ಚುನಾವಣಾ ಕಾರ್ಯದಲ್ಲಿ ಸಂಪೂರ್ಣ ಪಾರದರ್ಶಕತೆ ಇರಲಿ: ಪ್ರಾದೇಶಿಕ ಆಯುಕ್ತ ಪ್ರಕಾಶ್

ಉಡುಪಿ: ಮುಂಬರುವ ಚುನಾವಣಾ ಕಾರ್ಯಗಳನ್ನು ನಿರ್ವಹಿ ಸುವಾಗ ಸಂಪೂರ್ಣ ಪಾರದರ್ಶಕತೆಯನ್ನು ಕಾಪಾಡುವುದರಿಂದ ಅನಾವಶ್ಯಕ ದೂರುಗಳಿಂದ ದೂರವಿರಲು ಸಾಧ್ಯವಾಗುತ್ತದೆ ಎಂದು ಪ್ರಾದೇಶಿಕ ಆಯುಕ್ತ ಪ್ರಕಾಶ್ ಹೇಳಿದ್ದಾರೆ.
ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಚುನಾವಣಾ ಪೂರ್ವ ತಯಾರಿ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚುನಾವಣಾ ಕಾರ್ಯಗಳಿಗೆ ನಿಯೋಜನೆಗೊಂಡಿರುವ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿಯೂ ಚುನಾವಣಾ ಆಯೋಗ ಆಗಿಂದಾಗ್ಗೆ ನೀಡುವ ನಿರ್ದೇಶನಗಳನ್ನು ಹಾಗೂ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಿದಾಗ ಚುನಾವಣಾ ಕಾರ್ಯಗಳನ್ನು ಸರಳವಾಗಿ, ಸಮರ್ಥವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದರು.
ಪ್ರತಿಯೊಂದು ಮತದಾನ ಕೇಂದ್ರಗಳಲ್ಲಿಯೂ ಅಗತ್ಯ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ವಿದ್ಯುತ್ ಸಂಪರ್ಕ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸುವುದರ ಜೊತೆಗೆ ತುರ್ತು ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ನೀಡಲು ಹೆಲ್ತ್ ಕಿಟ್ಗಳನ್ನೂ ಸಹ ಹೊಂದಬೇಕು ಎಂದರು.
ಚುನಾವಣಾ ಕಾರ್ಯ ನಿರ್ವಹಿಸುತ್ತಿರುವವವರ ಬಗ್ಗೆ ದೂರುಗಳು ಬಂದಾಗ ಅವುಗಳ ಬಗ್ಗೆ ಸಾಕ್ಷ್ಯಾಧಾರಗಳನ್ನು ಪಡೆಯುವುದು ಅವಶ್ಯ. ಅನಾಮಧೇಯ ಪತ್ರಗಳಿಗೆ ಹೆಚ್ಚಿನ ಒತ್ತು ನೀಡುವುದು ಅವಶ್ಯವಲ್ಲ ಎಂದರು.
ಈ ಬಾರಿ ಚುನಾವಣಾ ಆಯೋಗವು 80 ವರ್ಷ ದಾಟಿದವರಿಗೆ, ಆಂಗವಿಕಲರಿಗೆ, ಕೋವಿಡ್ ಸೋಂಕಿತರಿಗೆ ಮನೆಯಿಂದಲೇ ಮತದಾನ ಮಾಡಲು ವಿಶೇಷ ಮತದಾನ ವ್ಯವಸ್ಥೆ ಕಲ್ಪಿಸಲಿದೆ. ಈ ಕಾರ್ಯಗಳನ್ನು ನಿರ್ವಹಿಸುವಾಗ ಎಲ್ಲಾ ಅಗತ್ಯ ಜಾಗೃತಿ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದರು.
ಮೇ 10ರಂದು ನಡೆಯುವ ಮತದಾನ ದಿನದಂದು ಪ್ರತಿಯೊಬ್ಬರೂ ಮತದಾನ ಕೇಂದ್ರಗಳಿಗೆ ತೆರಳಿ ಮತ ಚಲಾಯಿಸಬೇಕು ಎಂದ ಅವರು ಜಿಲ್ಲೆಯಲ್ಲಿ ಜಿಲ್ಲಾ ಸ್ವೀಪ್ ತಂಡ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದರು. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರು ಜಿಲ್ಲೆಯಲ್ಲಿ ಸುಗಮ ಚುನಾವಣೆಗೆ ಇದುವರೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ತರಬೇತಿ ನಿರತ ಐಎಎಸ್ ಅಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಎಎಸ್ಪಿ ಸಿದ್ದಲಿಂಗಪ್ಪ ಹಾಗೂ ಚುನಾವಣಾ ಕಾರ್ಯಕ್ಕೆ ನಿಯೋಜಿಸಿರುವ ವಿವಿಧ ನೋಡೆಲ್ ಅಧಿಕಾರಿಗಳು ಉಪಸ್ಥಿತರಿ ದ್ದರು.








