ಲೋಕಾಯುಕ್ತ ದಾಳಿ: ಬಿಬಿಎಂಪಿ ಅಧಿಕಾರಿ ಮನೆಯಲ್ಲಿ 1.40 ಕೋಟಿ ರೂ.ನಗದು ಪತ್ತೆ

ಬೆಂಗಳೂರು, ಎ. 24: ಆದಾಯಕ್ಕಿಂತ ಅಧಿಕ ಸಂಪಾದನೆ ಆರೋಪ ಸಂಬಂಧ ರಾಜ್ಯದ ಎಂಟು ಕಡೆಗಳಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು, ಶೋಧ ಕಾರ್ಯ ಮುಂದುವರೆಸಿದ್ದು, ಈ ನಡುವೆ ಬಿಬಿಎಂಪಿ ಯಲಹಂಕ ವಲಯದ ನಗರ ಯೋಜನಾ ವಿಭಾಗದ ಸಹಾಯಕ ನಿರ್ದೇಶಕ ಗಂಗಾಧರಯ್ಯ ಅವರಿಗೆ ಸಂಬಂಧಿಸಿದ ಮೂರು ಸ್ಥಳಗಳಲ್ಲಿ 1.40 ಕೋಟಿ ರೂ. ನಗದು ಪತ್ತೆಯಾಗಿದೆ.
ಸೋಮವಾರ ಮುಂಜಾನೆ ಬೆಂಗಳೂರು, ದಾವಣಗೆರೆ, ಕೋಲಾರ, ಬೀದರ್, ಶಿವಮೊಗ್ಗ ,ಚಿತ್ರದುರ್ಗ ಸೇರಿದಂತೆ 8 ಜಿಲ್ಲೆಗಳಲ್ಲಿ 20ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದರು. ಪ್ರಮುಖವಾಗಿ ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ, ಎಇಇ ಟಿ.ಹನುಮಂತರಾಯ, ಬಸವಕಲ್ಯಾಣ ತಾಲೂಕಿನ ಮುಡಬಿಯ ಉಪತಹಶೀಲ್ದಾರ್ ವಿಜಯಕುಮಾರ್, ಬೀದರ್ನ ನೀರಾವರಿ ಇಲಾಖೆ ಇಇ ಸುರೇಶ್ ಮೇದಾ, ಕೋಲಾರದ ತಾಲೂಕು ಪಂಚಾಯಿತಿ ಕಾರ್ಯಪಾಲಕ ಅಭಿಯಂತರ ವೆಂಕಟೇಶಪ್ಪ, ನಿವೃತ್ತ ಡಿಸಿಎಫ್ ನಾಗರಾಜ್, ತಹಶೀಲ್ದಾರ್ ಎನ್.ಜೆ.ನಾಗರಾಜ ನಿವಾಸ, ಕಚೇರಿ ಹಾಗೂ ಇತರ ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ.
ನಗದು ಪತ್ತೆ: ಅದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಗಂಗಾಧರಯ್ಯ ವಿರುದ್ಧ ಪ್ರಕರಣ ದಾಖಲಿಸಿರುವ ಲೋಕಾಯುಕ್ತ ಪೊಲೀಸರು, ಬೆಂಗಳೂರಿನ ಏಳು ಸ್ಥಳಗಳ ಮೇಲೆ ದಾಳಿ ನಡೆಸಿದರು.
ಮೂರು ಸ್ಥಳಗಳಲ್ಲಿ 1.40 ಕೋಟಿ ನಗದು, ಯಲಹಂಕ, ಜೆ.ಸಿ.ನಗರ ಮತ್ತು ಹೆಬ್ಬಾಳದಲ್ಲಿ 12 ಫ್ಲ್ಯಾಟ್, ನೆಲಮಂಗಲದಲ್ಲಿ 1.5 ಕೋಟಿ ಮೌಲ್ಯದ 5 ಎಕರೆ ಜಮೀನು, ಮಲ್ಲೇಶ್ವರದಲ್ಲಿ 3.5 ಕೋಟಿ ಮೌಲ್ಯದ ನಿವೇಶನ ಹೊಂದಿರುವುದು ಪತ್ತೆಯಾಗಿದೆ. ಮನೆಯಲ್ಲಿ 1 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತದ ಅಧಿಕಾರಿಗಳು ತಿಳಿಸಿದ್ದಾರೆ.
ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಐ.ಎಂ.ನಾಗರಾಜ ಹಾಗೂ ಈ ಹಿಂದೆ ಶಿಕಾರಿಪುರ ತಹಶೀಲ್ದಾರ್ ಆಗಿದ್ದು, ಸದ್ಯ ಹೊಳಲ್ಕೆರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎನ್.ಜೆ.ನಾಗರಾಜ ಅವರ ಶಿವಮೊಗ್ಗ ಹಾಗೂ ಶಿಕಾರಿಪುರ ಮನೆ, ಕಚೇರಿ, ತೋಟದ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದರು.ಐ.ಎಂ.ನಾಗರಾಜ ನಾಲ್ಕು ತಿಂಗಳ ಹಿಂದಷ್ಟೇ ಅರಣ್ಯ ಇಲಾಖೆಯಿಂದ ನಿವೃತ್ತರಾಗಿದ್ದರು. ವಾರದ ಹಿಂದೆ ಶಿಕಾರಿಪುರದಲ್ಲಿ ಬಿ.ವೈ.ವಿಜಯೇಂದ್ರ ಅವರ ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿಗೆ ಸೇರ್ಪಡೆ ಆಗಿದ್ದರು ಎನ್ನಲಾಗಿದೆ.
