ಮುಸ್ಲಿಂ ಮೀಸಲಾತಿ ರದ್ದುಗೊಳಿಸುತ್ತೇವೆ ಎಂದ ಅಮಿತ್ ಶಾ: ಅಸದುದ್ದೀನ್ ಉವೈಸಿ ಪ್ರತಿಕ್ರಿಯೆಯೇನು?
ಹೈದರಾಬಾದ್: ತೆಲಂಗಾಣ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸುವುದಾಗಿ ರವಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ ಎಂದು ndtv.com ವರದಿ ಮಾಡಿದೆ.
ಹೈದರಾಬಾದ್ ಬಳಿಯ ಚೆವೆಲ್ಲಾದಲ್ಲಿ ಆಯೋಜಿಸಲಾಗಿದ್ದ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಧಾರ್ಮಿಕ ಆಧಾರದ ಮೀಸಲಾತಿ ಅಸಾಂವಿಧಾನಿಕ ಎಂದು ವಾಗ್ದಾಳಿ ನಡೆಸಿದ್ದಾರೆ.
ತಮ್ಮ ಪಕ್ಷವೇನಾದರೂ ತೆಲಂಗಾಣ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಶೇ. 4ರಷ್ಟಿರುವ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿ, ಆ ಹಕ್ಕನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಹಂಚಿಕೆ ಮಾಡಲಾಗುವುದು. ಈ ಹಕ್ಕು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ್ದು ಎಂದು ಅಮಿತ್ ಶಾ ಪ್ರತಿಪಾದಿಸಿದ್ದಾರೆ.
ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಲಾಗುವುದು ಎಂಬ ಅಮಿತ್ ಶಾ ಭರವಸೆಗೆ ತಿರುಗೇಟು ನೀಡಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಉವೈಸಿ, ಮುಸ್ಲಿಂ ವಿರೋಧಿ ದ್ವೇಷ ಭಾಷಣ ಹೊರತುಪಡಿಸಿ ಬಿಜೆಪಿಯ ಬಳಿ ತೆಲಂಗಾಣಕ್ಕಾಗಿ ಯಾವುದೇ ದೂರದೃಷ್ಟಿಯಿಲ್ಲ ಎಂದು ಟೀಕಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಉವೈಸಿ, "ಮುಸ್ಲಿಂ ವಿರೋಧಿ ದ್ವೇಷ ಭಾಷಣ ಹೊರತುಪಡಿಸಿ ಬಿಜೆಪಿಯ ಬಳಿ ತೆಲಂಗಾಣಕ್ಕಾಗಿ ಯಾವುದೇ ದೂರದೃಷ್ಟಿಯಿಲ್ಲ. ಅವರೇನಿದ್ದರೂ ನಕಲಿ ಎನ್ಕೌಂಟರ್, ಹೈದರಾಬಾದ್ ಮೇಲೆ ಸರ್ಜಿಕಲ್ ಸ್ಟ್ರೈಕ್, ಕರ್ಫ್ಯೂಗಳು, ಅಪರಾಧಿಗಳು ಮತ್ತು ಬುಲ್ಡೋಜರ್ಗಳ ಬಿಡುಗಡೆಯನ್ನು ಮಾತ್ರ ಕೊಡುಗೆ ನೀಡಬಲ್ಲರು. ನೀವೇಕೆ ತೆಲಂಗಾಣ ಜನತೆಯನ್ನು ಇಷ್ಟು ದ್ವೇಷಿಸುತ್ತೀರಿ?" ಎಂದು ಪ್ರಶ್ನಿಸಿದ್ದಾರೆ.
ಮತ್ತೊಂದು ಟ್ವೀಟ್ನಲ್ಲಿ, "ನೀವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಲು ಅಷ್ಟು ಗಂಭೀರವಾಗಿದ್ದರೆ ಸಂವಿಧಾನಕ್ಕೆ ತಿದ್ದುಪಡಿ ತಂದು ಶೇ. 50ರ ಮಿತಿಯನ್ನು ತೆಗೆದು ಹಾಕಿ. ಹಿಂದುಳಿದ ಮುಸ್ಲಿಂ ಗುಂಪುಗಳಿಗೆ ಅನುಭವಜನ್ಯ ದತ್ತಾಂಶದ ಆಧಾರದಲ್ಲಿ ಮೀಸಲಾತಿ ಒದಗಿಸಲಾಗಿದೆ" ಎಂದು ಹೇಳಿದ್ದಾರೆ.
ಈ ವರ್ಷದ ಕೊನೆಯಲ್ಲಿ ತೆಲಂಗಾಣ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಕರ್ನಾಟಕ ರಾಜ್ಯದಲ್ಲೂ ಕೂಡಾ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ಶೇ. 4ರಷ್ಟಿರುವ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿತ್ತು.