುವ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕೆಲಸ ಆಗಿದೆ ಎಂದು ಅವರು ತಿಳಿಸಿದರು.
ಕಳೆದ ಬಾರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಹಾಗೂ ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಪಾರ್ಕ್, ಮಿನಿ ವಿಧಾನಸೌಧ, ಕೆ.ಎಸ್.ಆರ್.ಟಿ.ಸಿ, ನಿರೀಕ್ಷಣ ಮಂದಿರ ಸೇರಿದಂತೆ ಐದು ವರ್ಷದ ಅವಧಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಮಾಡಿದ್ದೇನೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಶೆಟ್ಟಿ, ಪ್ರಮುಖರಾದ ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್ ಮಾಯಿಲಪ್ಪ ಸಾಲ್ಯಾನ್, ಅಬ್ಬಾಸ್ ಆಲಿ, ಜಯಂತಿ ಪೂಜಾರಿ, ಮಹಮ್ಮದ್ ಶರೀಫ್, ಜನಾರ್ದನ ಚೆಂಡ್ತಿಮಾರ್, ಸುಭಾಶ್ಚಂದ್ರ ಶೆಟ್ಟಿ, ಉಮೇಶ್ ಸಪಲ್ಯ, ಸಂಜೀವ ಪೂಜಾರಿ, ನಾರಾಯಣ ನಾಯ್ಕ್ ,ವಾಸು ಪೂಜಾರಿ, ಸಿದ್ದೀಕ್ ಬೊಗೋಡಿ, ಸಿದ್ದೀಕ್ ಸರವು, ನ್ಯಾಯವಾದಿ ಗಳಾದ ಸುರೇಶ್ ಕುಲಾಲ್ ನಾವೂರು, ಉಮಾಕರ ಮತ್ತಿತರರು ಉಪಸ್ಥಿತರಿದ್ದರು.