ಕೋಲಾರ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ತಾಪಂ ಕಾರ್ಯಪಾಲಕ ಅಭಿಯಂತರ ವೆಂಕಟೇಶಪ್ಪ ಅವರ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.ಆನಂತರ, ಬಂಗಾರಪೇಟೆ ಪಟ್ಟಣದ ಮೂರು ಕಡೆ ಹಾಗೂ ಮುಳಬಾಗಿಲು ತಾಲೂಕಿನ ತಿಪ್ಪದೊಡ್ಡಿ ಗ್ರಾಮದ 2 ಕಡೆ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲಿಸಿದರು. ಈವೇಳೆ ಚಿನ್ನಾಭರಣ ಪತ್ತೆಯಾಗಿದೆ.
ಬಿಬಿಎಂಪಿ ಎಇಇ ಟಿ.ಹನುಮಂತರಾಯ ಅವರ ಬೆಂಗಳೂರಿನ ಮನೆ, ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬೋಚಾಪುರ ಗ್ರಾಮದ ಬಳಿಯ ಫಾರ್ಮ್ ಹೌಸ್ ಸೇರಿದಂತೆ ಹಲವು ಕಡೆ ಲೋಕಾಯುಕ್ತ ಎಸ್ಪಿ ವಾಸುದೇವ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.
ಅದೇ ರೀತಿ, ಬಸವಕಲ್ಯಾಣ ತಾಲೂಕಿನ ಮುಡಬಿಯ ಉಪ ತಹಶೀಲ್ದಾರ್ ವಿಜಯಕುಮಾರ್ ಸ್ವಾಮಿ ಮನೆಗಳ ಮೇಲೆ ದಾಳಿ ನಡೆದಿದೆ. ಜೊತೆಗೆ ಸಣ್ಣ ನೀರಾವರಿ ಇಲಾಖೆ ಇಇ ಸುರೇಶ್ ಮೇದಾ ಅವರ ಬೀದರ್ ಗುರುನಗರದ ಮನೆ, ನೌಬಾದ್ನ ಕಚೇರಿಯಲ್ಲಿ ಪರಿಶೀಲನೆ ನಡೆಯುತ್ತಿದೆ ಎಂದು ಹಿರಿಯ ಅಧಿಕಾರಿವೊಬ್ಬರು ಮಾಹಿತಿ ನೀಡಿದ್ದಾರೆ.
ಬಿಬಿಎಂಪಿ ಯಲಹಂಕ ವಲಯದ ನಗರ ಯೋಜನಾ ವಿಭಾಗದ ಸಹಾಯಕ ನಿರ್ದೇಶಕ ಗಂಗಾಧರಯ್ಯ ಅವರಿಗೆ ಸಂಬಂಧಿಸಿದ ಏಳು ಸ್ಥಳಗಳಲ್ಲಿ ದಾಳಿ ನಡೆಸಿದಾಗ 14 ಫ್ಲ್ಯಾಟ್ಗಳು, ನೆಲಮಂಗಲದಲ್ಲಿ 1.5 ಕೋಟಿ ಮೌಲ್ಯದ 5 ಎಕರೆ ಕೃಷಿ ಭೂಮಿ, 3.65 ಕೋಟಿ ಮೌಲ್ಯದ ಮಲ್ಲೇಶ್ವರ ನಿವೇಶನ. 2 ಲಾಕರ್, 1.431 ಕೆಜಿ ಚಿನ್ನಾಭರಣ, 8.7 ಕೆಜಿ ಬೆಳ್ಳಿ, 73 ಲಕ್ಷ ಮೌಲ್ಯದ ವಜ್ರಗಳು, 1.47 ಕೋಟಿ ನಗದು, ವಿದೇಶ ಕರೆನ್ಸಿ 10,298 ಡಾಲರ್ ಸೇರಿದಂತೆ ಇನ್ನಿತರೆ ದುಬಾರಿ ಬೆಲೆ ಬಾಳುವ ವಸ್ತುಗಳು ಪತ್ತೆಯಾಗಿವೆ.
ಜೆಸ್ಕಾಂ ಎಇಇ ಆಗಿರುವ ಹುಸೇನ್ ಸಾಬ್ ಅವರ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದ್ದು, ಸೋಮವಾರ ಬೆಳಗ್ಗೆ ಬೆಂಗಳೂರು ಮತ್ತು ಬಳ್ಳಾರಿಯ ಲೋಕಾಯುಕ್ತ ತಂಡಗಳು ಬಳ್ಳಾರಿ ಬುಡಾ ಕಾಂಪ್ಲೆಕ್ಸ್ನಲ್ಲಿರುವ ಕಚೇರಿ, ರಾಘವೇಂದ್ರ ಕಾಲೋನಿಯಲ್ಲಿರುವ ಮನೆ ಮತ್ತು ಹುಟ್ಟೂರು ಶಿಡಿಗಿನಮೊಳದಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.