ಲಿಂಗಾಯತರು ಭ್ರಷ್ಟರು ಎಂದು ಎಲ್ಲಿಯೂ ಹೇಳಿಲ್ಲ, ಬೊಮ್ಮಾಯಿಗೆ ಮಾತ್ರ ಹೇಳಿದ್ದೆ: ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: 'ಬಿಜೆಪಿಯವರು ಲಿಂಗಾಯತ ಅಸ್ತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ ಎಂದು ಹೇಳಿದ್ದೆ, ನಾನು ಬಸವರಾಜ ಬೊಮ್ಮಾಯಿ ಅವರಿಗೆ ಸೀಮಿತವಾಗಿ ಭ್ರಷ್ಟ ಎಂದು ಹೇಳಿದ್ದೆ, ಲಿಂಗಾಯತರು ಭ್ರಷ್ಟರು ಎಂದು ಎಲ್ಲಿಯೂ ಹೇಳಿಲ್ಲ' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ವರುಣಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಲಿಂಗಾಯತರಲ್ಲಿ ಬಹಳಷ್ಟು ಮಂದಿ ಮುಖ್ಯಮಂತ್ರಿಗಳು ಅತ್ಯಂತ ಪ್ರಾಮಾಣಿಕರಿದ್ದರು. ವೀರೇಂದ್ರ ಪಾಟೀಲರು, ನಿಜಲಿಂಗಪ್ಪನವರು, ಜೆ.ಹೆಚ್ ಪಟೇಲರು ಇವರೆಲ್ಲ ಪ್ರಾಮಾಣಿಕರಾಗಿದ್ದರು ಆದರೆ ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭ್ರಷ್ಟರಿದ್ದಾರೆ ಎಂದು ಹೇಳಿದ್ದೆ' ಎಂದು ಸ್ಪಷ್ಟಪಡಿಸಿದರು.
'ಬಿಜೆಪಿಯವರು ನನ್ನ ಹೇಳಿಕೆಯನ್ನು ತಮಗೆ ಬೇಕಾದಂತೆ ತಿರುಚಿ ಚುನಾವಣೆ ಸಂದರ್ಭವಿರುವುದರಿಂದ ಅದರ ಲಾಭ ಪಡೆಯಲು ಪ್ರಯತ್ನ ಮಾಡುತ್ತಿದ್ದಾರೆ. ನನಗೆ ಲಿಂಗಾಯತ ಸಮುದಾಯದ ಬಗ್ಗೆ ಅಪಾರವಾದ ಗೌರವವಿದೆ. ಹಿಂದೆ ಬಹಳ ಜನ ಲಿಂಗಾಯತರು ಪ್ರಾಮಾಣಿಕ ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ್ದರು. ಆದರೆ ಬೊಮ್ಮಾಯಿ ಮಾತ್ರ ಭ್ರಷ್ಟರಾಗಿದ್ದಾರೆ' ಎಂದರು.
'ಲಿಂಗಾಯತರ ಬಗ್ಗೆ ನಮಗೆ ಗೌರವ ಇರುವುದರಿಂದಲೇ ಹೆಚ್ಚು ಟಿಕೆಟನ್ನು ಅವರಿಗೆ ನೀಡಿದ್ದೇವೆ. ಕಳೆದ ಬಾರಿ 47 ಲಿಂಗಾಯತ ಅಭ್ಯರ್ಥಿಗಳಿಗೆ ಪಕ್ಷದ ಟಿಕೆಟ್ ನೀಡಿದ್ದೆವು, ಈ ಬಾರಿ ಅದಕ್ಕಿಂತ ಹೆಚ್ಚು ಅಂದರೆ ಸುಮಾರು 52 - 53 ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದೇವೆ. ನಮ್ಮಲ್ಲಿ ಜಾತಿ ಮೇಲೆ ಮುಖ್ಯಮಂತ್ರಿಯ ತೀರ್ಮಾನ ಮಾಡುವುದಿಲ್ಲ, ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದು ನಮ್ಮಲ್ಲಿ ನಡೆದುಕೊಂಡುಬಂದ ಪದ್ಧತಿ. ಬಿಜೆಪಿಯವರು ಜಾತಿ ಮೇಲೆ ಮಾಡಿದರೆ ನಾವೇನು ಮಾಡೋಕಾಗಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದರು.







